'ಸರ್ಕಾರ ಬಿದ್ದರೆ ಬಿಜೆಪಿ ಸರ್ಕಾರ ರಚನೆಗೆ ಯತ್ನಿಸಲಿದೆ' : ಬಿಎಸ್ವೈ
ತಾಂಡೂರು(ತೆಲಂಗಾಣ)/ಚಿಂಚೋಳಿ, ಮೇ 15 : ಒಂದು ವೇಳೆ ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಉರುಳಿಬಿದ್ದರೆ ಹೊಸ ಸರ್ಕಾರ ರಚನೆಗೆ ನಾವು ಮುಂದಡಿ ಇಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದರು
ಯಡಿಯೂರಪ್ಪ ಸಿಎಂ ಆಗುವುದು ಕನಸು ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಯಡಿಯೂರಪ್ಪ, ಅವರು ಏನು ಹೇಳುತ್ತಾರೆ ಎಂಬುದರ ಬಗ್ಗೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ.
ಬೆಟ್ಟಿಂಗ್ ಬಜಾರ್ ನೀಡಿದ ಕೊನೆ ವರದಿ, ಮೋದಿಗೆ ಜಯ, ಆದರೆ...
ಅಷ್ಟಕ್ಕೂ ನಾನು ಸಿಎಂ ಆಗುತ್ತೇನೆಂದು ಎಲ್ಲಿಯೂ ಹೇಳಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ನಾವೇನೂ ಸನ್ಯಾಸಿಗಳಲ್ಲ. ಒಂದು ವೇಳೆ ಸರ್ಕಾರ ಬಿದ್ದರೆ ಹೊಸ ಸರ್ಕಾರ ರಚನೆಯ ಕೆಲಸವನ್ನು ನಾವು ಮಾಡುತ್ತೇವೆ. ಆದರೆ, ಸರ್ಕಾರದ ಪತನಕ್ಕೆ ನಾವು ಕೈ ಹಾಕುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಬಳಿಕ ಚಿಂಚೋಳಿ ವಿಧಾನಸಭಾ ಕ್ಷೇತ್ರದ ಮತದಾರರಾಗಿದ್ದು, ತಾಂಡೂರಿಗೆ ವಲಸೆ ಬಂದಿರುವ ಮತದಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಚುನಾವಣೆ ಸಂದರ್ಭದಲ್ಲಿ ಮಲ್ಲಿಕಾರ್ಜುನ ಖರ್ಗೆಯವರು ನೀಡಿರುವ ಹೇಳಿಕೆಗಳಿಗೆ ಯಾವುದೇ ಕಿಮ್ಮತ್ತಿಲ್ಲ. ಗಡಿಭಾಗದ ಜನರ ಸಮಸ್ಯೆ ಪರಿಹಾರಕ್ಕೆ ನಾವು ಬದ್ಧರಾಗಿದ್ದೇವೆ. ಕರ್ನಾಟಕದಲ್ಲಿ ಬದಲಾವಣೆ ಗಾಳಿ ಬೀಸುತ್ತಿದ್ದು, ಚುನಾವಣೆ ನಂತರ ವೀರಶೈವ ಸಮಸ್ಯೆಗಳಿಗೆ ಸ್ಪಂದಿಸುವುದಾಗಿ ಭರವಸೆ ನೀಡಿದರು.
ಕುಮಾರಸ್ವಾಮಿ ತುಘಲಕ್ ದರ್ಬಾರ್ ನಡೆಸಿದ್ದಾರೆ: ಯಡಿಯೂರಪ್ಪ
ಇದಕ್ಕೂ ಮುನ್ನ ತೆಲಂಗಾಣ ಲಿಂಗಾಯತ ಸಮುದಾಯದಿಂದ ಪೂರ್ಣಕುಂಭ ಸ್ವಾಗತವನ್ನು ಯಡಿಯೂರಪ್ಪ ಅವರಿಗೆ ಕೋರಲಾಯಿತು ಮತ್ತು ಸಮುದಾಯದ ಸಭೆಯಲ್ಲಿ ಅವರು ಪಾಲ್ಗೊಂಡರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಅರವಿಂದ ಲಿಂಬಾವಳಿ, ಬಿ.ಜಿ.ಪಾಟೀಲ್, ಶಶಿಲ್ ಜಿ.ನಮೋಶಿ ಸೇರಿದಂತೆ ಹಲವಾರು ಮುಖಂಡರು ಪಾಲ್ಗೊಂಡಿದ್ದರು.
