ಕಲಬುರಗಿ ಭೀಮಾ ನದಿ ಪಾತ್ರದ 148 ಗ್ರಾಮಗಳ ಸ್ಥಳಾಂತರಕ್ಕೆ ಸಿದ್ಧತೆ
ಕಲಬುರಗಿ, ಅಕ್ಟೋಬರ್ 15: ನಾಲ್ಕೈದು ದಿನಗಳಿಂದ ಎಡೆಬಿಡದೇ ಸುರಿಯುತ್ತಿರುವ ಭಾರೀ ಮಳೆಗೆ ಕಲಬುರಗಿ ಜಿಲ್ಲೆ ನಲುಗಿ ಹೋಗಿದೆ. ಜಿಲ್ಲೆಯಲ್ಲಿ ಮಳೆಯಿಂದಾಗಿ ಸಾಕಷ್ಟು ಹಾನಿಯಾಗಿದೆ. ಈ ನಡುವೆ ಮಹಾರಾಷ್ಟ್ರದ ಜಲಾಶಯಗಳಿಂದಲೂ ಭೀಮಾ ನದಿಗೆ ಹೆಚ್ಚಿನ ನೀರು ಹರಿದುಬರುತ್ತಿರುವುದು ಮತ್ತಷ್ಟು ಆತಂಕವನ್ನು ಉಂಟು ಮಾಡಿದೆ.
ಇದೀಗ ಜಿಲ್ಲೆಯ ಭೀಮಾ ನದಿ ಪಾತ್ರದ 148 ಗ್ರಾಮಗಳನ್ನು ಸ್ಥಳಾಂತರ ಮಾಡಲು ಜಿಲ್ಲಾಡಳಿತ ಮುಂದಾಗಿದೆ.
ಕಲಬುರಗಿ; 4819 ಮನೆಗೆ ಹಾನಿ, 48 ಕಾಳಜಿ ಕೇಂದ್ರ ಆರಂಭ
ಇದೀಗ ಜಲಾಶಯಗಳಿಂದ ಸುಮಾರು 7.50 ಲಕ್ಷ ಕ್ಯೂಸೆಕ್ ನೀರು ಬಿಡುಗಡೆಯಾಗುವ ಸಾಧ್ಯತೆ ಇದ್ದು, ಜಿಲ್ಲಾಡಳಿತ, ಗ್ರಾಮಗಳನ್ನು ಸ್ಥಳಾಂತರಗೊಳಿಸುವ ಆಲೋಚನೆಯಲ್ಲಿದೆ. ಜೇವರ್ಗಿ, ಚಿತ್ತಾಪುರ, ಅಫ್ಜಲಪುರ ಹಾಗೂ ಸೇಡಂ ತಾಲೂಕುಗಳಲ್ಲಿ ಕಟ್ಟೆಚ್ಚರ ವಹಿಸಲಾಗುತ್ತಿದೆ. ಭೀಮಾ ನದಿ ತೀರದ ಹಾಗೂ ಹಿನ್ನೀರಿನ ಜನರು ಸುರಕ್ಷಿತ ಪ್ರದೇಶಕ್ಕೆ ತೆರಳಲು ಜಿಲ್ಲಾಧಿಕಾರಿ ವಿ.ವಿ.ಜೋತ್ಸ್ನಾ ಮನವಿ ಮಾಡಿದ್ದಾರೆ.
ಜಿಲ್ಲೆಯಲ್ಲಿ ಹಾನಿ ಎಷ್ಟು: ಬುಧವಾರದ ತನಕ ಅಂದಾಜಿನ ಪ್ರಕಾರ ಜಿಲ್ಲೆಯ 4819 ಮನೆಗಳಿಗೆ ಪ್ರವಾಹದ ನೀರು ನುಗ್ಗಿ ಬಟ್ಟೆ, ಪಾತ್ರೆಗಳು ಹಾನಿಗೊಳಗಾಗಿವೆ. 1058 ಮನೆಗಳಿಗೆ ಭೀಕರವಾಗಿ ಮಳೆ ಹಾನಿ ಮಾಡಿದೆ. ಇದಲ್ಲದೆ 518 ಜಾನುವಾರಗಳು ಪ್ರಾಣ ಕಳೆದುಕೊಂಡಿವೆ. ಅಕ್ಟೋಬರ್ 16ರ ತನಕ ಕಲಬುರಗಿ ಜಿಲ್ಲೆಯಲ್ಲಿ ಹೆಚ್ಚು ಮಳೆ ಸುರಿಯುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜಿಲ್ಲೆಯಲ್ಲಿ 'ರೆಡ್ ಅಲರ್ಟ್' ಘೋಷಿಸಲಾಗಿದ್ದು ಜಿಲ್ಲಾಡಳಿತ ಜನರಿಗೆ ಎಚ್ಚರಿಕೆ ನೀಡಿದೆ.