ಮಹಾರಾಷ್ಟ್ರದಿಂದ ಅಪಾರ ಪ್ರಮಾಣದ ನೀರು ಬಿಡುಗಡೆ: ಉತ್ತರ ಕರ್ನಾಟಕಕ್ಕೆ ಜಲ ಕಂಟಕ
ಕಲಬುರಗಿ, ಅಕ್ಟೋಬರ್ 16: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಕಾರಣದಿಂದಾಗಿ ಕರ್ನಾಟಕದ ಭಾರಿ ಮಳೆ ಸುರಿಯುತ್ತಿದೆ. ಅದರಲ್ಲೂ ಉತ್ತರ ಕರ್ನಾಟದ ಭಾಗಕ್ಕೆ ನೆರೆಯ ಮಹಾರಾಷ್ಟ್ರವೇ ಮತ್ತೊಮ್ಮೆ ಜಲಗಂಡಾಂತರ ತರುತ್ತಿದೆ.
ವರುಣನ ಆರ್ಭಟಕ್ಕೆ ಉತ್ತರ ಕರ್ನಾಟಕ ಅಕ್ಷರಶಃ ತತ್ತರಿಸಿ ಹೋಗುತ್ತಿದೆ. ಕಳೆದ ಎರಡು ದಶಕಗಳಲ್ಲಿಯೇ ಎಂದೂ ಕಂಡು ಕೇಳರಿಯದ ಭೀಕರ ಮಳೆ, ಪ್ರವಾಹ ಬಾರಿ ಉತ್ತರ ಕರ್ನಾಟದಲ್ಲಿ ಸಂಭವಿಸಿದೆ. ಸದ್ಯ ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ. ಕಲ್ಯಾಣ ಕರ್ನಾಟಕ ಪ್ರಮುಖ ಜಿಲ್ಲೆ ಕಲಬುರಗಿಯಲ್ಲಿ ಪರಿಣಾಮ ಜೋರಾಗಿದೆ. ಮಹಾರಾಷ್ಟ್ರದ ಉಜನಿ, ವೀರ್ ಜಲಾಶಯಗಳಿಂದ ಅಪಾರ ಪ್ರಮಾಣದ ನೀರು ಬಿಡುಗಡೆಯಾಗುತ್ತಿರುವುದರಿಂದ ಕಲಬುರಗಿಯ ಭೀಮಾನದಿ ಉಕ್ಕಿ ಹರಿಯುತ್ತಿದೆ. ಭೀಮಾ ಒಡಲಿನಲ್ಲಿರುವ 148 ಗ್ರಾಮಗಳು ಮುಳುಗಡೆಯಾಗುವ ಸಂಭವವಿದೆ.
ಸೊನ್ನ ಬ್ಯಾರೇಜ್ನಿಂದ 2 ಲಕ್ಷ ಕ್ಯುಸೆಕ್ ನೀರು ಹೊರಕ್ಕೆ
ಅನೇಕ ಗ್ರಾಮಗಳು ಜಲಾವೃತ
ಈಗಾಗಲೇ ಕಲಬುರಗಿ ಜಿಲ್ಲೆಯ ಜೇವರ್ಗಿ, ಚಿತ್ತಾಪುರ, ಅಫ್ಜಲ್ ಪುರ ಹಾಗೂ ಸೇಡಂ ತಾಲೂಕಿನ ಗ್ರಾಮಗಳು ಮುಳುಗಡೆಯಾಗಿದ್ದು, ನಂದರಗಿ, ದಿಕ್ಸಂಗಾ, ಬಂಕಲಗಾ, ಅಳ್ಳಗಿ ಗ್ರಾಮಗಳು ಜಲಾವೃತವಾಗಿವೆ. ನೂರಾರು ಮನೆಗಳಿಗೆ ನೀರು ನುಗ್ಗಿ, ವಸ್ತುಗಳು ತೇಲಿಕೊಂಡು ಹೋಗಿವೆ. ದಿಕ್ಸಂಗಾ ಗ್ರಾಮದಲ್ಲಿ ಐದು ಎತ್ತುಗಳು ಕೊಚ್ಚಿ ಹೋಗಿವೆ. ಚಿಂಚೋಳಿ ತಾಲೂಕಿನಲ್ಲಿ ಇಡೀ ರಾತ್ರಿ ಮಳೆಯಾಗಿದ್ದು, ನಾಗಾಇದಾಲಾಯಿ ಗ್ರಾಮದ ಕೆರೆ ಒಡೆದು ಗ್ರಾಮಕ್ಕೆ ನೀರು ನುಗ್ಗಿದೆ. ದವಸ-ಧಾನ್ಯ ಕಳೆದುಕೊಂಡು ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಗ್ರಾಮಗಳು ದ್ವೀಪದಂತಾಗಿವೆ
