ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವಕ್ಕೆ ಯಡಿಯೂರಪ್ಪ ಚಾಲನೆ!
ಬೆಂಗಳೂರು, ಸೆ. 17: ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಕಲಬುರಗಿಯಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಧ್ವಜಾರೋಹಣ ನೆರವೇರಿಸಿದರು.
ಕಲಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ, ಕೆಕೆಆರ್ ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ್ ರೇವೂರ್, ಎನ್.ಇ.ಕೆ.ಎಸ್.ಆರ್.ಟಿ.ಸಿ. ಅಧ್ಯಕ್ಷ ರಾಜಕುಮಾರ ಪಾಟೀಲ ತೇಲ್ಕೂರ, ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಮತ್ತು ಸಾಂಸ್ಕೃತಿಕ ಸಂಘದ ಅಧ್ಯಕ್ಷ ಹಾಗೂ ಮಾಜಿ ಸಂಸದ ಡಾ. ಬಸವರಾಜ ಪಾಟೀಲ ಸೇಡಂ, ಸಂಸದ ಡಾ. ಉಮೇಶ ಜಾಧವ್, ನಿಜಶರಣ ಅಂಬಿಗರ ಚೌಡಯ್ಯ ನಿಗಮದ ಅಧ್ಯಕ್ಷ ಬಾಬುರಾವ್ ಚಿಂಚನಸೂರ್, ಶಾಸಕರಾದ ಬಸವರಾಜ್ ಮತ್ತಿಮೂಡ, ಡಾ. ಅವಿನಾಶ್ ಜಾಧವ್, ವಿಧಾನ ಪರಿಷತ್ತಿನ ಸದಸ್ಯ ಬಿ.ಜಿ. ಪಾಟೀಲ್ ಉಪಸ್ಥಿತರಿದ್ದರು.
ಹೈದರಾಬಾದ್ ಕರ್ನಾಟಕವನ್ನು ಬಿಜೆಪಿ ಸರ್ಕಾರ ಬಂದ ಮೇಲೆ ಕಲ್ಯಾಣ ಕರ್ನಾಟಕ ಎಂದು ನಾಮಕರಣ ಮಾಡಿದೆ. ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಆರ್ಟಿಕಲ್ 371(j)ಗೆ ತಿದ್ದುಪಡಿಯ ಮೂಲಕ ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಸ್ಥಾನಮಾತ ಕೊಡಲಾಗಿತ್ತು. ಕಳೆದ ವರ್ಷದಿಂದ ರಾಜ್ಯ ಸರ್ಕಾರದ ವತಿಯಿಂದ ಕಲ್ಯಾಣ ಕರ್ನಾಟಕ ಉತ್ಸವವನ್ನು ಆಚರಿಸಲಾಗುತ್ತಿದೆ.
ಭಾರತವು ಸ್ವಾತಂತ್ರ್ಯ ಪಡೆದುಕೊಂಡ ಒಂದು ವರ್ಷದ ಬಳಿಕ ಅಂದರೆ 1948 ಸೆಪ್ಟಂಬರ್ 17 ರಂದು ಆಗಿನ ಕೇಂದ್ರ ಗೃಹಮಂತ್ರಿ ವಲ್ಲಭಭಾಯಿ ಪಟೇಲ್ ಅವರ ಕಠಿಣ ಕ್ರಮಗಳಿಂದ ಹೈದರಾಬಾದ್ ಸಂಸ್ಥಾನ ಭಾರತದ ಒಕ್ಕೂಟದಲ್ಲಿ ವಿಲಿನವಾಯಿತು. ಹೀಗಾಗಿ ಅಂದಿನಿಂದ ಪ್ರತಿ ವರ್ಷ ಸೆಪ್ಟಂಬರ್ 17ನ್ನು 'ಹೈದರಾಬಾದ್ ಕರ್ನಾಟಕ ವಿಮೋಚನಚಾ ದಿವ' ಎಂದು ಆಚರಿಸಲಾಗುತ್ತಿತ್ತು.
ಆದರೆ ಶರಣ ಪರಂಪರೆ ಹೊಂದಿರುವ ನಾಡಿಗೆ, ಜನರ ಒತ್ತಾಯದ ಮೇರೆಗೆ ಕಳೆದ ವರ್ಷ 'ಕಲ್ಯಾಣ ಕರ್ನಾಟಕ'ವೆಂದು ಮರುನಾಮಕರಣ ಮಾಡಲಾಗಿದೆ. ಜೊತೆಗೆ ಕಳೆದ ವರ್ಷದಿಂದ ಕಲ್ಯಾಣ ಕರ್ನಾಟಕ ಉತ್ಸವ ಆಚರಿಸಲಾಗುತ್ತಿದೆ. ಹೈದರಾಬಾದ್ ವಿಮೋಚನೆಗೆ ಬಿಗಿ ನಿಲುವು ತಾಳಿದ್ದ ಅಂದಿನ ಗೃಹಮಂತ್ರಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪ್ರತಿಮೆಯನ್ನು ನಿರ್ಮಾಣ ಮಾಡಲಾಗಿದೆ.