ಕಲಬುರಗಿ ಪ್ರವಾಹ; ರಕ್ಷಣಾ ಕಾರ್ಯಕ್ಕೆ ಸೇನೆ ನಿಯೋಜನೆ
ಕಲಬುರಗಿ, ಅಕ್ಟೋಬರ್ 18 : ಕಲಬುರಗಿ ಜಿಲ್ಲೆಯಲ್ಲಿ ಸುರಿದ ಮಳೆ, ಮಹಾರಾಷ್ಟ್ರದಿಂದ ಭಾರಿ ಪ್ರಮಾಣದಲ್ಲಿ ನೀರು ಹರಿದು ಬಂದ ಕಾರಣ ಕಲಬುರಗಿ ಜಿಲ್ಲೆಯಲ್ಲಿ ಪ್ರವಾಹ ಉಂಟಾಗಿದೆ. ಸಂಕಷ್ಟಕ್ಕೆ ಸಿಲುಕಿರುವ ಜನರ ರಕ್ಷಣೆಗಾಗಿ ಸೇನೆಯನ್ನು ನಿಯೋಜನೆ ಮಾಡಲಾಗಿದೆ.
ಶನಿವಾರ ರಾತ್ರಿ ಕಲಬುರಗಿಗೆ ಸೇನಾ ಪಡೆ ಆಗಮಿಸಿದೆ. ಸಿಕಂದ್ರಾಬಾದ್ನಿಂದ ಬಂದಿರುವ 98 ಯೋಧರ ಪಡೆ ಮೇಜರ್ ಮಾರ್ಟಿನ್ ಅರವಿಂದ ಅವರ ನೇತೃತ್ವದಲ್ಲಿ ಕಾರ್ಯ ನಿರ್ವಹಣೆ ಮಾಡಲಿದೆ. ಮೂರು ತಂಡಗಳಾಗಿ ಯೋಧರನ್ನು ಅಫಜಲಪುರ, ಜೇವರ್ಗಿ ಹಾಗೂ ಶಹಾಬಾದ ತಾಲೂಕಿನಲ್ಲಿ ಜನರ ರಕ್ಷಣೆಗೆ ನಿಯೋಜನೆ ಮಾಡಲಾಗಿದೆ.
ಕಲಬುರಗಿ ಅಪರ ಜಿಲ್ಲಾಧಿಕಾರಿ ಡಾ.ಶಂಕರ ವಣಿಕ್ಯಾಳ ಸೇನಾ ತುಕಡಿಯನ್ನು ಜಿಲ್ಲಾಡಳಿತ ಪರವಾಗಿ ಬರಮಾಡಿಕೊಂಡರು. ಕೋವಿಡ್ ಕಾರಣದಿಂದಾಗಿ ಎಲ್ಲಾ ಯೋಧರನ್ನು ಥರ್ಮಲ್ ಸ್ಕ್ಯಾನ್ ಮಾಡಲಾಯಿತು. ಭಾನುವಾರ ಬೆಳಗ್ಗೆಯಿಂದ ಯೋಧರು ಕಾರ್ಯಾಚರಣೆ ಆರಂಭಿಸಲಿದ್ದಾರೆ.

ಭೀಮಾ ನದಿ ಪ್ರವಾಹದಿಂದ ನಡುಗಡ್ಡೆಯಾಗಿರುವ ಅಫಜಲಪುರ ತಾಲೂಕಿನ ಉಡಚಣ ಗ್ರಾಮದಿಂದ ಶನಿವಾರ 225 ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗಿದೆ. ಎನ್. ಡಿ. ಆರ್. ಎಫ್, ಪೊಲೀಸ್, ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.
ಭೀಮಾ ಜಲಾನಯನ ಪ್ರದೇಶದಲ್ಲಿ ಹೆಚ್ಚು ಮಳೆಯಾಗುತ್ತಿದೆ. ಇದರಿಂದಾಗಿ ಮಹಾರಾಷ್ಟ್ರದ ಉಜನಿ ಮತ್ತು ವೀರ್ ಜಲಾಶಯದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ಭೀಮಾ ನದಿಗೆ ಬಿಡಲಾಗಿದೆ. ಇದರಿಂದಾಗಿ ಕಲಬುರಗಿ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಪ್ರವಾಹ ಉಂಟಾಗಿದೆ.
ಗುರುವಾರ ಸೊನ್ನ ಬ್ಯಾರೇಜಿನಿಂದ ನದಿಗೆ 2,23,000 ಕ್ಯುಸೆಕ್ ನೀರು ಹರಿಬಿಡಲಾಗಿತ್ತು. ಶುಕ್ರವಾರ 5 ಲಕ್ಷ ಕ್ಯುಸೆಕ್ ನೀರನ್ನು ಬಿಡಲಾಗಿತ್ತು. ಶನಿವಾರ ಬೆಳಗ್ಗೆ 8 ಗಂಟೆಗೆ 7.5 ಲಕ್ಷ ನೀರನ್ನು ಹರಿಬಿಡಲಾಗಿದೆ. ಭೀಮಾ ನದಿ ಅಪಾಯದ ಮಟ್ಟವನ್ನೂ ಮೀರಿ ಹರಿಯುತ್ತಿದೆ.
ಕಂದಾಯ ಸಚಿವ ಆರ್. ಅಶೋಕ ಶುಕ್ರವಾರ ಕಲಬುರಗಿ ಜಿಲ್ಲಾ ಪ್ರವಾಸ ಕೈಗೊಂಡಿದ್ದರು. ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಮಳೆ ಮತ್ತು ಪ್ರವಾಹದಿಂದ ಆದ ನಷ್ಟವನ್ನು ಪರಿಶೀಲಿಸಿದ್ದರು. ಜನರ ಜೊತೆ ಮಾತುಕತೆ ನಡೆಸಿದ್ದರು.
ಭೀಮಾ ನದಿಗೆ ಹೆಚ್ಚಿನ ನೀರನ್ನು ಬಿಡುತ್ತಿರುವುದರಿಂದ ಪ್ರವಾಹ ಉಂಟಾಗಿದೆ. ತೊಂದರೆಗೆ ಸಿಲುಕಿದ ಸಂತ್ರಸ್ಥರಿಗೆ ಆಶ್ರಯ ನೀಡಲು ಸ್ಥಾಪಿಸಲಾಗಿರುವ ಕಾಳಜಿ ಕೇಂದ್ರಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಜಿಲ್ಲಾಧಿಕಾರಿ ವಿ. ವಿ. ಜೋತ್ನ್ಯಾ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.












Click it and Unblock the Notifications