ಹುಳ್ಸಗುಡ ಗ್ರಾಮ ಸಂಪೂರ್ಣ ಜಲಾವೃತವಾಗಿದೆ. ಅಫ್ಜಲ್ ಪುರದ ಜೇವಗಿ (ಬಿ) ಗ್ರಾಮಸ್ಥರು ಊರನ್ನೇ ಖಾಲಿ ಮಾಡುತ್ತಿದ್ದಾರೆ. ಚಿತ್ತಾಪುರದ ಕಡಬೂರ ಗ್ರಾಮದಲ್ಲಿ 8 ಅಡಿಗೂ ಅಧಿಕ ನೀರು ಸಂಗ್ರಹವಾಗಿದೆ. ಮನೆಯ ಛಾವಣಿ ಮೇಲೆ ಕುಳಿತು ಜನ ದಿನ ಕಳೆಯುತ್ತಿದ್ದಾರೆ. ಮುತ್ತಗಾ ಗ್ರಾಮ ದ್ವೀಪದಂತಾಗಿದ್ದು, ಕಲಬುರಗಿ ಜಿಲ್ಲೆಯಲ್ಲಿ ಇದುವರೆಗೆ 4,819 ಮನೆಗಳಿಗೆ ನೀರು ನುಗ್ಗಿದೆ. 1058 ಮನೆಗಳಿಗೆ ಭಾರಿ ಹಾನಿಯಾಗಿದೆ. 518 ಜಾನುವಾರುಗಳ ಜೀವಹಾನಿಯಾಗಿದೆ.
ಕಲಬುರಗಿ ಭೀಮಾ ನದಿ ಪಾತ್ರದ 148 ಗ್ರಾಮಗಳ ಸ್ಥಳಾಂತರಕ್ಕೆ ಸಿದ್ಧತೆ
ಸೇಡಂ-ಚಿತ್ತಾಪುರದ ರಸ್ತೆ ಸಂಪರ್ಕ ಕಡಿತ
ಕಾಗಿಣಾ ನದಿ ಆರ್ಭಟಕ್ಕೆ ಮಳಖೇಡದ ಉತ್ತರಾಧಿಮಠ ಬಹುತೇಕ ಮುಳುಗಡೆಯಾಗಿದ್ದು, ಅರ್ಚಕರು ಹಾಗು ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 16 ಮಂದಿ ಪ್ರವಾಹದಲ್ಲಿ ಸಿಲುಕಿ ಹಾಕಿಕೊಂಡಿದ್ದಾರೆ. ಗೋಶಾಲೆಯಲ್ಲಿದ್ದ ಜಾನುವಾರುಗಳನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಲಾಗಿದೆ. ಸೇಡಂ-ಚಿತ್ತಾಪುರದ ರಸ್ತೆ ಸಂಪರ್ಕ ಕಡಿತವಾಗಿದೆ.
ಭಾರಿ ಮಳೆಯಾಗುವ ಸಾದ್ಯತೆ
ಅಕ್ಟೋಬರ್ 16 ರಂದು ಕೆಲವು ಪ್ರದೇಶಗಳಲ್ಲಿ ಸಾಧಾರಣದಿಂದ ಕೂಡಿದ ಭಾರಿ ಮಳೆಯಾಗುವ ಸಾದ್ಯತೆ ಇದೆ. ಕರ್ನಾಟಕದ ಕರಾವಳಿಯ ಹಲವು ಪ್ರದೇಶಗಳಲ್ಲಿ, ಗೋವಾ ಮತ್ತು ಕೊಂಕಣ ಪ್ರದೇಶದಲ್ಲಿ ಭಾರಿ ಮಳೆ (ದಿನಕ್ಕೆ 20ಸೆಂಟಿಮೀಟರ್ ಗೂ ಅಧಿಕ) ಸಾಧ್ಯತೆ. ಮತ್ತು ಮಧ್ಯ ಮಹಾರಾಷ್ಟ್ರ ಹಾಗೂ ದಕ್ಷಿಣ ಗುಜರಾತ್ ನಲ್ಲೂ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿಯಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ.