ಕಲಬುರಗಿ; 40 ಡಿಗ್ರಿ ದಾಟಲಿದೆ ತಾಪಮಾನ, ಜನರಿಗೆ ಮುನ್ಸೂಚನೆ
ಕಲಬುರಗಿ, ಮೇ 17; ಬಂಗಾಳ ಕೊಲ್ಲಿಯಲ್ಲಿನ 'ಮೋಖಾ' ಚಂಡಮಾರುತದ ಪರಿಣಾಮ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕಳೆದ ವಾರ ಮಳೆಯಾಗಿತ್ತು. ಆದರೆ ಈ ವಾರ ಬಿಸಿಲಿನ ಝಳ ಹೆಚ್ಚಿದ್ದು, ಉಷ್ಣಾಂಶ 40 ಡಿಗ್ರಿ ದಾಟಿದೆ. ಇದರಿಂದಾಗಿ ಜನರು ಸಂಕಷ್ಟಕ್ಕೆ ಸಿಲುಕಿದ್ದು, ಮಳೆಯಾಗಲಿ ಎಂದು ಪ್ರಾರ್ಥಿಸುತ್ತಿದ್ದಾರೆ.
ಭಾರತೀಯ ಹವಾಮಾನ ಇಲಾಖೆಯ ಮಾಹಿತಿಯಂತೆ ಕಲಬುರಗಿ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಿಗೆ ಬಿಸಿಗಾಳಿಯ ಮುನ್ಸೂಚನೆ ನೀಡಲಾಗಿದೆ. ಕಲಬುರಗಿ ಜಿಲ್ಲೆಯಲ್ಲಿ 3 ದಿನಗಳಲ್ಲಿ ಗರಿಷ್ಠ 40 ಡಿಗ್ರಿ ಸೆಲ್ಸಿಯಸ್ಗಿಂತ ಹೆಚ್ಚು (ತಾಪಮಾನ) ಬಿಸಿಲು ಮತ್ತು ಬಿಸಿ ಗಾಳಿ ಇರಲಿದೆ.

ಬಿಸಿಗಾಳಿಯ ಮುನ್ಸೂಚನೆ ಹಿನ್ನಲೆಯಲ್ಲಿ ಕಲಬುರಗಿ ಜಿಲ್ಲಾಡಳಿತ ಜನರಿಗೆ ಕೆಲವು ಸಲಹೆಗಳನ್ನು ನೀಡಿದೆ. ಜನರು ಬಿಸಿಲಿನ ಶಾಖದಿಂದ ತಪ್ಪಿಸಿಕೊಳ್ಳಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಕಲಬುರಗಿ ಅಪರ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗೆಳ್ಳಿ ತಿಳಿಸಿದ್ದಾರೆ.
ಜನರು ಏನು ಮಾಡಬೇಕು?: ಸಾರ್ವಜನಿಕರು ರೇಡಿಯೊ, ಟಿವಿ ಹಾಗೂ ದಿನಪತ್ರಿಕೆಗಳಲ್ಲಿ ಬರುವ ಅತಿಯಾದ ಬಿಸಿಲಿನ ಕುರಿತು ಮುನ್ಸೂಚನೆ ಪಡೆದುಕೊಳ್ಳಬೇಕು. ಬಾಯಾರಿಕೆಯಿಲ್ಲದಿದ್ದರೂ ಸಹ ಸಾಕಷ್ಟು ಮತ್ತು ಸಾಧ್ಯವಾದಷ್ಟು ಹೆಚ್ಚಾಗಿ ನೀರು ಕುಡಿಯಬೇಕು. ಹಗುರವಾದ ತಿಳಿ ಬಣ್ಣದ, ಸಡಿಲವಾದ ಮತ್ತು ರಂದ್ರವುಳ್ಳ ಹತ್ತಿ ಬಟ್ಟೆಗಳನ್ನು ಧರಿಸಬೇಕು.

ಬಿಸಿಲಿನಲ್ಲಿ ಹೊರಗೆ ಹೋಗುವಾಗ ರಕ್ಷಣಾತ್ಮಕ ಕನ್ನಡಕ, ಟೋಪಿ, ಬೂಟುಗಳು ಅಥವಾ ಚಪ್ಪಲಿಗಳನ್ನು ಧರಿಸಬೇಕು. ಬಸ್ಸಿನಲ್ಲಿ ದೂರದ ಪ್ರಯಾಣವನ್ನು ರಾತ್ರಿ ವೇಳೆಯಲ್ಲಿ ಮಾಡುವುದು ಉತ್ತಮ. ಒಂದು ವೇಳೆ ಹಗಲು ಪ್ರಯಾಣ ಮಾಡಿದ್ದಲ್ಲಿ ಈ ಸಂದರ್ಭದಲ್ಲಿ ಕುಡಿಯುವ ನೀರನ್ನು ತಪ್ಪದೇ ತೆಗೆದುಕೊಂಡು ಹೋಗಬೇಕು.
ಹೊರಗಡೆ ಕೆಲಸ ಮಾಡುತ್ತಿದ್ದಲ್ಲಿ ಟೋಪಿ ಅಥವಾ ಛತ್ರಿಯನ್ನು ಬಳಸುವದರ ಜೊತೆಗೆ ತಲೆ, ಕುತ್ತಿಗೆ, ಮುಖ ಮತ್ತು ಕೈಕಾಲುಗಳ ಮೇಲೆ ಒದ್ದೆಯಾದ ಬಟ್ಟೆಯನ್ನು ಬಳಸಬೇಕು. ಓ.ಆರ್.ಎಸ್., ಮನೆಯಲ್ಲಿ ತಯಾರಿಸಿದ ಲಸ್ಸಿ, ಶರಬತ್, ನಿಂಬೆ ನೀರು, ಮಜ್ಜಿಗೆಗಳನ್ನು ಬಳಸಬೇಕು. ಮನೆಯನ್ನು ತಂಪಾಗಿರಿಕೊಳ್ಳಬೇಕು.
ಆಗಾಗ್ಗೆ ತಣ್ಣೀರಿನಲ್ಲಿ ಸ್ನಾನ ಮಾಡಬೇಕು. ತಂಪಾದ ಸಮಯದಲ್ಲಿ ಕೆಲಸ ಮಾಡಬೇಕು. ಕೆಲಸ ನಿರ್ವಹಿಸುತ್ತಿರುವ ಗರ್ಭಿಣಿ ಮಹಿಳೆಯರಿಗೆ ಮತ್ತು ಅನಾರೋಗ್ಯದಿಂದಿರುವ ಕಾರ್ಮಿಕರಿಗೆ ಹೆಚ್ಚಿನ ಗಮನ ಹರಿಸಬೇಕು.
ಏನು ಮಾಡಬಾರದು?: ಮಕ್ಕಳು ಮತ್ತು ಸಾಕುಪ್ರಾಣಿಗಳನ್ನು ಬಿಸಿಲಿನಲ್ಲಿ ನಿಲ್ಲಿಸಿದ ವಾಹನಗಳ ಹತ್ತಿರ ಬಿಡಬಾರದು. ವಿಶೇಷವಾಗಿ ಮಧ್ಯಾಹ್ನ 12 ಗಂಟೆಯಿಂದ ಮಧ್ಯಾಹ್ನ 3ರ ನಡುವೆ ಬಿಸಿಲಿನಲ್ಲಿ ಹೊರಗೆ ಹೋಗುವುದನ್ನು ತಪ್ಪಿಸಬೇಕು.
ಕಪ್ಪು ಬಟ್ಟೆ ಅಥವಾ ಬಿಗಿಯಾದ ಬಟ್ಟೆಗಳನ್ನು ಧರಿಸಬಾರದು. ಹೊರಗಿನ ತಾಪಮಾನ ಹೆಚ್ಚಾದಾಗ ಶ್ರಮದಾಯಕ ಚಟ್ಟುವಟಿಕೆಗಳನ್ನು ತಪ್ಪಿಸಿ. ಮಧ್ಯಾಹ್ನ 12 ರಿಂದ ಮಧ್ಯಾಹ್ನ 3ರ ವರೆಗೆ ಹೊರಗಡೆ ಹೋಗಬಾರದು. ಅಡುಗೆ ಪ್ರದೇಶವನ್ನು ಸಮರ್ಪಕವಾಗಿ ಗಾಳಿಯಾಡಲು ಬಾಗಿಲು ಮತ್ತು ಕಿಟಕಿಗಳನ್ನು ತೆರೆಯಬೇಕು.
