ಮಹಾಮಳೆಗೆ ಉತ್ತರ ಕರ್ನಾಟಕ ತತ್ತರ: ಜನಜೀವನ ಅಸ್ತವ್ಯಸ್ತ
ಕಲಬುರಗಿ, ಅಕ್ಟೋಬರ್ 15: ಕಳೆದ ನಾಲ್ಕೈದು ದಿನಗಳಿಂದ ಸತತ ಮಳೆ ಸುರಿಯುತ್ತಿರುವುದರಿಂದ ಉತ್ತರ ಕರ್ನಾಟಕ ನಲುಗಿ ಹೋಗಿದ್ದು, ಜನರು ಜೀವ ಉಳಿಸಿಕೊಳ್ಳಲು ಹರಸಾಹಸಪಡುತ್ತಿದ್ದಾರೆ. ವರುಣನ ದಾಳಿಗೆ ಕಲಬುರಗಿ, ಯಾದಗಿರಿ, ವಿಜಯಪುರ, ಬೀದರ್, ರಾಯಚೂರು ಜಿಲ್ಲೆಗಳು ತತ್ತರಿಸಿವೆ.
ರಾಜ್ಯದಲ್ಲಿ ಭಾರಿ ಮಳೆ ಸಾಲದೆಂಬಂತೆ ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಹೊರ ಬಿಡಲಾಗುತ್ತಿದೆ. ಕೊಯ್ನಾದಿಂದ ಅತಿ ಹೆಚ್ಚು ನೀರು ಬಿಡುಗಡೆಯಾದರೆ ಬೆಳಗಾವಿ, ಚಿಕ್ಕೋಡಿ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಮತ್ತೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಲಿದೆ.
ಕಲಬುರಗಿ ಜಿಲ್ಲೆಯಲ್ಲಿ ಅ.15 ಮತ್ತು 16 ರಂದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಅತ್ತ ಮಹಾರಾಷ್ಟ್ರದಿಂದ ಭಾರೀ ಪ್ರಮಾಣದ ನೀರು ಬಿಡುಗಡೆ ಸಾಧ್ಯತೆ ಹಿನ್ನೆಲೆ ಕಲಬುರಗಿ ಜನರಿಗೆ ಜಿಲ್ಲಾಡಳಿತದಿಂದ ಎಚ್ಚರಿಕೆ ನೀಡಿದೆ. ಮಹಾರಾಷ್ಟ್ರದ ಉಜನಿ, ವೀರ್ ಡ್ಯಾಂನಿಂದ ಭೀಮಾ ನದಿಗೆ 1 ಲಕ್ಷ 23 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಮಳಖೇಡ ಉತ್ತರಾಧಿ ಮಠ ಸಂಪೂರ್ಣ ಮುಳುಗಡೆಯಾಗಿದ್ದು, ಗೋವುಗಳು, ಅರ್ಚಕರ ಕುಟುಂಬ ಸಂಕಷ್ಟದಲ್ಲಿ ಸಿಲುಕಿದೆ.

ರೈತರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ
ಕಲಬುರಗಿ ಜಿಲ್ಲೆಯಾದ್ಯಂತ ಭಾರೀ ಮಳೆ ಆಗುತ್ತಿರುವ ಹಿನ್ನೆಲೆ ಹಾಗರಗುಂಡಗಿ ಗ್ರಾಮದಲ್ಲಿ ಕೆರೆ ಒಡ್ಡು ಒಡೆದು ಭಾರೀ ಅವಾಂತರ ಸೃಷ್ಟಿಯಾಗಿದೆ. ಜಮೀನುಗಳಿಗೆ ಅಪಾರ ಪ್ರಮಾಣದ ನೀರು ನುಗ್ಗಿದ್ದು, ಕೆರೆಯ ಕೆಳ ಭಾಗದ ಜಮೀನುಗಳೆಲ್ಲಾ ಜಲಾವೃತವಾಗಿ, ಬೆಳೆಗಳೆಲ್ಲಾ ನೀರು ಪಾಲಾಗಿದೆ. ಇದರಿಂದ ಕೊರೊನಾ ಮಧ್ಯೆ ರೈತನಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಇದರ ಜೊತೆಗೆ ಚಿಂಚೋಳಿ ತಾಲ್ಲೂಕಿನ ನಾಗಾಯಿದಲಾಯಿ ಗ್ರಾಮದ ಕೆರೆ ಒಡೆದಿದ್ದು, ನೀರಿನ ರಭಸಕ್ಕೆ ಕೆರೆಯ ತಡೆಗೋಡೆ ಕುಸಿದು ನೀರು ಮುನ್ನಗ್ಗುತ್ತಿದೆ. ಪರಿಣಾಮ ಸುತ್ತಮುತ್ತಲ ಗ್ರಾಮಗಳ ಜನರಲ್ಲಿ ಆತಂಕ ಮನೆ ಮಾಡಿದೆ. ಜೊತೆಗೆ ಭೋಸಗಾ ಕೆರೆ ಕೂಡ ಭರ್ತಿ ಆಗಿದ್ದು, ಕೆರೆಯಿಂದ ಅಪಾರ ಪ್ರಮಾಣದ ನೀರು ಬಿಡಲಾಗುತ್ತಿದೆ. ಗ್ರಾಮಸ್ಥರಿಗೆ ಮುಂಜಾಗ್ರತೆ ವಹಿಸುವಂತೆ ಕಲಬುರಗಿ ಜಿಲ್ಲಾಡಳಿತ ಸೂಚಿಸಿದೆ.

