ಉಪಚುನಾವಣೆ ಫಲಿತಾಂಶ: ಸಿದ್ದರಾಮಯ್ಯ ನುಡಿದ ಭವಿಷ್ಯ ನಿಜವಾಗುವುದೇ?
Recommended Video
ಕಲಬರುಗಿ, ಸೆ 30: ಡಿಸೆಂಬರ್ ಐದಕ್ಕೆ ನಿಗದಿಯಾಗಿರುವ ಹದಿನೈದು ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶದ ಬಗ್ಗೆ ಸಿಎಲ್ಪಿ ನಾಯಕ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ.
ನಗರದಲ್ಲಿ ಮಾತನಾಡುತ್ತಿದ್ದ ಸಿದ್ದರಾಮಯ್ಯ, " ಉಪಚುನಾವಣೆಯ ನಂತರ ಯಡಿಯೂರಪ್ಪ ರಾಜೀನಾಮೆ ನೀಡಲಿದ್ದು, ಬಿಜೆಪಿ ಸರಕಾರ ಪತನಗೊಳ್ಳಲಿದೆ" ಎಂದು ಹೇಳಿದ್ದಾರೆ.
ಖರ್ಗೆ ನಾಡಿನಲ್ಲಿ ಕುರುಬ ಸಮಾವೇಶ: ಇದೇನು ಸಿದ್ದರಾಮಯ್ಯ ಶಕ್ತಿ ಪ್ರದರ್ಶನವೋ?
ಕರ್ನಾಟಕ ಪ್ರದೇಶ ಕುರುಬರ ಸಂಘ, ಕಲಬುರಗಿ ಜಿಲ್ಲಾ ಘಟಕ ಹಾಗೂ ಕುರುಬ ಗೊಂಡ ನೌಕರರ ಸಂಘದ ವತಿಯಿಂದ ನಗರದಲ್ಲಿ ಆಯೋಜಿಸಲಾಗಿದ್ದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಸಿದ್ದರಾಮಯ್ಯ ಭಾಗವಹಿಸಿದ್ದರು.
" ಉಪಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚಿನ ಸ್ಥಾನ ಗೆಲ್ಲುವುದು ನಿಶ್ಚಿತ. ಬಹುಮತದ ಕೊರತೆಯಿಂದ ಬಿಜೆಪಿ ಸರಕಾರ ಬಿದ್ದುಹೋಗಲಿದೆ" ಎನ್ನುವ ವಿಶ್ವಾಸವನ್ನು ಸಿದ್ದರಾಮಯ್ಯ ವ್ಯಕ್ತಪಡಿಸಿದ್ದಾರೆ.
" ಬಿಜೆಪಿಯ ಅಣತಿಯಂತೆ ಚುನಾವಣಾ ಆಯೋಗ ಕೆಲಸ ಮಾಡುತ್ತಿರುವುದು ವಿಷಾದನೀಯ" ಎಂದು ಬೇಸರ ವ್ಯಕ್ತ ಪಡಿಸಿರುವ ಸಿದ್ದರಾಮಯ್ಯ, " ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವುದು ನಿಶ್ಚಿತ" ಎಂದು ಹೇಳಿದ್ದಾರೆ.
" ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ ದೇವೇಗೌಡ ಅವರು ಇನ್ನು ಮುಂದೆ ತಮ್ಮ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿ ಎಂದಿದ್ದಾರೆ. ಹೀಗಾಗಿ ಅವರ ಜೊತೆ ಹೇಗೆ ಮೈತ್ರಿ ಮಾಡಿಕೊಳ್ಳಲು ಸಾಧ್ಯ? ಕಾಂಗ್ರೆಸ್ ಪಕ್ಷ ಏಕಾಂಗಿಯಾಗಿಯೇ ಚುನಾವಣೆ ಎದುರಿಸಲಿದೆ " ಎಂದು ಸಿದ್ದರಾಮಯ್ಯ ಹೇಳಿದ್ದಾರೆ.