ಕಲಬುರಗಿಯಲ್ಲಿ ಜೂನ್ 22ಕ್ಕೆ ಕುಮಾರಸ್ವಾಮಿ ಗ್ರಾಮ ವಾಸ್ತವ್ಯ
ಕಲಬುರಗಿ, ಜೂನ್ 16 : ಕಲಬುರಗಿ ಜಿಲ್ಲೆಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಗ್ರಾಮ ವಾಸ್ತವ್ಯಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಜೂನ್ 22ರಂದು ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳು ವಾಸ್ತವ್ಯ ಹೂಡಲಿದ್ದಾರೆ.
ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ ಅಪರ ಕಾರ್ಯದರ್ಶಿ ಬಿ.ಎನ್.ಕೃಷ್ಣಯ್ಯ ಅವರು ಗ್ರಾಮ ವಾಸ್ತವ್ಯಕ್ಕೆ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. 'ಗ್ರಾಮೀಣ ಮಟ್ಟದಲ್ಲಿ ತಳ ಹಂತದ ಸಮಸ್ಯೆಗಳನ್ನು ನೇರವಾಗಿ ಜನರಿಂದಲೆ ಪಡೆದು ಅದಕ್ಕೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ ಎಂದು ಹೇಳಿದರು.
ಜೂನ್ 22 ರಂದು ಕಲಬುರಗಿ ತಾಲೂಕಿನ ಹೇರೂರ(ಬಿ) ಗ್ರಾಮದಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ಗ್ರಾಮ ವಾಸ್ತವ್ಯ ಮಾಡಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ. ಬೆಳಗ್ಗೆ 10 ಗಂಟೆಗೆ ಹೇರೂರ(ಬಿ)ಗ್ರಾಮಕ್ಕೆ ಮುಖ್ಯಮಂತ್ರಿಗಳು ಆಗಮಿಸಲಿದ್ದಾರೆ.

ಆರಂಭದಲ್ಲಿ ವೇದಿಕೆ ಕಾರ್ಯಕ್ರಮ ಉದ್ಘಾಟಿಸಿ, ಸಾರ್ವಜನಿಕರ ಕುಂದುಕೊರತೆ ಅಹವಾಲು ಸ್ವೀಕಾರಕ್ಕೆ ಮುಂದಾಗುವರು. ನಂತರ ಸಂವಾದ ಕಾರ್ಯಕ್ರಮ ಮತ್ತು ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳೊಂದಿಗೆ ಚರ್ಚೆ ಮಾಡಲಿದ್ದಾರೆ.
ಸಂಜೆ 6 ಗಂಟೆಗೆ ಸ್ಥಳೀಯ ಕಲಾವಿದರು ಮತ್ತು ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮದ ನಂತರ ಮುಖ್ಯಮಂತ್ರಿಗಳು ರಾತ್ರಿ ಗ್ರಾಮದ ಶಾಲೆಯಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಗ್ರಾಮ ವಾಸ್ತವ್ಯದ ಸಂದರ್ಭದಲ್ಲಿ ಸಹಜವಾಗಿಯೇ ಸಾರ್ವಜನಿಕರಿಂದ ಸಮಸ್ಯೆಗಳ ಮಹಾಪೂರವೇ ಹರಿದು ಬರುವ ನಿರೀಕ್ಷೆಯಿದೆ.
ಕಲ್ಯಾಣ ಕಾರ್ಯಕ್ರಮಗಳು, ಸಾಲ ಮನ್ನಾ, ಉದ್ಯೋಗ, ರಸ್ತೆ, ಕುಡಿಯುವ ನೀರು, ಸಾಮಾಜಿಕ ಪಿಂಚಣಿ ವಿಷಯಗಳ ಕುರಿತಂತೆ ಪರಿಹಾರ ಕೋರಿ ಅರ್ಜಿ ಹೆಚ್ಚಿನ ಸಂಖ್ಯೆಯಲ್ಲಿ ಬರುವ ಸಾಧ್ಯತೆ ಇರುವುದರಿಂದ ಅದಕ್ಕೆಲ್ಲ ಪರಿಹಾರ ಕಲ್ಪಿಸಲು ಅಧಿಕಾರಿಗಳು ಸಿದ್ಧರಾಗಿರಬೇಕು ಎಂದು ಸೂಚಿಸಿದರು.
ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ್ ಮಾತನಾಡಿ, 'ಹೇರೂರ(ಬಿ) ಗ್ರಾಮದಲ್ಲಿ ನಡೆಯುವ ಮುಖ್ಯಮಂತ್ರಿಗಳ ಜನತಾ ದರ್ಶನಕ್ಕೆ ಜಿಲ್ಲೆಯ ವಿವಿಧ ಭಾಗಗಳಿಂದ ಸುಮಾರು 10 ಸಾವಿರ ಜನರು ಬರುವ ನಿರೀಕ್ಷೆ ಇದೆ. ಸಾರ್ವಜನಿಕ ಅಹವಾಲ ಸ್ವೀಕಾರಕ್ಕೆ ಇಲಾಖಾವಾರು ಪ್ರತ್ಯೇಕ ಸ್ಟಾಲ್ ವ್ಯವಸ್ಥೆ ಮಾಡಲಾಗುತ್ತದೆ. ಸ್ಥಳದಲ್ಲಿಯೆ ಅರ್ಜಿದಾರರಿಗೆ ಮುಖ್ಯಮಂತ್ರಿಗಳ ಸಚಿವಾಲಯದ ಸಿಬ್ಬಂದಿಯಿಂದ ಆನ್ಲೈನ್ ಸ್ವೀಕೃತಿ ಸಂಖ್ಯೆ ಸಹ ನೀಡಲಾಗುತ್ತದೆ' ಎಂದರು.
ಮುಖ್ಯಮಂತ್ರಿಗಳ ಪ್ರವಾಸ ಹಿನ್ನೆಲೆಯಲ್ಲಿ ಮುಂದಿನ ಒಂದು ವಾರಗಳ ಕಾಲ ಯಾವುದೇ ಅಧಿಕಾರಿ/ಸಿಬ್ಬಂದಿಗಳು ರಜೆ ಮೇಲೆ ತೆರಳುವಂತಿಲ್ಲ ಎಂದ ಜಿಲ್ಲಾಧಿಕಾರಿಗಳು ಈಗಾಗಲೇ ಸೂಚನೆ ನೀಡಿದ್ದಾರೆ. ರಜೆ ಮೇಲೆ ತೆರಳಿದ್ದಲ್ಲಿ ಕೂಡಲೆ ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಸೂಚನೆ ನೀಡಿದರು.












Click it and Unblock the Notifications