ಕಾಳಜಿ ಕೇಂದ್ರದಲ್ಲಿ ಸಂತ್ರಸ್ತರ ಜೊತೆ ಡಿಸಿ ಭೋಜನ
ಕಲಬುರಗಿ, ಅಕ್ಟೋಬರ್ 23 : ಕಲಬುರಗಿ ಜಿಲ್ಲೆಯಲ್ಲಿ ಮಳೆ, ಪ್ರವಾಹದ ಕಾರಣದಿಂದಾಗಿ ಸಂತ್ರಸ್ತರಾದ ಜನರಿಗಾಗಿ ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದೆ. ಕೇಂದ್ರದಲ್ಲಿ ಉತ್ತಮ ಆಹಾರ, ಮೂಲ ಸೌಕರ್ಯಗಳನ್ನು ಒದಗಿಸಬೇಕು ಎಂದು ಸೂಚನೆ ನೀಡಲಾಗಿದೆ.
ಶುಕ್ರವಾರ ಕಲಬುರಗಿ ಜಿಲ್ಲಾಧಿಕಾರಿ ವಿ. ವಿ. ಜ್ಯೋತ್ಸ್ನಾ ಜೇವರ್ಗಿ ತಾಲೂಕಿನ ನರಿಬೋಳ ಕಾಳಜಿ ಕೇಂದ್ರಕ್ಕೆ ಭೇಟಿದರು. ಸಂತ್ರಸ್ತರಿಗೆ ಕೇಂದ್ರದಲ್ಲಿ ನೀಡಲಾಗುವ ಆಹಾರವನ್ನು ಪರಿಶೀಲಿಸಿದರು. ಜನರ ಸಂಕಷ್ಟ ಆಲಿಸುತ್ತಾ ಅವರೊಂದಿಗೆ ಊಟ ಮಾಡಿದರು.
ಕಲಬುರಗಿ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಪ್ರವಾಹ ಇಳಿಮುಖವಾಗುತ್ತಿದೆ. ಆದರೆ, ನೆರೆಪೀಡಿತ ಪ್ರದೇಶಗಳಲ್ಲಿ ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆ ಇರುವುದರಿಂದ ಜಿಲ್ಲಾಡಳಿತ ಹಲವು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದರಿಂದ ಕಲಬುರಗಿ ಜಿಲ್ಲೆಯಲ್ಲಿ ಮಳೆಯಾಗಿತ್ತು. ಜಿಲ್ಲೆಯ ಪಕ್ಕದ ಮಹಾರಾಷ್ಟ್ರದಲ್ಲಿಯೂ ಹೆಚ್ಚಿನ ಮಳೆಯಾಗಿದ್ದರಿಂದ ಭೀಮಾ ನದಿಯಲ್ಲಿ ಪ್ರವಾಹ ಉಂಟಾಗಿತ್ತು. ಇದರಿಂದಾಗಿ ಹಲವು ಗ್ರಾಮಗಳು ಜಲಾವೃತವಾಗಿದ್ದವು.
"ಕುಡಿಯುವ ನೀರನ್ನು ಕುದಿಸಿ, ಆರಿಸಿ ಕುಡಿಯಬೇಕು ಹಾಗೂ ತಾಜಾ ಆಹಾರ ಪದಾರ್ಥಗಳನ್ನು ಸೇವಿಸಬೇಕೆಂದು" ಜಿಲ್ಲಾಧಿಕಾರಿ ವಾಸಿರೆಡ್ಡಿ ವಿಜಯಾ ಜ್ಯೋತ್ಸ್ನಾ ಅವರು ಜನರಿಗೆ ಸಲಹೆ ನೀಡಿದ್ದಾರೆ.

ಸಾಂಕ್ರಾಮಿಕ ರೋಗಗಳ ತಡೆಯುವ ಕುರಿತು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಜನತೆಗೆ ಡಂಗೂರ ಸಾರಿಸಿ ಅರಿವು ಮೂಡಿಸಲಾಗುತ್ತಿದೆ. ತಾಲೂಕು ಪಂಚಾಯಿತಿ, ಗ್ರಾಮ ಪಂಚಾಯತ್, ಗ್ರಾಮೀಣ ಮತ್ತು ನಗರ ಕುಡಿಯುವ ನೀರು ವಿಭಾಗ, ಮಹಾನಗರ ನಗರ ಪಾಲಿಕೆ, ನಗರಸಭೆ, ಪಟ್ಟಣ ಪಂಚಾಯ್ತಿ ವ್ಯಾಪ್ತಿಯಲ್ಲಿ ಹಾನಿಯಾಗಿರುವ ಪೈಪ್ಲೈನ್ ಸರಿಪಡಿಸಿ, ಸಮರ್ಪಕವಾಗಿ ಕುಡಿಯಲು ನೀರು ಪೂರೈಕೆ ಮಾಡಬೇಕು ಎಂದು ಸೂಚಿಸಲಾಗಿದೆ.
ಪ್ರವಾಹದಿಂದ ಗ್ರಾಮಗಳಲ್ಲಿ ನೀರು ತುಂಬಿಕೊಂಡಿತ್ತು. ನಿಂತ ನೀರಿನಿಂದ ಸೊಳ್ಳೆಗಳು ಉತ್ಪತ್ತಿಯಾಗುತ್ತವೆ. ಇಂತಹ ನೀರಿರುವ ಜಾಗಗಳಲ್ಲಿ ಬ್ಲೀಚಿಂಗ್ ಪೌಡರ್ ಸಿಂಪರಣೆ ಹಾಗೂ ಪಾಂಗಿಂಗ್ ಮಾಡುವ ಮೂಲಕ ಸೊಳ್ಳೆಗಳ ಉತ್ಪತ್ತಿ ತಡೆಯಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.












Click it and Unblock the Notifications