ಕಲಬುರಗಿ ಜಿಲ್ಲೆಯಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ಯಡಿಯೂರಪ್ಪ!
ಕಲಬುರ್ಗಿ, ಅ. 21:ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಕಲಬುರ್ಗಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳ ವೈಮಾನಿಕ ಸಮೀಕ್ಷೆ ಕೈಗೊಂಡರು. ಉತ್ತರ ಕರ್ನಾಟಕ ಭಾಗದಲ್ಲಿನ ಬೆಳಗಾವಿ, ವಿಜಯಪುರ, ರಾಯಚೂರು ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ಕಳೆದ 12 ದಿನಗಳಿಂದ ಸತತ ಮಳೆ ಹಾಗೂ ಪ್ರವಾಹದಿಂದ ಜನ ಜೀವನ ಅಸ್ತವ್ಯಸ್ತವಾಗಿದೆ.
ಸಾವಿರಾರು ಎಕರೆ ಪ್ರದೇಶದಲ್ಲಿನ ರೈತರ ಫಸಲು ಹಾನಿಗೆ ಈಡಾಗಿದ್ದು, ಲಕ್ಷಾಂತರ ಜನರ ಬದುಕು ಬೀದಿದೆ ಬಂದಿದೆ. ಇದೇ ಸಂದರ್ಭದಲ್ಲಿ ಆರ್ ಆರ್ ನಗರ ಹಾಗೂ ಶಿರಾ ವಿಧಾನಸಭಾ ಕ್ಷೇತ್ರಗಳ ಚುನಾವಣೆಯೂ ಬಂದಿದ್ದರಿಂದ ಪ್ರವಾಹ ಸಂತ್ರಸ್ಥರನ್ನು ಸರ್ಕಾರ ನಿರ್ಲಕ್ಷಿಸಿ ಚುನಾವಣಾ ಪ್ರಚಾರಕ್ಕೆ ಸಚಿವರು ಗಮನ ಕೊಟ್ಟಿದ್ದಾರೆಂದು ವಿರೋಧ ಪಕ್ಷಗಳ ನಾಯಕರು ಆರೋಪಿಸಿದ್ದರು. ಹೀಗಾಗಿ ಕಳೆದ ಅಕ್ಟೋಬರ್ 16 ರಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಅತಿವೃಷ್ಟಿಯಿಂದ ಸಂಕಷ್ಟಕ್ಕೆ ಸಿಲುಕಿರುವ 12 ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಸಿಇಒಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದ್ದರು. ಒತ್ತಡ ಹೆಚ್ಚಾದಾಗ ವೈಮಾನಿಕ ಸಮೀಕ್ಷೆ ಮಾಡುವುದಾಗಿ ತಿಳಿಸಿದ್ದರು.
ಮುಖ್ಯಮಂತ್ರಿ ಯಡಿಯೂರಪ್ಪ ವೈಮಾನಿಕ ಸಮೀಕ್ಷೆ ಆರಂಭ!
ಇಂದು ಕಲಬುರಗಿ, ರಾಯಚೂರು, ವಿಜಯಪುರ ಹಾಗೂ ಬೆಳಗಾವಿ ಜಿಲ್ಲೆಗಳ ವೈಮಾನಿಕ ಸಮೀಕ್ಷೆಯನ್ನು ಮಾಡುತ್ತಿದ್ದಾರೆ. ಈಗಾಗಲೇ ಕಲಬುರಗಿ ಜಿಲ್ಲೆಯ ವೈಮಾನಿಕ ಸಮೀಕ್ಷೆ ಮುಗಿದಿದ್ದು, ಅಧಿಕಾರಿಗಳ ಸಭೆಯಲ್ಲಿ ಸಿಎಂ ಭಾಗವಹಿಸಿದ್ದಾರೆ. ಸಮೀಕ್ಷೆಯ ಬಳಿಕ ಹೆಚ್ಚಿನ ನೆರವಿನ ಭರವಸೆಯನ್ನು ಯಡಿಯೂರಪ್ಪ ಕೊಟ್ಟಿದ್ದಾರೆ. ಜೊತೆಗೆ ಕೇಂದ್ರ ಸರ್ಕಾರಕ್ಕೂ ಈ ಬಗ್ಗೆ ಪ್ರಸ್ತಾವನೆ ಕಳುಹಿಸಲಿದ್ದಾರೆ.
ಗೃಹ ಸಚಿವ ಬಸವರಾಜ ಬೊಮ್ಮಾಯಿ, ಪಶು ಸಂಗೋಪನೆ ಸಚಿವ ಪ್ರಭು ಚೌಹಾಣ್ , ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತ ಮನೋಜ್ ರಾಜನ್ ವೈಮಾನಿಕ ಸಮೀಕ್ಷ ಸಂದರ್ಭದಲ್ಲಿ ಉಪಸ್ಥಿತರಿದ್ದರು.