Who is that ಸಿದ್ದರಾಮಯ್ಯ, ಅವರೇನು ದೊಣ್ಣೆನಾಯಕನಾ? ಎಚ್ಡಿಕೆ ಆಕ್ರೋಶ
ಕಲಬುರಗಿ, ಅ 7: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ವಿರುದ್ದ ಆಕ್ರೋಶ ಹೊರಹಾಕಿದ್ದಾರೆ. "ನನ್ನ ಪಕ್ಷದ ನಿರ್ಧಾರ ನನ್ನದು, ಅದನ್ನು ಕೇಳೋಕೆ ಅವರ್ಯಾರು"ಎಂದು ಎಚ್ಡಿಕೆ ಪ್ರಶ್ನಿಸಿದ್ದಾರೆ.
ಸಿಂಧಗಿ ಮತ್ತು ಹಾನಗಲ್ ಉಪಚುನಾವಣೆಗೆ ಜೆಡಿಎಸ್ ಕಣಕ್ಕಿಳಿಸಿರುವ ಅಭ್ಯರ್ಥಿಯ ವಿಚಾರದಲ್ಲಿ ಸಿದ್ದರಾಮಯ್ಯನವರ ಪ್ರಶ್ನೆಗೆ ಕುಮಾರಸ್ವಾಮಿ ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಮತ ವಿಭಜನೆಗಾಗಿಯೇ ಕುಮಾರಸ್ವಾಮಿಯವರು ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದರು.
ಆರ್ಎಸ್ಎಸ್ ಬಗ್ಗೆ ಎಚ್ಡಿಕೆ ಇಂದು ಹೇಳಿದ್ದು, ಗೌಡ್ರು ಅಂದು ಹೇಳಿದ್ದು!
ಇತ್ತೀಚಿನ ದಿನಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಸಮನಾದ ಅಂತರ ಕಾಯ್ದುಕೊಳ್ಳುತ್ತಿರುವ ಕುಮಾರಸ್ವಾಮಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ವಿರುದ್ದವೂ ವಾಗ್ದಾಳಿ ನಡೆಸಿದ್ದರು. "ನೀವು ಎಷ್ಟು ಸಮುದಾಯಗಳಿಗೆ ಗೌರವ ಕೊಟ್ಟಿದ್ದೀರಿ? ನಿಮ್ಮ ಪಕ್ಷದ ದಲಿತ ಸಮಾಜದ ನಾಯಕರನ್ನು ಚುನಾವಣೆಯಲ್ಲಿ ಸೋಲಿಸಿದವರು ಯಾರು? ಪಟ್ಟಿ ದೊಡ್ಡದಾಗಿದೆ, ಒಮ್ಮೆ ನೋಡಿಕೊಳ್ಳಿ" ಎಂದು ಕುಮಾರಸ್ವಾಮಿ ಹೇಳಿದ್ದರು.
"ಕುಮಾರಸ್ವಾಮಿಯವರಿಗೆ ಚುನಾವಣೆಯ ಸಂದರ್ಭದಲ್ಲಿ ಅಲ್ಪಸಂಖ್ಯಾತರ ಬಗ್ಗೆ ಇನ್ನಿಲ್ಲದ ಪ್ರೇಮ ಉಕ್ಕಿ ಹರಿಯುತ್ತದೆ. ಅವರಿಗೆ ಮುಸ್ಲಿಮರ ಬಗ್ಗೆ ಕಾಳಜಿಯಿದ್ದರೆ, ಹಳೇ ಮೈಸೂರು ಭಾಗದಲ್ಲಿ ಪಕ್ಷದ ಟಿಕೆಟ್ ನೀಡಬಹುದಿತ್ತಲ್ಲವೇ"ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದರು.
ಉಪ ಚುನಾವಣೆ; ಕುಮಾರಸ್ವಾಮಿಗೆ ಸಿದ್ದರಾಮಯ್ಯ ಪ್ರಶ್ನೆ!
Who is that ಸಿದ್ದರಾಮಯ್ಯ? ಅವರು ಯಾರು ನನಗೆ ಹೇಳುವುದಕ್ಕೆ?
ಜೆಡಿಎಸ್ ನವರು ತಮ್ಮ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಕಾಂಗ್ರೆಸ್ಸಿಗೆ ಡ್ಯಾಮೇಜ್ ಮಾಡಲು ಹೊರಟಿದ್ದಾರೆ ಎನ್ನುವ ಸಿದ್ದರಾಮಯ್ಯನವರ ಆರೋಪದ ಬಗ್ಗೆ ಮಾಧ್ಯಮದವರ ಜೊತೆ ಮಾತನಾಡುತ್ತಿದ್ದ ಕುಮಾರಸ್ವಾಮಿ, " Who is that ಸಿದ್ದರಾಮಯ್ಯ? ಅವರು ಯಾರು ನನಗೆ ಹೇಳುವುದಕ್ಕೆ. ಅವರೇನು ನಮಗೆ ದೊಣ್ಣೆನಾಯಕನಾ. ನನ್ನ ಪಕ್ಷದಲ್ಲಿ ಯಾರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಬೇಕು ಎನ್ನುವುದು ನನ್ನ ನಿರ್ಧಾರ"ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ನಮ್ಮ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಗೆಲ್ಲುವಂತಹ ಹೋರಾಟವನ್ನು ನಾವು ಮಾಡಬೇಕಾಗಿದೆ
"ನಮ್ಮ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಗೆಲ್ಲುವಂತಹ ಹೋರಾಟವನ್ನು ನಾವು ಮಾಡಬೇಕಾಗಿದೆ. ಇದನ್ನೆಲ್ಲಾ ಲೆಕ್ಕಾಚಾರ ಮಾಡಿಕೊಂಡು ನಾವು ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದೇವೆ. ಸಿದ್ದರಾಮಯ್ಯನವರನ್ನು ಕೇಳಿ ಅಭ್ಯರ್ಥಿ ನಿಲ್ಲಿಸಲು ಸಾಧ್ಯವೇ"ಎಂದು ಪ್ರಶ್ನಿಸಿರುವ ಕುಮಾರಸ್ವಾಮಿ, ಮೈಸೂರಿನಲ್ಲಿ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಲಿಲ್ಲವೇ ಎಂದು ಸಿದ್ದರಾಮಯ್ಯನವರಿಗೆ ತಿರುಗೇಟು ನೀಡಿದ್ದಾರೆ.
