ಕಲಬುರಗಿ; ಬೆಂಗಳೂರು, ಹೊರ ರಾಜ್ಯಕ್ಕೆ ಖಾಸಗಿ ಬಸ್ ಇಲ್ಲ
ಕಲಬುರಗಿ, ಮಾರ್ಚ್ 18 : ಕೊರೊನಾ ಹರಡುವಿಕೆ ತಡೆಯಲು ಕಲಬುರಗಿಯಿಂದ ಹೊರ ಹೋಗುವ ಮತ್ತು ಒಳಬರುವ ಎಲ್ಲಾ ಖಾಸಗಿ ಬಸ್ಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಮುಂದಿನ ಆದೇಶದ ತನಕ ಇದು ಜಾರಿಯಲ್ಲಿರುತ್ತದೆ.
ಕಲಬುರಗಿ ಜಿಲ್ಲಾಧಿಕಾರಿ ಶರತ್ ಬಿ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಖಾಸಗಿ ಟ್ರಾವೆಲರ್ಸ್ ಮತ್ತು ಬುಕ್ಕಿಂಗ್ ಏಜೆಂಟರ ಸಭೆ ನಡೆಸಿದರು. ಖಾಸಗಿ ಬಸ್ಗಳ ಸಂಚಾರವನ್ನು ಸ್ಥಗಿತಗೊಳಿಸುವಂತೆ ಸೂಚನೆಯನ್ನು ನೀಡಿದರು.
ರಾಜ್ಯದ ರಾಜಧಾನಿ ಬೆಂಗಳೂರು, ಇತರೆ ಜಿಲ್ಲೆಗಳು, ನೆರೆ ರಾಜ್ಯಗಳಾದ ಮಹಾರಾಷ್ಟ್ರ, ತೆಲಂಗಾಣ ಹಾಗೂ ಆಂಧ್ರ ಪ್ರದೇಶಗಳಿಗೆ ತೆರಳುವ ಮತ್ತು ಜಿಲ್ಲೆಯೊಳಗೆ ಬರುವ ಬಸ್ಗಳ ಸಂಚಾರ ನಿಲ್ಲಿಸಬೇಕು. ಈಗಾಗಲೇ ಬುಕ್ಕಿಂಗ್ ಮಾಡಿರುವ ಸೀಟುಗಳನ್ನು ರದ್ದುಮಾಡುವಂತೆ ಬಸ್ ಮಾಲೀಕರು ಮತ್ತು ಏಜೆಂಟ್ಗಳಿಗೆ ಸೂಚನೆ ನೀಡಿದರು.

ಮುಂದಿನ ಆದೇಶದವರೆಗೆ ಇದನ್ನು ಪಾಲಿಸಬೇಕೆಂದು. ಒಂದು ವೇಳೆ ಈ ಸೂಚನೆಯನ್ನು ಮೀರಿ ಬಸ್ಗಳ ಓಡಾಟ ನಡೆಸಿದಲ್ಲಿ, ಅಂತಹ ವಾಹನಗಳನ್ನು ಜಪ್ತಿ ಮಾಡಲಾಗುವುದು ಎಂದು ಬಸ್ ಮಾಲೀಕರಿಗೆ ಖಡಕ್ ಎಚ್ಚರಿಕೆ ನೀಡಿದರು.
17 ಚೆಕ್ ಪೋಸ್ಟ್ : ಬಸ್ಗಳ ಸಂಚಾರದ ಮೇಲೆ ನಿಗಾ ಇಡಲು 17 ಚೆಕ್ ಪೋಸ್ಟ್ ತೆರೆಯಲಾಗಿದೆ. ಇತ್ತೀಚೆಗೆ ಕೆಲವರು ಮುಂಬೈ, ಪುಣೆ, ಹೈದರಾಬಾದ್ ವಿಮಾನ ನಿಲ್ದಾಣದಲ್ಲಿ ಇಳಿದು, ಬಸ್ಗಳ ಮೂಲಕ ಕಲಬುರಗಿ ಜಿಲ್ಲೆಗೆ ಬಂದಿರುತ್ತಾರೆ ಎಂದು ಜಿಲ್ಲಾಧಿಕಾರಿಗಳು ಹೇಳಿದರು.
ಇದುವರೆಗೆ ಕಲಬುರಗಿ ನಗರ ಮತ್ತು ಜಿಲ್ಲೆಗೆ ಬಂದಿರುವ ಪ್ರಯಾಣಿಕರ ಸಂಪೂರ್ಣ ವಿವರ ನೀಡುವಂತೆಯೂ ಅವರು ಇದೇ ಸಂದರ್ಭದಲ್ಲಿ ಬಸ್ ಏಜೆಂಟ್ಗಳಿಗೆ ಸೂಚಿಸಿದರು.
ದೇಶದಲ್ಲಿಯೇ ಕೊರೊನಾಗೆ ಮೊದಲ ಬಲಿ ಕರ್ನಾಟಕದ ಕಲಬುರಗಿಯಲ್ಲಿ ನಡೆದಿತ್ತು. ಮಾರ್ಚ್ 10ರಂದು ಮೃತಪಟ್ಟ ವೃದ್ಧನ ಕುಟುಂಬ ಸದಸ್ಯರಲ್ಲಿ ಒಬ್ಬರಿಗೆ, ವೃದ್ಧನಿಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಕೊರೊನಾ ಸೋಂಕು ತಗುಲಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.












Click it and Unblock the Notifications