ಭಾರಿ ಮಳೆಗೆ ದಂಡೋತಿ ಸೇತುವೆಗೆ ಹಾನಿ: ದುರಸ್ತಿ ಕಾರ್ಯಕ್ಕೆ ಆಗ್ರಹಿಸಿದ ಶಾಸಕ ಪ್ರಿಯಾಂಕ್ ಖರ್ಗೆ
ಕಲಬುರಗಿ, ಅಕ್ಟೋಬರ್ 13: ಕಲ್ಯಾಣ ಕರ್ನಾಟಕದಲ್ಲಿ ಕಳೆದ ಒಂದು ವಾರದಿಂದ ಭಾರಿ ಮಳೆಯಾಗುತ್ತಿದ್ದು, ಬಹುತೇಕ ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿರುವುದರ ಜೊತೆಗೆ ರಸ್ತೆ ಹಾಗೂ ಮೂಲಭೂತ ಸೌಕರ್ಯಗಳಿಗೂ ಹಾನಿಯಾಗಿದೆ.
ಚಿತ್ತಾಪುರ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಈ ಬಗ್ಗೆ ಟ್ವೀಟ್ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಕಳೆದ 15 ದಿನಗಳಿಂದ ಮಳೆಯಾಗುತ್ತಿದೆ. ಇದರಿಂದ ರಸ್ತೆಗಳು, ಸೇತುವೆಗಳು ಹಾಳಾಗಿದ್ದರೂ ಸರ್ಕಾರ ಇನ್ನು ದುರಸ್ಥಿ ಕಾರ್ಯ ಕೈಗೊಂಡಿಲ್ಲ ಎಂದು ತಿಳಿಸಿದ್ದಾರೆ.
"ಕಳೆದ 15 ದಿನಗಳ ಹಿಂದೆ ಸುರಿದ ಭಾರಿ ಮಳೆಗೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ಕ್ಷೇತ್ರದ ಬಹುತೇಕ ರಸ್ತೆಗಳು ಹಾಳಾಗಿದ್ದವು. ಕಲಬುರಗಿ ಹಾಗೂ ಚಿತ್ತಾಪುರ ಸಂಪರ್ಕಿಸುವ ದಂಡೋತಿ ಸೇತುವೆಗೂ ಭಾರಿ ಹಾನಿಯಾದ ಪರಿಣಾಮ ವಾಹನಗಳು ಸಂಚರಿಸಲು ಸಾಧ್ಯವಾಗಿರಲಿಲ್ಲ.''

ಅನುದಾನ ಬಿಡುಗಡೆ ಮಾಡುವಂತೆ ಆಗ್ರಹ
""ವಾಹನಗಳು ಸಂಚರಿಸಲು ಅನುಕೂಲವಾಗುವಂತೆ ತಾತ್ಕಾಲಿಕ ದುರಸ್ಥಿ ಕಾಮಗಾರಿ ನಡೆಸಲಾಗಿತ್ತು. ಆದರೆ ಈಗ ಮತ್ತೊಮ್ಮೆ ಪ್ರಕೃತಿಯು ತನ್ನ ರೌದ್ರಾವತಾರ ತೋರಿದ್ದು, ದಂಡೋತಿ ಸೇತುವೆ ಸೇರಿದಂತೆ ಚಿತ್ತಾಪುರ ಕ್ಷೇತ್ರದ ಬಹುತೇಕ ರಸ್ತೆಗಳು ಹಾನಿಗೀಡಾಗಿವೆ'' ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.
ಚಿತ್ತಾಪುರ ಕ್ಷೇತ್ರದಲ್ಲಿ ರಸ್ತೆ ದುರಸ್ಥಿ ಹಾಗೂ ಮೂಲಭೂತ ಸೌಕರ್ಯಗಳ ಮರು ಸ್ಥಾಪನೆಗಾಗಿ ರಾಜ್ಯ ಸರ್ಕಾರವು ಆದಷ್ಟು ಶೀಘ್ರವಾಗಿ ಅನುದಾನ ಬಿಡುಗಡೆ ಮಾಡುವಂತೆ ಆಗ್ರಹಿಸಿದ್ದಾರೆ.

ಕೃಷ್ಣಾ ನದಿಗೆ ಅಪಾರ ಪ್ರಮಾಣದ ನೀರು ಬಿಡುಗಡೆ
ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಕಳೆದ ಒಂದು ವಾರದಿಂದ ಭಾರಿ ಮಳೆಯಾಗುತ್ತಿದ್ದು, ರಾಯಚೂರು ಜಿಲ್ಲೆಯ ನಾರಾಯಣಪುರ ಜಲಾಶಯದಿಂದ ಕೃಷ್ಣಾ ನದಿಗೆ ಅಪಾರ ಪ್ರಮಾಣದ ನೀರು ಹೊರಬಿಡಲಾಗಿದೆ. ಇದರಿಂದ ಪ್ರವಾಹ ಸ್ಥಿತಿ ಉಂಟಾಗಿದೆ.
ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಈಗಾಗಲೇ ಮಳೆಯಾಗುತ್ತಿದ್ದು, ಮುಂದುವರೆಯಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ,ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಕೊಡಗು, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.

ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ
ಉತ್ತರ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ನಾಲ್ಕೈದು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಮತ್ತೆ ಪ್ರವಾಹದಂತಹ ಪರಿಸ್ಥಿತಿ ತಲೆದೂರಿದೆ. ಕೃಷ್ಣಾ, ಡೋಣಿ, ಘಟಪ್ರಭಾ, ಮಲಪ್ರಭಾ, ಕಾಗಿಣಾ ನದಿಗಳು, ಬೆಣ್ಣಿಹಳ್ಳ, ಹಿರೇಹಳ್ಳಿ ತುಂಬಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಇದರಿಂದ ರಸ್ತೆ ಮತ್ತು ಸೇತುವೆಗಳಿಗೆ ಹಾನಿಯಾಗುತ್ತಿದೆ.

ಮುಂದಿನ ಮೂರು ದಿನ ಭಾರಿ ಮಳೆ
ರಾಜ್ಯದಲ್ಲಿ ಕಳೆದ ಮೂರು ದಿನದಿಂದ ಸುರಿಯುತ್ತಿರುವ ಅಬ್ಬರದ ಮಳೆ ಇನ್ನೂ ಮೂರು ದಿನ ಮುಂದುವರೆಯಲಿದ್ದು, ನಂತರ ಮಳೆಯ ಪ್ರಮಾಣ ಕಡಿಮೆಯಾಗಲಿದೆ. ಗುಡುಗು ಸಹಿತ ಭಾರಿ ಮಳೆ ನಿರೀಕ್ಷೆ ಇರುವ ಕಾರಣ ಅ.13, 14 ರಂದು ಕರಾವಳಿ ಜಿಲ್ಲೆಗಳಿಗೆ ಹಾಗೂ ಉತ್ತರ ಒಳನಾಡಿನ ಬೀದರ್, ಧಾರವಾಡ, ಬಾಗಲಕೋಟೆ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.












Click it and Unblock the Notifications