ಕಲಬುರಗಿ; ಬಿಸಿಯೂಟದ ಸಾಂಬಾರ್ಗೆ ಬಿದ್ದಿದ್ದ ವಿದ್ಯಾರ್ಥಿನಿ ಸಾವು
ಕಲಬುರಗಿ, ನವೆಂಬರ್ 20; ಅಫಜಲಪೂರ ತಾಲೂಕಿನ ಚಿಣಮಗೇರಾದಲ್ಲಿ ಸಾಂಬಾರಗೆ ಬಿದ್ದು ಗಾಯಗೊಂಡಿದ್ದ 2ನೇ ತರಗತಿ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾಳೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕಿ ಲಾಲಬಿ ನದಾಫ್ ಮತ್ತು ಸಹ ಶಿಕ್ಷಕ ರಾಜು ಚವ್ಹಾಣರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತ್ತು ಹಾಗೂ ಮುಖ್ಯ ಅಡುಗೆಯವರಾದ ಕಸ್ತೂರಿಬಾಯಿ ಎಂ. ತಳಕೇರಿ ವಜಾಗೊಳಿಸಲಾಗಿತ್ತು.
ಚಿಣಮಗೇರಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 2ನೇ ತರಗತಿ ವಿದ್ಯಾರ್ಥಿನಿ ಮಹಾಂತಮ್ಮ (8) ಭಾನುವಾರ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ನವೆಂಬರ್ 16ರಂದು ಬಿಸಿಯೂಟದ ಸಾಂಬಾರ್ಗೆ ಬಿದ್ದಿದ್ದ ವಿದ್ಯಾರ್ಥಿನಿಗೆ ಶೇ 50ರಷ್ಟು ಸುಟ್ಟಗಾಯಗಳಾಗಿತ್ತು.

ಸಾಂಬಾರ್ಗೆ ಬಿದ್ದಿದ್ದ ವಿದ್ಯಾರ್ಥಿನಿಯನ್ನು ತಕ್ಷಣ ಚೌಡಾಪೂರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ನಂತರ ಹೆಚ್ಚಿನ ಚಿಕಿತ್ಸೆಗೆ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಪೋಷಕರ ಕೋರಿಕೆ ಮೇರೆಗೆ ವಿದ್ಯಾರ್ಥಿನಿಯನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ವಜಾ ಮತ್ತು ಅಮಾನತು ಆದೇಶ; ವಿದ್ಯಾರ್ಥಿನಿ ಸಾಂಬಾರ್ಗೆ ಬಿದ್ದ ಪ್ರಕರಣವನ್ನು ಕಲಬುರಗಿ ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿತ್ತು. ಪ್ರಕರಣ ಸಂಬಂಧ ಜಿಲ್ಲಾ ಪಂಚಾಯತಿ ಸಿಇಒ ಭಂವರ್ ಸಿಂಗ್ ಮೀನಾ ವಿದ್ಯಾರ್ಥಿನಿಯ ಪೋಷಕರ ಜೊತೆ ಮಾತನಾಡಿ, ವಿದ್ಯಾರ್ಥಿನಿಗೆ ಉತ್ತಮ ಚಿಕಿತ್ಸೆ ನೀಡಲು ಕ್ರಮ ವಹಿಸಲಾಗಿದೆ. ಬಿಇಒ, ತಾಲೂಕಾ ಆರೋಗ್ಯ ಅಧಿಕಾರಿಗಳು, ಬಿಸಿಯೂಟ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿನಿ ಆರೋಗ್ಯ ಪರಿಶೀಲಿಸಿದಲ್ಲದೆ ನಿಗಾ ವಹಿಸಿದ್ದಾರೆ. ಯಾವುದೇ ಆತಂಕ ಪಡಬೇಕಿಲ್ಲ ಎಂದು ಹೇಳಿದ್ದರು.
ಬಿಸಿಯೂಟದ ಕರ್ತವ್ಯದಲ್ಲಿ ನಿರ್ಲಕ್ಷ್ಯ ವಹಿಸಿದ ಸಿಬ್ಬಂದಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಶುಕ್ರವಾರ ಬೆಳಗ್ಗೆ ಭರವಸೆ ನೀಡಿದ್ದರು. ಸಂಜೆ ಶಿಕ್ಷಕರ ಅಮಾನತ್ತು ಮತ್ತು ಅಡುಗೆಯವರ ವಜಾ ಆದೇಶ ಹೊರಡಿಸಲಾಗಿತ್ತು. ಶಾಲಾ ಶಿಕ್ಷಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಮತ್ತು ಬಿಸಿಯೂಟ ಯೋಜನೆಯ ನಿರ್ದೇಶಕರು ಪ್ರಕರಣ ಸಂಬಂಧ ವರದಿ ನೀಡುವಂತೆ ಜಿಲ್ಲಾ ಪಂಚಾಯತಿ ಸಿಇಒಗೆ ನಿರ್ದೇಶನ ನೀಡಿದ್ದರು.
ಚಿಣಮಗೇರಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 2ನೇ ತರಗತಿ ವಿದ್ಯಾರ್ಥಿನಿ ಬಿಸಿಯೂಟ ಬಡಿಸುವ ಸಂದರ್ಭದಲ್ಲಿ ಸಾಂಬಾರ್ಗೆ ಬಿದ್ದಿದ್ದಳು. ಪ್ರಕರಣದಲ್ಲಿ ಸುರಕ್ಷಿತವಾಗಿ ಬಿಸಿಯೂಟ ವಿತರಿಸದೆ ಕರ್ತವ್ಯ ನಿರ್ಲಕ್ಷ್ಯ ವಹಿಸಿದ ಆರೋಪದ ಮೇರೆಗೆ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕಿ ಲಾಲಬಿ ನದಾಫ್ ಮತ್ತು ಸಹ ಶಿಕ್ಷಕ ರಾಜು ಚವ್ಹಾಣರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತ್ತು ಹಾಗೂ ಮುಖ್ಯ ಅಡುಗೆಯವರಾದ ಕಸ್ತೂರಿಬಾಯಿ ಎಂ.ತಳಕೇರಿಯನ್ನು ವಜಾಗೊಳಿಸಿ ಡಿಡಿಪಿಐ ಮತ್ತು ತಾಲೂಕ ಪಂಚಾಯತಿ ಇಒ ಆದೇಶ ಹೊರಡಿಸಿದ್ದರು.
ಸುರಕ್ಷಿತ ಬಿಸಿಯೂಟ ವಿತರಣೆ ಮಾಡದಿರುವುದು ಗಂಭೀರ ಕರ್ತವ್ಯ ಲೋಪವಾಗಿದೆ. ಈ ಸಂಬಂಧ ಅಫಜಲಪೂರ ಬಿಇಒ ವರದಿ ಹಿನ್ನೆಲೆಯಲ್ಲಿ ಇಲಾಖಾ ವಿಚಾರಣೆ ಕಾಯ್ದಿರಿಸಿ ಕರ್ನಾಟಕ ಸೇವಾ ನಿಯಮಾವಳಿ (ವರ್ಗೀಕರಣ ನಿಯಂತ್ರಣ ಮತ್ತು ಅಪೀಲು) 1957ರ ನಿಯಮ 10(1)ರ ಪ್ರಕಾರ ಮುಖ್ಯ ಶಿಕ್ಷಕಿ ಲಾಲಬಿ ನದಾಫ್ ಮತ್ತು ಸಹ ಶಿಕ್ಷಕ ರಾಜು ಚವ್ಹಾಣರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತ್ತುಗೊಳಿಸಿ ಆದೇಶಿಸಲಾಗಿತ್ತು.
ಅಮಾನತ್ತಿನ ಅವಧಿಯಲ್ಲಿ ನೌಕರರು ಕರ್ನಾಟಕ ನಾಗರೀಕ ಸೇವಾ ನಿಯಮಾವಳಿ ನಿಯಮ 98(ಎ) ಪ್ರಕಾರ ಜೀವನಾಂಶ, ಭತ್ಯೆ ಪಡೆಯಲು ಅರ್ಹರಾಗಿದ್ದು, ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೇ ಕೇಂದ್ರ ಸ್ಥಾನ ಬಿಡತಕ್ಕದ್ದಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿತ್ತು.
ಈ ಪ್ರಕರಣದಲ್ಲಿ ಬಿಸಿಯೂಟ ವಿತರಣೆಗೆ ವ್ಯವಸ್ಥಿತ ಸುರಕ್ಷತಾ ಕ್ರಮ ಕೈಗೊಳ್ಳದೆ ಮತ್ತು ಗುರುವಾರ ಅನಧಿಕೃತ ಗೈರು ಹಾಜರಾದ ಹಿನ್ನೆಲೆಯಲ್ಲಿ ಕರ್ತವ್ಯ ನಿರ್ಲಕ್ಷ್ಯದ ಅರೋಪದ ಮೇರೆಗೆ ಶಾಲೆಯ ಮುಖ್ಯ ಅಡುಗೆಯವರಾದ ಕಸ್ತೂರಿಬಾಯಿ ಎಂ. ತಳಕೇರಿಯನ್ನು ಸಹ ತಕ್ಷಣದಿಂದಲೇ ಜಾರಿಗೆ ಬರುವಂತೆ ವಜಾಗೊಳಿಸಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರಮೇಶ ಸುಲ್ಫಿ ಆದೇಶಿಸಿದ್ದರು.












Click it and Unblock the Notifications