ಸಚಿವ ಸ್ಥಾನ: ಬಿಜೆಪಿ ನೂತನ ಪರಿಷತ್ ಸದಸ್ಯ ಸುನೀಲ್ ವಲ್ಯಾಪುರೆ ಸ್ಪಷ್ಟನೆ
ಕಲಬುರಗಿ, ಜೂ. 28: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲು ಬಹಳಷ್ಟು ಜನರು ಕಾರಣ. ಇದೀಗ ಒಬ್ಬೊಬ್ಬರಂತೆ ಅವರೆಲ್ಲರ ಋಣಸಂದಾಯಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮುಂದಾಗಿದ್ದಾರೆ. ಹೀಗೆ ಬಿಜೆಪಿ ಸರ್ಕಾರ ಬರಲು ಕಾರಣರಾಗಿದ್ದವರಿಗೆ ಪರಿಷತ್ ಸದಸ್ಯನ್ನಾಗಿ ಮಾಡುವ ಮೂಲಕ ಸಿಎಂ ಯಡಿಯೂರಪ್ಪ ಅವರು ಕೊಟ್ಟ ಮಾತನ್ನು ಉಳಿಸಿಕೊಂಡಿದ್ದಾರೆ.
ಪರಿಷತ್ ಸದಸ್ಯರಾದ ಎಂಟಿಬಿ ನಾಗರಾಜ್ ಹಾಗೂ ಆರ್. ಶಂಕರ್ ಅವರಿಗೆ ಮಂತ್ರಿ ಸ್ಥಾನದ ಭರವಸೆ ಸಿಕ್ಕಿದೆ. ಇದೇ ಸಂದರ್ಭದಲ್ಲಿ ಮತ್ತೊಬ್ಬ ಪರಿಷತ್ ಸದಸ್ಯ ಸುನೀಲ್ ವಲ್ಯಾಪುರೆ ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ ಎಂದಿದ್ದಾರೆ. ಆ ಮೂಲಕ ಯಡಿಯೂರಪ್ಪ ಅವರ ಮೇಲಿನ ಒತ್ತಡವನ್ನು ಸ್ವಲ್ಪ ಕಡಿಮೆ ಮಾಡಿದ್ದಾರೆ.
ವಿಧಾನ ಪರಿಷತ್ಗೆ ಎಲ್ಲ ಅಭ್ಯರ್ಥಿಗಳು ಅವಿರೋಧ ಆಯ್ಕೆ
ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ ಎಂದು ಬಿಜೆಪಿ ನೂತನ ಪರಿಷತ್ ಸದಸ್ಯ ಸುನೀಲ್ ವಲ್ಯಾಪುರೆ ಕಲಬುರಗಿಯಲ್ಲಿ ಹೇಳಿಕೆ ಕೊಟ್ಟಿದ್ದಾರೆ. ಕಲಬುರಗಿ ಜಿಲ್ಲೆಯಲ್ಲಿ 5 ಬಿಜೆಪಿ ಶಾಸಕರು ಇರುವುದರಿಂದ ಯಾರಿಗೆ ಸಚಿವ ಸ್ಥಾನ ನೀಡಿದರೂ ನನಗೆ ಸಂತೋಷ. ಕಲಬುರಗಿ ಜಿಲ್ಲೆಗೆ ಒಂದು ಸಚಿವ ಸ್ಥಾನ ನೀಡುವಂತೆ ಸಿಎಂ ಯಡಿಯೂರಪ್ಪ ಅವರ ಬಳಿ ಮನವಿ ಮಾಡುತ್ತೇನೆ.
ನಾನು ಚಿಂಚೋಳಿ ಕ್ಷೇತ್ರದ ಅಭಿವೃದ್ಧಿ ಕಡೆಗೆ ಹೆಚ್ಚಿನ ಗಮನ ಹರಿಸುವೆ ಎಂದಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹಾಲಿ ಸಂಸದ ಉಮೇಶ್ ಜಾಧವ್ ಎದುರು ಸೋತಿದ್ದರು. ಅದಾದ ಬಳಿಕ ಜಾಧವ್ ಅವರು ಶಾಸಕ ಸ್ಥಾನ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಕೊಟ್ಟು ಬಿಜೆಪಿ ಸೇರಿ ಸಂಸದರಾಗಿದ್ದಾರೆ. ನಂತರ ನಡೆದ ವಿಧಾನಸಭೆ ಉಪ ಚುನಾವಣೆಯಲ್ಲಿ ಚಿಂಚೋಳಿ ಕ್ಷೇತ್ರದ ಮಾಜಿ ಶಾಸಕ ಸುನೀಲ್ ವಲ್ಯಾಪುರೆ ಬದಲಿಗೆ ಸಂಸದ ಉಮೇಶ್ ಜಾಧವ್ ಪುತ್ರ ಅವಿನಾಶ್ ಜಾಧವ್ ಅವರು ಬಿಜೆಪಿ ಪಕ್ಷ ಸೇರಿ ಚುನಾವಣೆಯಲ್ಲಿ ಗೆಲವು ಸಾಧಿಸಿದ್ದರು.