ಕಲಬುರಗಿ ಪಾಲಿಕೆ ಮೇಯರ್ ಆಯ್ಕೆ ಫೆ.5ಕ್ಕೆ; ಯಾರಿಗೆ ಸಿಗಲಿದೆ ಅಧಿಕಾರ?
ಕಲಬುರಗಿ, ಜನವರಿ 28; ಕಲಬುರಗಿ ಮಹಾನಗರ ಪಾಲಿಕೆ ಮೇಯರ್ ಮತ್ತು ಉಪ ಮೇಯರ್ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಫೆಬ್ರವರಿ 5ರಂದು ಚುನಾವಣೆ ನಡೆಯಲಿದ್ದು, ಪಾಲಿಕೆಯ ಅಧಿಕಾರ ಯಾರ ಪಾಲಾಗಲಿದೆ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.
ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪ ಮೇಯರ್ ಬದಲಾವಣೆ ಮಾಡಿ ಗುರುವಾರ ಆದೇಶ ಹೊರಡಿಸಲಾಗಿದೆ. ಪ್ರಾದೇಶಿಕ ಆಯುಕ್ತ ಡಾ. ಎನ್. ವಿ ಪ್ರಸಾದ್ ಫೆಬ್ರವರಿ 5ರಂದು ಮೇಯರ್ ಮತ್ತು ಉಪ ಮೇಯರ್ ಆಯ್ಕೆ ಮತ್ತು ವಿವಿಧ ಸ್ಥಾಯಿ ಸಮಿತಿಗಳ ಅಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಸುವುದಾಗಿ ಆದೇಶ ಹೊರಡಿಸಿದ್ದಾರೆ.
ಮಹಾನಗರ ಪಾಲಿಕೆಯಲ್ಲಿ 55 ವಾರ್ಡ್ಗಳಿವೆ. ಚುನಾವಣೆಯಲ್ಲಿ ಕಾಂಗ್ರೆಸ್ 27, ಬಿಜೆಪಿ 23, ಜೆಡಿಎಸ್ 4 ಸ್ಥಾನದಲ್ಲಿ ಜಯಗಳಿಸಿದೆ. ಯಾವುದೇ ಪಕ್ಷ ಅಧಿಕಾರ ಹಿಡಿಯಲು 28 ಸದಸ್ಯ ಬಲದ ಅಗತ್ಯವಿದೆ. ಮೂರು ಪಕ್ಷಗಳಲ್ಲಿಯೂ ರಾಜಕೀಯ ಚಟುವಟಿಕೆ ಆರಂಭವಾಗಿದೆ.

27 ಸ್ಥಾನಗಳಲ್ಲಿ ಜಯಗಳಿಸಿರುವ ಕಾಂಗ್ರೆಸ್ ಪಕ್ಷ ಮೇಯರ್ ಮತ್ತು ಉಪ ಮೇಯರ್ ಅಧಿಕಾರ ಹಿಡಿಯಲು ಜೆಡಿಎಸ್ ಮೈತ್ರಿಗೆ ಆಹ್ವಾನ ಕೊಟ್ಟಿದೆ. ಮತ್ತೊಂದು ಕಡೆ ಬಿಜೆಪಿ ಸಹ ಜೆಡಿಎಸ್ ಸಂಪರ್ಕಿಸಿದೆ. ಜೆಡಿಎಸ್ ಕೈ ಕೊಟ್ಟರೂ ಅಧಿಕಾರ ಹಿಡಿಯಲು ಬಿಜೆಪಿ ತಂತ್ರ ರೂಪಿಸಿದೆ.
ಏಳು ಜನ ವಿಧಾನ ಪರಿಷತ್ ಸದಸ್ಯರ ಹೆಸರನ್ನು ಮತದಾರರ ಪಟ್ಟಿಗೆ ಸೇರಿಸಲು ಬಿಜೆಪಿ ಪ್ರಯತ್ನ ನಡೆಸುತ್ತಿದೆ. ಚುನಾವಣೆಯಲ್ಲಿ ಮತದಾನ ಮಾಡಲು ಪರಿಷತ್ ಸದಸ್ಯರ ಹೆಸರನ್ನು ಬಿಜೆಪಿ ಮತದಾರರ ಪಟ್ಟಿಗೆ ಸೇರಿಸುತ್ತಿದೆ ಎಂದು ಕಾಂಗ್ರೆಸ್ ಆರೋಪ ಮಾಡಿದೆ. ಈ ಕುರಿತು ಜಿಲ್ಲಾಧಿಕಾರಿಗೆ ತಕರಾರು ಅರ್ಜಿ ಸಲ್ಲಿಕೆ ಮಾಡಿದೆ.
