3 ವಾರದಲ್ಲಿ ಶಹಾಬಾದ್ ಇಎಸ್ಐ ಆಸ್ಪತ್ರೆ ಕೋವಿಡ್ ಕೇರ್ ಸೆಂಟರ್
ಕಲಬುರಗಿ, ಮೇ 18; "ದಶಕಗಳಿಂದ ಕಾರ್ಯಾಚರಣೆ ಇಲ್ಲದೇ ಹಾಳು ಬಿದ್ದಿರುವ ಶಹಾಬಾದ್ ಇಎಸ್ಐ ಆಸ್ಪತ್ರೆಯನ್ನು ಮುಂದಿನ 3 ವಾರದಲ್ಲಿ ದುರಸ್ತಿ ಮಾಡಿಸಿ ಅಗತ್ಯ ಮೂಲಸೌಕರ್ಯ ಕಲ್ಪಿಸುವುದರ ಜೊತೆಗೆ ಕೋವಿಡ್ ಕೇರ್ ಸೆಂಟರ್ ಆಗಿ ಪರಿವರ್ತಿಸಲಾಗುವುದು" ಎಂದು ಗಣಿ ಮತ್ತು ಭೂ ವಿಜ್ಞಾನ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ ಹೇಳಿದ್ದಾರೆ.
ಸಚಿವರು ಸೋಮವಾರ ಶಹಾಬಾದ್-ವಾಡಿ ರಸ್ತೆಯಲ್ಲಿರುವ ಇಎಸ್ಐ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮಾತನಾಡಿದ ಅವರು, "ಕೋವಿಡ್ ಕೇರ್ ಸೆಂಟರ್ ಆರಂಭಿಸುವ ಕುರಿತಂತೆ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಜೊತೆ ಮಾತನಾಡಿದ್ದು, ಕಾರ್ಮಿಕ ಇಲಾಖೆಯಿಂದಲೇ ಆಸ್ಪತ್ರೆ ದುರಸ್ತಿ ಮಾಡಿಸಲಾಗುವುದು" ಎಂದರು.
ಕಲಬುರಗಿ; ಶಹಾಬಾದ್ ಇಎಸ್ಐ ಆಸ್ಪತ್ರೆ ಶೀಘ್ರವೇ ಕೋವಿಡ್ ಕೇರ್ ಸೆಂಟರ್
"ವೈದ್ಯಕೀಯ ಸಿಬ್ಬಂದಿ, ಔಷಧಿಗಳನ್ನು ಸಹ ನೀಡುವುದಾಗಿ ಅವರು ತಿಳಿಸಿದ್ದಾರೆ. ಹೀಗಾಗಿ ಪ್ಲೋರಿಂಗ್ ದುರಸ್ತಿ, ವಿದ್ಯುತ್ತೀಕರಣ, ಸುಣ್ಣ-ಬಣ್ಣ, ಬೋರವೆಲ್ ರೀಚಾರ್ಜ್ ಸೇರಿದಂತೆ ಸ್ವಚ್ಛತಾ ಕಾರ್ಯ ಸಮರೋಪಾದಿಯಲ್ಲಿ ಕೈಗೊಳ್ಳಬೇಕು" ಎಂದು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಕೋವಿಡ್ 2ನೇ ಅಲೆ; ಆರೋಗ್ಯ ಸಚಿವಾಲಯದ ಹೊಸ ಮಾರ್ಗಸೂಚಿ
"4.5 ಎಕರೆ ವಿಶಾಲ ಪ್ರದೇಶ ಮತ್ತು ಉತ್ತಮ ಹವಾಗುಣ ಹೊಂದಿರುವ ಇಲ್ಲಿ ಕೋವಿಡ್ ಕೇರ್ ಸೆಂಟರ್ ಮಾಡಲಾಗುತ್ತದೆ. ಸೆಂಟರ್ ಪ್ರಾರಂಭಿಸಲು ಬೇಕಾದ ವೈದ್ಯಕೀಯ ಉಪಕರಣಗಳು ಹಾಗೂ ಇನ್ನಿತರ ಮೂಲಸೌಕರ್ಯಗಳ ಅವಶ್ಯಕತೆ ಬಗ್ಗೆ ನನಗೆ ಪಟ್ಟಿ ಕೊಡಬೇಕು. ಇನ್ನೂ ಕೇಂದ್ರ ಸರ್ಕಾರದೊಂದಿಗೆ ಚರ್ಚಿಸಿ ಮುಂದಿನ 2 ತಿಂಗಳಿನಲ್ಲಿ ಇದನ್ನು ಪೂರ್ಣ ಪ್ರಮಾಣದ ಆಸ್ಪತ್ರೆಯಾಗಿ ಮಾರ್ಪಡಿಸಲು ಪ್ರಯತ್ನಿಸಲಾಗುವುದು" ಎಂದು ಸಚಿವರು ಭರವಸೆ ನೀಡಿದರು.