ಪ್ರವಾಹದಲ್ಲಿ ಸಿಲುಕಿದ್ದವರ ರಕ್ಷಣೆ
ಪ್ರವಾಹದಲ್ಲಿ ಸಿಲುಕಿದ್ದ ಐವರನ್ನು ರಕ್ಷಣೆ ಮಾಡಲಾಗಿದೆ. ಕಲಬುರಗಿ ಜಿಲ್ಲೆ ಚಿಂಚೋಳಿ ಹೊರವಲಯದ ತೋಟದಲ್ಲಿ ಸುತ್ತ ನೀರು ಆವರಿಸಿದ್ದರಿಂದ ಮನೆಯ 5 ಮಂದಿ ಮನೆ ಮೇಲ್ಛಾವಣಿಯಲ್ಲಿ ಆಶ್ರಯ ಪಡೆದಿದ್ದರು. ರಕ್ಷಣೆಗಾಗಿ ಮೊರೆ ಇಟ್ಟಿದ್ದರು. ತಕ್ಷಣ ಸ್ಪಂದಿಸಿದ ಎನ್ಡಿಆರ್ಎಫ್ ತಂಡ ಬೋಟ್ ನಲ್ಲಿ ತೆರಳಿ ದಂಪತಿ, ಇಬ್ಬರು ಮಕ್ಕಳು, ಕೃಷಿ ಕಾರ್ಮಿಕನನ್ನು ರಕ್ಷಿಸಿದೆ. ಜೀವ ಉಳಿಸಿಕೊಂಡ ಐವರು ರಕ್ಷಣಾ ತಂಡಕ್ಕೆ ಧನ್ಯವಾದ ಹೇಳಿದ್ದಾರೆ. ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನಲ್ಲಿ ಜವಳಗಾ ಬಿ ಗ್ರಾಮದ ರಸ್ತೆ ಕೊಚ್ಚಿ ಹೋಗಿದ್ದು, ನದಿ ಯಾವುದು, ರಸ್ತೆ ಯಾವುದು ಎಂದು ಗೊತ್ತಾಗುತ್ತಲೇ ಇಲ್ಲ. ಇದರಿಂದ ಜವಳಗಾ ಬಿ- ವಡಾಲ ಗ್ರಾಮದ ರಸ್ತೆ ಸಂಪರ್ಕ ಕಡಿತಗೊಂಡಿದೆ.

ಭೋರ್ಗರೆಯುತ್ತಿರುವ ಭೀಮಾ ನದಿ
ಭೋರ್ಗರೆಯುತ್ತಿರುವ ಭೀಮಾ ನದಿ ನೋಡಲು ಹೋಗಿದ್ದ ಯುವಕ ನೀರಲ್ಲಿ ಕೊಚ್ಚಿ ಹೋಗಿದ್ದಾನೆ. ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ನರಿಬೋಳ ಗ್ರಾಮದ 21 ವರ್ಷದ ಭಗವಾನ್ ಎಂಬ ಯುವಕನಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಉತ್ತರ ಕರ್ನಾಟಕದ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಬಳ್ಳಾರಿ, ಕಲಬುರಗಿ, ಬೀದರ್ ಸೇರಿದಂತೆ ಹಲವು ಜಿಲ್ಲೆಗಳು ಭಾರಿ ಮಳೆಗೆ ತುತ್ತಾಗಿದ್ದು, ರೈತರು ಬೆಳೆದ ಬೆಳೆಗಳು ಹಾನಿಗೀಡಾಗಿವೆ.

ಬಾಗಲಕೋಟೆ ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿದೆ
ಅದೇ ರೀತಿ ಬಾಗಲಕೋಟೆ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಘಟಪ್ರಭಾ ನದಿ ತುಂಬಿ ಹರಿಯುತ್ತಿದೆ, ಇದರಿಂದಾಗಿ ಹೊಳೆಬಸವೇಶ್ವರ ದೇವಸ್ಥಾನ ಜಲಾವೃತಗೊಂಡಿದೆ. ಕಳೆದ ಒಂದು ವಾರದಿಂದ ಇದೇ ಪರಿಸ್ಥಿತಿ ಮುಂದುವರೆದಿದ್ದು, ಭಕ್ತರಿಗೆ ದೇವರ ದರ್ಶನ ಭಾಗ್ಯ ಸಿಗದಂತಾಗಿದೆ. ಬಾಗಲಕೋಟೆ ಜಿಲ್ಲೆ ಮುಧೋಳ ತಾಲ್ಲೂಕಿನ ಮಾಚಕನೂರು ಗ್ರಾಮದ ಇರುವ ಪ್ರಸಿದ್ಧ ಹೊಳೆ ಬಸವೇಶ್ವರ ದೇವಸ್ಥಾನದೊಳಗೆ ಆರು ಅಡಿಯಷ್ಟು ನೀರು ಆವರಿಸಿದೆ. ಬಾಗಲಕೋಟೆ ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ಮನೆ, ಹೊಲ, ಸೇತುವೆಗಳು ಮುಳುಗಿವೆ.

ಮುಂದಿನ 2 ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ
ಕರ್ನಾಟಕದ 6 ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಹಾವೇರಿ, ವಿಜಯಪುರ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಮುಂದಿನ ಎರಡು ದಿನ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುಂದುವರೆಯಲಿದೆ. ಅಕ್ಟೋಬರ್ 15 ರಂದು ಉತ್ತರ ಕರ್ನಾಟಕದ ಕೆಲವು ಪ್ರದೇಶಗಳಲ್ಲಿ ಸಾಧಾರಣದಿಂದ ಕೂಡಿದ ಭಾರಿ ಮಳೆಯಾಗುವ ಸಾಧ್ಯತೆ ಇದೆ.












Click it and Unblock the Notifications