ಚಿಂಚೋಳಿಯಲ್ಲಿ ಬಿಎಸ್ವೈ ಬಿರುಸಿನ ಪ್ರಚಾರ
ಬಿ.ಎಸ್.ಯಡಿಯೂರಪ್ಪ ಅವರು ಚಿಂಚೋಳಿಯಲ್ಲಿ ಬಿಜೆಪಿ ಅಧ್ಯರ್ಥಿ ಅವಿನಾಶ್ ಪರ ಮಿಂಚಿನ ಪ್ರಚಾರ ನಡೆಸಿದರು. ಈ ಹಿಂದೆ ಬಿಜೆಪಿ ಅಧಿಕಾರದಲ್ಲಿದ್ದಾಗ ಬಡ ಹೆಣ್ಣು ಮಕ್ಕಳಿಗೆ ಅನುಕೂಲವಾಗುವಂತೆ ಜಾರಿಗೆ ತರಲಾಗಿದ್ದ ಭಾಗ್ಯಲಕ್ಷ್ಮಿ ಯೋಜನೆಯನ್ನು ಹಾಲಿ ಇರುವ ಸಮ್ಮಿಶ್ರ ಸರ್ಕಾರ ಕೈಬಿಟ್ಟಿದೆ ಎಂದು ಕಿಡಿಕಾರಿದರು.
ಭಾಗ್ಯಲಕ್ಷ್ಮಿ ಯೋಜನೆಯನ್ನು ತರಲಾಗುವುದು
ಮತ್ತೆ ನಮ್ಮ ಸರ್ಕಾರ ಬಂದರೆ ಈ ಯೋಜನೆಯನ್ನು ಜಾರಿಗೆ ತರಲಾಗುತ್ತದೆ. ಈ ಹಿಂದೆ ನಮ್ಮ ಸರ್ಕಾರ ರೈತರಿಗೆಂದೇ ಪ್ರತ್ಯೇಕ ಬಜೆಟ್ ಮಾಡಿತ್ತು. ಬಂಜಾರ ನಿಗಮವನ್ನು ಸ್ಥಾಪಿಸುವ ಮೂಲಕ ಈ ಸಮುದಾಯದ ಶ್ರೇಯೋಭಿವೃದ್ಧಿಗೆ ಕ್ರಮ ಕೈಗೊಂಡಿತ್ತು. ಆದರೆ, ಕುಮಾರಸ್ವಾಮಿ ನೇತೃತ್ವದ ಸರ್ಕಾರ ರೈತರ ಸಾಲ ಮನ್ನಾ ಹೆಸರಲ್ಲಿ ಈ ಸಮುದಾಯಕ್ಕೆ ಮೋಸ ಮಾಡುತ್ತಿದೆ ಎಂದು ಆರೋಪಿಸಿದರು.
ರಾಜ್ಯದಲ್ಲಿ ರಾಜಕೀಯ ಧೃವೀಕರಣ
ರಾಜ್ಯದಲ್ಲಿ ಇರುವ ಸರ್ಕಾರ ಸತ್ತು ಹೋಗಿದೆ. ಈ ಸರ್ಕಾರಕ್ಕೆ ಬಡವರ, ದೀನ ದಲಿತರ, ಬರಪೀಡಿತ ಪ್ರದೇಶಗಳ ಜನರ ಬಗ್ಗೆ ಕಾಳಜಿ ಇಲ್ಲದಂತಾಗಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಅವಧಿಯಲ್ಲಿ ಆಡಳಿತ ನೆಲ ಕಚ್ಚಿದೆ ಎಂದು ಆರೋಪಿಸಿದ ಯಡಿಯೂರಪ್ಪ, ರಾಜ್ಯದಲ್ಲಿ ಸದ್ಯದಲ್ಲೇ ರಾಜಕೀಯ ಧೃವೀಕರಣವಾಗಲಿದೆ ಎಂದು ಭವಿಷ್ಯ ನುಡಿದರು.
ಈಗಿರುವ ಸರ್ಕಾರ ಖಜಾನೆಯನ್ನು ಲೂಟಿ ಮಾಡುತ್ತಿದೆ
ಈಗಿರುವ ಸರ್ಕಾರ ಖಜಾನೆಯನ್ನು ಲೂಟಿ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ಈ ಭಾಗದಲ್ಲಿ ಒಂದು ವರ್ಷದೊಳಗೆ ಸಕ್ಕರೆ ಕಾರ್ಖಾನೆ ಆರಂಭ ಮಾಡುತ್ತೇವೆ ಎಂದು ಭರವಸೆ ನೀಡಿದರು. ಕೇಂದ್ರದಲ್ಲಿ ಪ್ರಧಾನಿಯಾಗಿರುವ ನಮ್ಮೆಲ್ಲರ ನೆಚ್ಚಿನ ನಾಯಕ ನರೇಂದ್ರ ಮೋದಿಯವರು ನದಿಗಳನ್ನು ಜೋಡಣೆ ಮಾಡುವ ಕೆಲಸ ಮಾಡುತ್ತಿದ್ದಾರೆ. ಅವರ ಇಂತಹ ಹಲವಾರು ಕಾರ್ಯಗಳನ್ನು ದೇಶದ ಜನತೆ ಮುಕ್ತಕಂಠದಿಂದ ಶ್ಲಾಘಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸೂರ್ಯ-ಚಂದ್ರ ಇರುವುದು ಎಷ್ಟು ಸತ್ಯವೋ ನರೇಂದ್ರ ಮೋದಿಯವರು ಮತ್ತೆ ದೇಶದ ಪ್ರಧಾನಿಯಾಗಿ ಆಯ್ಕೆಯಾಗುವುದು ಅಷ್ಟೇ ಸತ್ಯ ಎಂದರು.