ಪ್ರವಾಹಕ್ಕೆ ಒಬ್ಬ ಅಧಿಕಾರಿ, ಇಬ್ಬರು ಸಿಬ್ಬಂದಿ ತಲೆದಂಡ!
ಕಲಬುರಗಿ, ಅ. 19: ಜಿಲ್ಲೆಯ ಭೀಮಾ ನದಿ ಪ್ರವಾಹದ ವಿಚಾರದಲ್ಲಿ ಕರ್ತವ್ಯ ಲೋಪವೆಸಗಿದ ಆರೋಪದ ಮೇಲೆ ಗ್ರೇಡ್-2 ತಹಶೀಲ್ದಾರ್ ಪ್ರಭಾಕರ್ ಖಜೂರೆ ಸೇರಿ ಮೂವರು ಸಿಬ್ಬಂದಿಯನ್ನು ಅಮಾನತು ಮಾಡಿ ಜಿಲ್ಲಾಧಿಕಾರಿ ವಿಜಯ ಜೋತ್ಸ್ನಾ ಅವರು ಆದೇಶ ಮಾಡಿದ್ದಾರೆ.
ಗ್ರೇಡ್-2 ತಹಶೀಲ್ದಾರ ಪ್ರಭಾಕರ ಖಜೂರಿ ಅವರನ್ನು ಅಫಜಲಪುರ ಪ್ರಕೃತಿ ವಿಕೋಪ ಕಾರ್ಯಕ್ಕೆ ನಿಯೋಜನೆ ಮಾಡಲಾಗಿತ್ತು. ಆದರೆ, ಹಿರಿಯ ಅಧಿಕಾರಿಗಳ ಅನುಮತಿ ಪಡೆಯದೇ ಕೇಂದ್ರ ಸ್ಥಾನವನ್ನು ಬಿಟ್ಟು ಹೋಗಿದ್ದದರು. ಇದೇ ಕಾರಣಕ್ಕೆ ಅವರನ್ನು ಅಮಾನತು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ವಿಜಯ ಜೋತ್ಸ್ನಾ ಆದೇಶದಲ್ಲಿ ತಿಳಿಸಿದ್ದಾರೆ.
ಇದರ ಜೊತೆಗೆ ಗಾಣಗಾಪುರ ಗ್ರಾಮ ಲೆಕ್ಕಾಧಿಕಾರಿ ಭಾಗೇಶ್ ಹಾಗು ಪಿಡಿಓ ಗುರುನಾಥ್ ಹರಿದಾಸ್ ಅವರನ್ನೂ ಕೂಡಾ ಅಮಾನತು ಮಾಡಲಾಗಿದೆ. ಅವರು ಕೂಡಾ ನೆರೆ ಪ್ರವಾಹವನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ವಿಫಲರಾಗಿದ್ದಾರೆಂದು ಜಿಲ್ಲಾಧಿಕಾರಿ ಅಮಾನತು ಆದೇಶದಲ್ಲಿ ತಿಳಿಸಿದ್ದಾರೆ.
ಪ್ರವಾಹ ಪೀಡಿತ ಪ್ರದೇಶಗಳಿಗೆ ನಿರಂತರವಾಗಿ ಭೇಟಿ ಕೊಡುತ್ತಿರುವ ವಿಜಯ ಜೋತ್ಸ್ನಾ ಅವರು, ಅಧಿಕಾರಿಗಳ ತಂಡದೊಂದಿಗೆ ಪ್ರವಾಹ ಪೀಡಿತ ಬಂದರವಾಡ ಗ್ರಾಮಕ್ಕೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು. ಇದೇ ಸಂದರ್ಭದಲ್ಲಿ ಕಾಳಜಿ ಕೇಂದ್ರಗಳಿಗೂ ಭೇಟಿ ನೀಡಿ, ಅಲ್ಲಿನ ಸಂತ್ರಸ್ತರನ್ನು ಭೇಟಿ ಮಾಡಿ ಸಮಸ್ಯೆ ಆಲಿಸಿದರು.