ಕಲಬುರಗಿಯಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಜನಜಾಗೃತಿ
ಕಲಬುರಗಿ, ಜುಲೈ 31 : 'ಮಾರಕ ಸಾಂಕ್ರಾಮಿಕ ರೋಗ ಡೆಂಗ್ಯೂ ಜ್ವರ ನಿಯಂತ್ರಿಸಬೇಕಾದರೆ ಮನೆಯಲ್ಲಿನ ನೀರಿನ ತೊಟ್ಟಿ, ಹಳೆ ಟೈರು ಹಾಗೂ ನೀರು ನಿಲ್ಲುವ ತಾಣಗಳನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು' ಎಂದು ಕಲಬುರಗಿ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರಜ್ಞ ಹಾಗೂ ಅಧೀಕ್ಷಕ ಡಾ.ಬಿ.ಎನ್.ಜೋಷಿ ಹೇಳಿದರು.
'ಡೆಂಗ್ಯೂ ವಿರೋಧಿ ಮಾಸಾಚರಣೆ' ಅಂಗವಾಗಿ ಕಲಬುರಗಿ ಜಿಲ್ಲಾ ಆಸ್ಪತ್ರೆಯಿಂದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿವರೆಗೆ ಜನ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು. ಡಾ.ಬಿ.ಎನ್.ಜೋಷಿ ಅವರು ಜಾಥಾಕ್ಕೆ ಚಾಲನೆ ನೀಡಿದರು.
'ನೀರಿನ ತಾಣಗಳನ್ನು ಪ್ರತಿ ವಾರಕ್ಕೊಮ್ಮೆ ಸ್ವಚ್ಛಗೊಳಿಸಿ ಪುನ: ನೀರು ತುಂಬಿಸಿಕೊಳ್ಳಬೇಕು. ಡೆಂಗ್ಯೂ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವಾರು ನಿಯಂತ್ರಣ ಕ್ರಮಗಳನ್ನು ಕೈಗೊಂಡಿದ್ದು, ಇದಕ್ಕೆ ಸಾರ್ವಜನಿಕರ ಸಹಕಾರವು ಅತ್ಯಗತ್ಯವಾಗಿದೆ' ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಮಾಧವರಾವ್ ಕೆ.ಪಾಟೀಲ ಮಾತನಾಡಿ, 'ಜಿಲ್ಲೆಯಲ್ಲಿ ಲಾರ್ವಾ ಸಮೀಕ್ಷೆ ಅಂಗವಾಗಿ ಸಾಂಕ್ರಾಮಿಕ ರೋಗಗಳು ಹರಡದಂತೆ ನಿರಂತರ ಹತೋಟಿ ಕ್ರಮ ಕೈಗೊಳ್ಳಲಾಗುತ್ತಿದೆ' ಎಂದು ಹೇಳಿದರು.
ಜಿಲ್ಲಾ ವಿಬಿಡಿ ಸಮಲೋಚಕ ಕರ್ಣಿಕ ಕೋರೆ ಮಾತನಾಡಿ 'ಡೆಂಗ್ಯೂ, ಚಿಕನ್ ಗುನ್ಯಾ, ಮಲೇರಿಯಾ, ಆನೆಕಾಲು ರೋಗಗಳ ಬಗ್ಗೆ ಮಕ್ಕಳಿಗೆ ಶಾಲಾ ಹಂತದಲ್ಲಿ ಆರೋಗ್ಯ ಶಿಕ್ಷಣ ನೀಡಲಾಗುತ್ತಿದೆ' ಎಂದು ತಿಳಿಸಿದರು.
ಜಿಲ್ಲಾ ಮಲೇರಿಯಾ ಅಧಿಕಾರಿ ಡಾ.ಬಸವರಾಜ ಗುಳಗಿ, ಜಿಲ್ಲಾ ಕೀಟಶಾಸ್ತ್ರಜ್ಞ ಚಾಮರಾಜ ಸೇರಿದಂತೆ ನರ್ಸಿಂಗ್ ವಿದ್ಯಾರ್ಥಿಗಳು ಜಾಥಾದಲ್ಲಿ ಭಾಗವಹಿಸಿದ್ದರು.











Click it and Unblock the Notifications