ಚಿಂಚೋಳಿ ಉಪ ಚುನಾವಣೆ : ಬಿಜೆಪಿಯಿಂದ ಅಚ್ಚರಿಯ ಅಭ್ಯರ್ಥಿ?
Recommended Video
ಬೆಳಗಾವಿ, ಏಪ್ರಿಲ್ 21 : ಬಿಜೆಪಿ ಸೇರಿರುವ ನಿವೃತ್ತ ಐಎಎಸ್ ಅಧಿಕಾರಿ ಕೆ.ರತ್ನಪ್ರಭಾ ಅವರು ವಿಧಾನಸಭೆ ಉಪ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆ ಇದೆ. ಮೇ 19ರಂದು ಚಿಂಚೋಳಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ನಡೆಯಲಿದೆ.
ಕರ್ನಾಟಕ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ ಅವರು ಬಿಜೆಪಿ ಸೇರಿದ್ದಾರೆ. ಗುಲ್ಬರ್ಗ ಕ್ಷೇತ್ರದ ಲೋಕಸಭಾ ಚುನಾವಣೆ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಈಗ ಅವರು ಉಪ ಚುನಾವಣೆ ಅಭ್ಯರ್ಥಿಯಾಗಲಿದ್ದಾರೆ ಎಂಬ ಸುದ್ದಿ ಹಬ್ಬಿದೆ.
ಬಿಜೆಪಿ ಸೇರಿದ ಬಳಿಕ ಮಾತನಾಡಿದ್ದ ಕೆ.ರತ್ನಪ್ರಭಾ ಅವರು, 'ಬಿಜೆಪಿ ಇಂದಿನ ಪ್ರಸಿದ್ಧ ರಾಷ್ಟ್ರೀಯ ಪಕ್ಷವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ವಿಶಿಷ್ಟ ರೀತಿಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿದ್ದಾರೆ' ಎಂದು ಹೇಳಿದ್ದರು.
ಕೆ.ರತ್ನಪ್ರಭಾ ಅವರು ಗುಲ್ಬರ್ಗ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಆದರೆ, ಡಾ.ಉಮೇಶ್ ಜಾಧವ್ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಲಾಗಿತ್ತು. ಈಗ ಉಮೇಶ್ ಜಾಧವ್ ರಾಜೀನಾಮೆಯಿಂದ ತೆರವಾದ ಚಿಂಚೋಳಿ ಕ್ಷೇತ್ರಕ್ಕೆ ಕೆ.ರತ್ನಪ್ರಭಾ ಅವರ ಹೆಸರು ಕೇಳಿ ಬರುತ್ತಿದೆ....

ಮೇ 19ರಂದು ಚುನಾವಣೆ
ಡಾ.ಉಮೇಶ್ ಜಾಧವ್ ಅವರ ರಾಜೀನಾಮೆಯಿಂದ ತೆರವಾಗಿರುವ ಚಿಂಚೋಳಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಮೇ 19ರಂದು ನಡೆಯಲಿದ್ದು, ಮೇ 23ರಂದು ಫಲಿತಾಂಶ ಪ್ರಕಟವಾಗಲಿದೆ. ಈಗ ಅಭ್ಯರ್ಥಿಗಳು ಯಾರು? ಎಂಬ ಚರ್ಚೆ ಆರಂಭವಾಗಿದೆ.

ಡಾ.ಉಮೇಶ್ ಜಾಧವ್ ರಾಜೀನಾಮೆ
2018ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ನ ಡಾ.ಉಮೇಶ್ ಜಾಧವ್ ಅವರು ಚಿಂಚೋಳಿ ವಿಧಾನಸಭಾ ಕ್ಷೇತ್ರದಲ್ಲಿ ಜಯಗಳಿಸಿದ್ದರು. 2018ರ ಮಾರ್ಚ್ 4ರಂದು ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದರು. ಗುಲ್ಬರ್ಗ ಲೋಕಸಭಾ ಕ್ಷೇತ್ರದಿಂದ ಅವರು ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.

ಕಳೆದ ಬಾರಿ ಅಭ್ಯರ್ಥಿ ಯಾರು?
2018ರ ವಿಧಾನಸಭೆ ಚುನಾವಣೆಯಲ್ಲಿ ಚಿಂಚೋಳಿ ಕ್ಷೇತ್ರದಲ್ಲಿ ಸುನೀಲ್ ವಲ್ಯಾಪುರೆ ಅವರು ಅಭ್ಯರ್ಥಿಯಾಗಿದ್ದರು. 54,693 ಮತಗಳನ್ನು ಪಡೆದು ಸೋಲು ಅನುಭವಿಸಿದ್ದರು. ಈಗ ಉಪ ಚುನಾವಣೆಯಲ್ಲಿ ಕೆ.ರತ್ನಪ್ರಭಾ ಅವರು ಅಭ್ಯರ್ಥಿಯಾಗಲಿದ್ದಾರೆ ಎಂಬ ಸುದ್ದಿ ಹಬ್ಬಿದೆ.

ಯಾರು ಕೆ.ರತ್ನಪ್ರಭಾ
ಕೆ.ರತ್ನಪ್ರಭಾ ಅವರು ಕರ್ನಾಟಕ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ. 1981ನೇ ಬ್ಯಾಚ್ ಐಎಎಸ್ ಅಧಿಕಾರಿ. ಕರ್ನಾಟಕದಲ್ಲಿ 37 ವರ್ಷಗಳ ಕಾಲ ಸರ್ಕಾರಿ ಸೇವೆ ಸಲ್ಲಿಸಿರುವ ಅವರು ಹೈದರಾಬಾದ್ ಮೂಲದವರು. 2018ರ ಜೂನ್ನಲ್ಲಿ ನಿವೃತ್ತಿ ಹೊಂದಿದರು. ಈಗ ಬಿಜೆಪಿ ಸೇರಿದ್ದಾರೆ.












Click it and Unblock the Notifications