ದೇಹವನ್ನು ನಿರ್ಜಲೀಕರಣಗೊಳಿಸುವ ಅಲ್ಕೋಹಾಲ್, ಚಹಾ, ಕಾಫಿ ಮತ್ತು ಹಾನಿಕಾರಕ ತಂಪು ಪಾನೀಯ, ಆಹಾರ ಹಾಗೂ ಹಳಸಿದ ಆಹಾರವನ್ನು ಸೇವಿಸಬಾರದು.
ನೀರನ್ನು ಕಾಯಿಸಿ ಕುಡಿಯಲು ಮನವಿ; ಒಂದು ಕಡೆ ಬಿಸಿಗಾಳಿಯ ಪ್ರಭಾವ ಮತ್ತೊಂದು ಕಡೆ ಕುಡಿಯುವ ನೀರಿನ ಸಮಸ್ಯೆ ಕಲಬುರಗಿ ನಗರಕ್ಕೆ ಎದುರಾಗಿದೆ. ನಗರಕ್ಕೆ ನೀರು ಸರಬರಾಜು ಮಾಡುವ ಜಲ ಮೂಲಗಳಾದ ಭೀಮಾ ಮತ್ತು ಬೆಣ್ಣೆತೋರಾ ನದಿಯಲ್ಲಿ ಹರಿದು ನಿಂತಿರುವ ಕುಡಿಯುವ ನೀರನ್ನು ಶುದ್ಧೀಕರಿಸಿ ಸೂಪರ್ ಕ್ಲೋರಿನೇಶನ್ ಮಾಡಿ ನೀರು ಸರಬರಾಜು ಮಾಡಲಾಗುತ್ತಿದೆ. ಆದ್ದರಿಂದ ನಗರದ ಜನರು ಕುಡಿಯುವ ನೀರನ್ನು ಕಾಯಿಸಿ, ಆರಿಸಿ ಮತ್ತು ಸೊಸಿ ಕುಡಿಯಬೇಕೆಂದು ಮನವಿ ಮಾಡಲಾಗಿದೆ.
ಜನರು ತಮ್ಮ ಮನೆಗಳಿಗೆ ತೆಗೆದುಕೊಂಡು ನಳದ ಜೋಡಣೆಗೆ ತೊಟ್ಟಿಯನ್ನು ಕಡ್ಡಾಯವಾಗಿ ಕೂಡಿಸಿಕೊಳ್ಳಬೇಕು. ನಳದ ತಗ್ಗುಗಳನ್ನು ಮುಚ್ಚಬೇಕು. ಏಕೆಂದರೆ ತಗ್ಗುಗಳಲ್ಲಿ ಕಲುಷಿತ ನೀರು ಸಂಗ್ರಹಣೆಯಾಗಿ ಅದೇ ನೀರು ಮತ್ತೆ ನಳದ ತೊಟ್ಟಿಯ ಮುಖಾಂತರ ಸಾರ್ವಜನಿಕರಿಗೆ ತಲುಪುತ್ತದೆ. ಇದರಿಂದ ಸಾಂಕ್ರಾಮಿಕ ರೋಗ ಹರಡುವ ಸಂಭವ ಇರುತ್ತದೆ. ಇದಲ್ಲದೇ ಕುಡಿಯುವ ನೀರು ಪೋಲಾಗದಂತೆ ನೋಡಿಕೊಳ್ಳಬೇಕು ಎಂದು ಸಲಹೆ ನೀಡಲಾಗಿದೆ.












Click it and Unblock the Notifications