ಕನ್ನಡ ಸಾಹಿತ್ಯ ಸಮ್ಮೇಳನ ವೇದಿಕೆ ನಿರ್ಮಾಣಕ್ಕೆ ಚಾಲನೆ
ಕಲಬುರಗಿ, ಜನವರಿ 17 : 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ವೇದಿಕೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ಮಾಡಲಾಯಿತು. ಫೆಬ್ರವರಿ 5, 6 ಮತ್ತು 7 ರಂದು ಕನ್ನಡ ಸಾಹಿತ್ಯ ಸಮ್ಮೇಳನದ ಕಲಬುರಗಿಯಲ್ಲಿ ನಡೆಯಲಿದೆ.
ಗುಲಬರ್ಗಾ ವಿಶ್ವವಿದ್ಯಾಲಯದ ಆವರಣದಲ್ಲಿ ವೇದಿಕೆ ನಿರ್ಮಾಣ ಕಾರ್ಯಕ್ಕೆ ಶುಕ್ರವಾರ ಸಾಹಿತ್ಯ ಸಮ್ಮೇಳನದ ವೇದಿಕೆ ಸಮಿತಿ ಅಧ್ಯಕ್ಷರಾಗಿರುವ ಕಲಬುರಗಿ ದಕ್ಷಿಣ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಗುದ್ದಲಿ ಪೂಕೆ ಮಾಡಿದರು.
ವಿಶ್ವವಿದ್ಯಾಲಯದ ಇ.ಎಸ್.ಐ. ಕಟ್ಟಡ ಹಿಂಭಾಗದಲ್ಲಿ ಮುಖ್ಯ ವೇದಿಕೆ ನಿರ್ಮಾಣ ಮಾಡಲಾಗುತ್ತದೆ. ಅಭಿಜಿತ್ ಲಗ್ನ ಮುಹೂರ್ತದಲ್ಲಿ ಬೆಳಗ್ಗೆ 11.50 ರಿಂದ ಮಧ್ಯಾಹ್ನ 12.10 ಗಂಟೆ ವರೆಗೆ ಗುದ್ದಲಿ ಪೂಜೆ ನೇರವೇರಿಸಲಾಯಿತು.

ಸಮ್ಮೇಳನದ ಸ್ವಾಗತ ಸಮಿತಿಯ ಪ್ರಧಾನ ಸಂಚಾಲಕರು ಮತ್ತು ಕೋಶಾಧ್ಯಕ್ಷರಾಗಿರುವ ಜಿಲ್ಲಾಧಿಕಾರಿ ಶರತ್ ಬಿ. ಮಾತನಾಡಿ, "ಸಮ್ಮೇಳನ ವೇದಿಕೆ ಸೇರಿದಂತೆ ಇನ್ನಿತರ ಸಿವಿಲ್ ಕಾಮಗಾರಿಗಳಿಗೆ ಇಂದು ಅಧಿಕೃತ ಚಾಲನೆ ನೀಡಿದೆ. ಮುಖ್ಯ ವೇದಿಕೆಯಲ್ಲಿ ಸುಮಾರು 25,000 ಸಾವಿರ ಜನರು ಕುಳಿತುಕೊಳ್ಳುವಂತೆ ಪೆಂಡಾಲ್ ಹಾಕಲಾಗುತ್ತಿದೆ" ಎಂದರು.
ಸಾಹಿತ್ಯ ಸಮ್ಮೇಳನಕ್ಕಾಗಿ ಗುಲಬರ್ಗಾ ವಿಶ್ವವಿದ್ಯಾಲಯದ ಕಾರ್ಯಸೌಧದ ಮಹಾತ್ಮ ಗಾಂಧಿ ಸಭಾಂಗಣ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಸಭಾಂಗಣದಲ್ಲಿ ಎರಡು ಸಮನಾಂತರ ವೇದಿಕೆ ಸಹ ನಿರ್ಮಿಸಲಾಗುತ್ತಿದೆ.

"ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ರಾಜ್ಯ ಸರ್ಕಾರ ಅನುದಾನ ನೀಡಲಿದೆ. ಇದರ ಜೊತೆಯಲ್ಲಿ ಸ್ಥಳೀಯವಾಗಿ ಹಣವನ್ನು ಸಂಗ್ರಹಿಸಬೇಕಿದೆ. ಹಣ ದೇಣಿಗೆ ಕೊಡಿ ಎಂದು ಪರರಿಗೆ ಕೇಳುವ ಮುನ್ನ ನಾನು ಈಗಾಗಲೇ ಒಂದು ತಿಂಗಳ ವೇತನ 97,461 ರೂ. ನೀಡಿದ್ದೇನೆ" ಎಂದು ಜಿಲ್ಲಾಧಿಕಾರಿಗಳು ಹೇಳಿದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವೀರಭದ್ರ ಸಿಂಪಿ ಮಾತನಾಡಿ, "ಸುಮಾರು 30 ಎಕರೆ ಪ್ರದೇಶದಲ್ಲಿ ಮುಖ್ಯ ವೇದಿಕೆ ನಿರ್ಮಾಣ ಮಾಡಲಾಗುತ್ತಿದೆ. ಅಂದಾಜು 325 ಸಾವಿರ ಜನ ನೋಂದಣಿ ಮಾಡಿಕೊಳ್ಳುವ ನಿರೀಕ್ಷೆಯಿದೆ" ಎಂದು ತಿಳಿಸಿದರು.












Click it and Unblock the Notifications