ಜೆಡಿಎಸ್ ಅನ್ನು ಬಿಜೆಪಿಯ ಬಿ ಟೀಂ ಎಂದು ಅಪಪ್ರಚಾರ ಮಾಡಿದರು
"ಎಲ್ಲಿ ಯಾವ ಅಭ್ಯರ್ಥಿಯನ್ನು ನಿಲ್ಲಿಸಬೇಕು ಎನ್ನುವುದು ನಮಗೆ ಗೊತ್ತಿದೆ, ಸಿದ್ದರಾಮಯ್ಯನವರು ನಮ್ಮ ಪಕ್ಷದ ಮುಖಂಡರಾ? ಅವರಿಗೆ ರಾಜಕೀಯ ಅನುಭವ ಏನಾದರೂ ಇದ್ದರೆ, ಜೆಡಿಎಸ್ ಅಭ್ಯರ್ಥಿಯ ಬಗ್ಗೆ ಕಮೆಂಟ್ ಮಾಡುವುದು ಅವರಿಗೆ ಅನಾವಶ್ಯಕ. ಮುಸ್ಲಿಂ ಸಮುದಾಯದವನ್ನು ನಮ್ಮಿಂದ ದೂರ ಮಾಡಬೇಕು ಎಂದು ಕಳೆದ ಅಸೆಂಬ್ಲಿ ಚುನಾವಣೆಯಲ್ಲಿ ಜೆಡಿಎಸ್ ಅನ್ನು ಬಿಜೆಪಿಯ ಬಿ ಟೀಂ ಎಂದು ಅಪಪ್ರಚಾರ ಮಾಡಿದರು" ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಮುಸ್ಲಿಂ ಸಮುದಾಯಕ್ಕೆ ಏನಾದರೂ ಒಳ್ಳೆಯದನ್ನು ಮಾಡಿದೆ ಎಂದಾದರೆ ಅದು ಜೆಡಿಎಸ್
"ನಾನು ಯಾಕೆ ಬಿಜೆಪಿಯನ್ನು ಗೆಲ್ಲಿಸಲು ಹೋಗಬೇಕು, ಜೆಡಿಎಸ್ ಪಕ್ಷವನ್ನು ಯಾರಿಗೂ ಗುತ್ತಿಗೆ ನೀಡಿಲ್ಲ. ಮುಸ್ಲಿಂ ಸಮುದಾಯಕ್ಕೆ ಏನಾದರೂ ಒಳ್ಳೆಯದನ್ನು ಮಾಡಿದೆ ಎಂದಾದರೆ ಅದು ಜೆಡಿಎಸ್ ಹೊರತು ಕಾಂಗ್ರೆಸ್ ಪಕ್ಷವಲ್ಲ. ಕಳೆದ ಚುನಾವಣೆಯಲ್ಲಿ ಬಿಜೆಪಿಗೆ 105 ಸೀಟು ಬರಲು ಸಿದ್ದರಾಮಯ್ಯನವರೇ ಕಾರಣ"ಎಂದು ಎಚ್.ಡಿ.ಕುಮಾರಸ್ವಾಮಿಯವರು ಸಿದ್ದರಾಮಯ್ಯ ವಿರುದ್ದ ಸಿಟ್ಟಾಗಿದ್ದಾರೆ.
ಜೆಡಿಎಸ್ ಪಕ್ಷ ಹಾನಗಲ್ ಮತ್ತು ಸಿಂಧಗಿ ಎರಡೂ ಕ್ಷೇತ್ರಕ್ಕೆ ಈಗಾಗಲೇ ಅಭ್ಯರ್ಥಿ ಘೋಷಣೆ ಮಾಡಿದೆ. ಸಿಂಧಗಿಯಲ್ಲಿ ನಾಜಿಯಾ ಶಕೀಲಾ ಅಂಗಡಿ, ಹಾನಗಲ್ನಲ್ಲಿ ನಿಯಾಜ್ ಶೇಕ್ ಅಭ್ಯರ್ಥಿಯಾಗಿದ್ದಾರೆ. "ಜೆಡಿಎಸ್ ಪಕ್ಷಕ್ಕೆ ಮುಸ್ಲಿಮರ ಬಗ್ಗೆ ಕಾಳಜಿ ಇದ್ದಿದ್ದರೆ ಹಾಸನ, ಮೈಸೂರು, ಮಂಡ್ಯ ಭಾಗದಲ್ಲಿ ಅಲ್ಪಸಂಖ್ಯಾತ ಅಭ್ಯರ್ಥಿಗೆ ಟಿಕೆಟ್ ಕೊಡಬಹುದಲ್ಲವೇ? ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ಯಾರಾದರೂ ಮುಸ್ಲಿಮರನ್ನು ಮಂತ್ರಿ ಮಾಡಿದ್ದಾರಾ?" ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದರು.