ಪ್ರವಾಹಪೀಡಿತ 4 ಜಿಲ್ಲೆಗಳಲ್ಲಿ ಅ.21ಕ್ಕೆ ಸಿಎಂ ವೈಮಾನಿಕ ಸಮೀಕ್ಷೆ
ಕಲಬುರಗಿ, ಅಕ್ಟೋಬರ್ 20: ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ವಾರದಿಂದ ಸುರಿಯುತ್ತಿರುವ ಭಾರೀ ಮಳೆ ಪ್ರವಾಹದ ಪರಿಸ್ಥಿತಿಯನ್ನು ತಂದೊಡ್ಡಿದೆ. ಜನರು ಸಂಕಷ್ಟದಲ್ಲಿ ಸಿಲುಕಿದ್ದು, ಸಾಕಷ್ಟು ಬೆಳೆ ಹಾನಿಯೂ ಸಂಭವಿಸಿದೆ.
ಮಳೆ ಮತ್ತು ಪ್ರವಾಹದಿಂದ ಜಿಲ್ಲೆಯಲ್ಲಿ ಉಂಟಾದ ಸಮಸ್ಯೆಗಳ ಕುರಿತು ಅರಿಯಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಕ್ಟೋಬರ್ 21 ರಂದು ಕಲಬುರಗಿ, ಯಾದಗಿರಿ, ರಾಯಚೂರು ಮತ್ತು ವಿಜಯಪುರ ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.
ಈ ಜಿಲ್ಲೆಗಳ ಸ್ಥಿತಿಗತಿಯನ್ನು ತಿಳಿಯಲು, ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲು ಇಲ್ಲವೆ ವೈಮಾನಿಕ ಸಮೀಕ್ಷೆ ನಡೆಸಲು ಜನಪ್ರತಿನಿಧಿಗಳು ಮುಖ್ಯಮಂತ್ರಿಗಳ ಮೇಲೆ ಒತ್ತಡ ಹೇರಿದ್ದು, ಇದಕ್ಕೆ ಸ್ಪಂದಿಸಿರುವ ಯಡಿಯೂರಪ್ಪನವರು ನಾಲ್ಕು ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿ ಮಾಹಿತಿ ಪಡೆಯಲಿದ್ದಾರೆ.
ಬಳಿಕ ಕಲಬುರಗಿಯಲ್ಲಿ, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಯ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಸಭೆ ನಡೆಸಿ ಸಮಸ್ಯೆಗಳ ಕುರಿತು ಮಾಹಿತಿ ಸಂಗ್ರಹಿಸಲಿರುವುದಾಗಿ ತಿಳಿದುಬಂದಿದೆ.

ಉತ್ತರ ಕರ್ನಾಟಕದ ಅನೇಕ ಜಿಲ್ಲೆಗಳು ಭಾರಿ ಮಳೆಯಿಂದ ನೆರೆ ಹಾವಳಿ ಎದುರಾಗಿದ್ದು, ಅ.21ರಂದು ಪ್ರವಾಹ ಉಂಟಾಗಿರುವ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದೇನೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಅಕ್ಟೋಬರ್ 19ರಂದು ಶಿವಮೊಗ್ಗದಲ್ಲಿ ಮಾಹಿತಿ ನೀಡಿದ್ದರು.












Click it and Unblock the Notifications