ಬಿಜಿಎಸ್ ಗ್ಲೋಬಲ್ ಕಾಲೇಜಿನಲ್ಲಿ ಕೋವಿಡ್ ಸೆಂಟರ್ ಉದ್ಘಾಟಿಸಿದ ಸಿಎಂ ಬಿಎಸ್ವೈ
ಲಸಿಕೆ ಕೊರತೆ ಇಲ್ಲ; "ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಮತ್ತು ಖಾಸಗಿ ಅಸ್ಪತ್ರೆಯಲ್ಲಿ ಆಕ್ಸಿಜನ್, ರೆಮಿಡಿಸಿವಿರ್ ಇಂಜೆಕ್ಷನ್ ಕೊರತೆಯಿಲ್ಲ. ಜಿಲ್ಲೆಯಲ್ಲಿ ರೆಮಿಡಿಸಿವಿರ್ ಕಾಳ ಸಂತೆಯಲ್ಲಿ ಮಾರಾಟಕ್ಕೆ ಕಡಿವಾಣ ಹಾಕಲಾಗಿದೆ. ತಮ್ಮ ಇಲಾಖೆಯಿಂದಲೆ ರಾಜ್ಯದ ಪ್ರತಿ ವಿಭಾಗದಲ್ಲಿ ಎರಡರಂತೆ 10 ಆಕ್ಸಿಜನ್ ಜನರೇಷನ್ ಪ್ಲ್ಯಾಂಟ್ ಸ್ಥಾಪಿಸಲಾಗುತ್ತಿದೆ. ಇದಲ್ಲದೆ 45 ಕೆ. ಎಲ್. ಸಾಮರ್ಥ್ಯದ 10 ಆಕ್ಸಿಜನ್ ಕಂಟೇನರ್ ಖರೀದಿಸಿ ಕಲಬುರಗಿ, ಬೆಂಗಳೂರು, ಮೈಸೂರು, ಬೆಳಗಾವಿ ಹಾಗೂ ಮಂಗಳೂರು ವಿಭಾಗಕ್ಕೆ ತಲಾ ಎರಡರಂತೆ ನೀಡಲಾಗುತ್ತಿದೆ" ಎಂದು ಮುರುಗೇಶ್ ನಿರಾಣಿ ಹೇಳಿದರು.
"ಬೋಯಿಂಗ್ ಇಂಡಿಯಾ ಸಂಸ್ಥೆಯು ಕಲಬುರಗಿ ಜಿಲ್ಲೆಯಲ್ಲಿ 250 ಆಕ್ಸಿಜನ್ ಬೆಡ್ ಆಸ್ಪತ್ರೆ ಸ್ಥಾಪಿಸಲು ಮುಂದೆ ಬಂದಿದ್ದು, ಪ್ರಸ್ತುತ ಜಾಗ ಹುಡುಕಾಟದಲ್ಲಿದ್ದೇವೆ. ಶಹಾಬಾದ್ ಇಎಸ್ಐ ಆಸ್ಪತ್ರೆ ಇದಕ್ಕೆ ಸೂಕ್ತವಾಗಿದ್ದು, ಇದನ್ನು 250 ಆಕ್ಸಿಜನ್ ಬೆಡ್ ಆಸ್ಪತ್ರೆಯಾಗಿ ಪರಿವರ್ತನೆಗೂ ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಲಾಗುತ್ತದೆ" ಎಂದರು.
ಆಸ್ಪತ್ರೆಯ ವಿವರ; ಲೋಕೋಪಯೋಗಿ ಇಲಾಖೆಯ ಸಹಾಯಕ ಅಭಿಯಂತರ ಅಣ್ಣೆಪ್ಪ ಕುದರಿ ಇಎಸ್ಐ ಆಸ್ಪತ್ರೆ ಕುರಿತು ಮಾತನಾಡಿದರು. "4.5 ಎಕರೆ ಪ್ರದೇಶ ವಿಸ್ತೀರ್ಣ ಹೊಂದಿರುವ ಈ ಆಸ್ಪತ್ರೆ 1997ರಲ್ಲಿ ನಿರ್ಮಾಣಗೊಂಡು 1998ರಲ್ಲಿ ಹೊರ ರೋಗಿ ಚಿಕಿತ್ಸೆಯೊಂದಿಗೆ ಆರಂಭಗೊಂಡಿತ್ತು. ಆರಂಭಿಕವಾಗಿ 120 ಹುದ್ದೆ ಭರ್ತಿ ಮಾಡಲು ಯೋಜಿಸಲಾಗಿತ್ತು. 30 ಹುದ್ದೆ ತುಂಭಲಾಗಿತ್ತು. ಸಿಬ್ಬಂದಿ ಕೊರತೆ ಮತ್ತು ಇತರೆ ಕಾರಣದಿಂದ 2005ರಲ್ಲಿ ಆಸ್ಪತ್ರೆ ಮುಚ್ಚಲಾಗಿದೆ" ಎಂದರು.