ಯಾವ-ಯಾವ ಸದಸ್ಯರು: ಬಿಜೆಪಿಯ ಲಕ್ಷ್ಮಣ ಸವದಿ (ಅಥಣಿ), ತುಳಸಿ ಮುನಿರಾಜು ಗೌಡ (ಬೆಂಗಳೂರು), ಪ್ರತಾಪ್ ಸಿಂಹ ನಾಯಕ್ (ಉಜಿರೆ), ಲೆಹರ್ ಸಿಂಗ್ (ಬೆಂಗಳೂರು), ಭಾರತಿ ಶೆಟ್ಟಿ (ಬೆಂಗಳೂರು), ಡಾ. ಸಾಬಣ್ಣ ತಳವಾರ (ಬೆಳಗಾವಿ), ರಘುನಾಥರಾವ್ ಮಲ್ಕಾಪುರೆ (ಬೀದರ್) ತಮ್ಮ ನೋಡೆಲ್ ಜಿಲ್ಲೆಯನ್ನಾಗಿ ಕಲಬುರಗಿ ಆಯ್ಕೆ ಮಾಡಿಕೊಂಡಿದ್ದೇವೆ ಎಂದು ಚುನಾವಣಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರು.
ಏಳು ಜನರ ದಾಖಲೆಗಳನ್ನು ಪರಿಶೀಲನೆ ಮಾಡಿದ ಸಹಾಯಕ ಆಯುಕ್ತರಾದ ಮೋನಾ ರೋತ್ ಡಾ. ತಳವಾರ ಸಾಬಣ್ಣ ಹಾಗೂ ಪ್ರತಾಪ್ ಸಿಂಹ ನಾಯಕ್ ಮನವಿ ತಿರಸ್ಕಾರ ಮಾಡಿದ್ದಾರೆ. ಉಳಿದ 5 ಪರಿಷತ್ ಸದಸ್ಯರ ಮನವಿ ಪುರಸ್ಕಾರಗೊಂಡಿದ್ದು ಅವರ ಹೆಸರು ಮತದಾರರ ಪಟ್ಟಿಗೆ ಸೇರಲಿದೆ.
ಇನ್ನು ಪರಿಷತ್ ಸದಸ್ಯರ ಹೆಸರು ಸೇರ್ಪಡೆಗೆ ಕಾಂಗ್ರೆಸ್ ತರಕಾರು ಅರ್ಜಿ ಸಲ್ಲಿಕೆ ಮಾಡಿದೆ. ಈ ಅರ್ಜಿ ಇನ್ನೂ ಜಿಲ್ಲಾಧಿಕಾರಿಗಳ ಮುಂದೆ ವಿಚಾರಣೆಗೆ ಬಾಕಿ ಇದೆ. ಮಂಗಳವಾರ ಕಲಬುರಗಿ ಜಿಲ್ಲಾಧಿಕಾರಿ ವರ್ಗಾವಣೆಯಾಗಿದ್ದು, ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರಿ ಸ್ವೀಕರಿಸಿದ ಯಶವಂತ ವಿ. ಗುರುಕರ್ ಅರ್ಜಿ ವಿಚಾರಣೆ ನಡೆಸಬೇಕಿದೆ.
ಮೀಸಲಾತಿ ಬದಲಾವಣೆ; ಕಲಬುರಗಿ ಪಾಲಿಕೆ ಮೇಯರ್ ಮತ್ತು ಉಪ ಮೇಯರ್ ಸ್ಥಾನದ ಮೀಸಲಾತಿಯನ್ನು ಬದಲಾವಣೆ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ. ಹೊಸ ಆದೇಶದ ಪ್ರಕಾರ ಮೇಯರ್ ಹುದ್ದೆ ಎಸ್ಸಿ ಹಾಗೂ ಉಪ ಮೇಯರ್ ಹುದ್ದೆ ಸಾಮಾನ್ಯ ವರ್ಗಕ್ಕೆ ಮೀಸಲಾಗಿದೆ.
21ನೇ ಅವಧಿಯ ಮೀಸಲಾತಿ ಇದಾಗಿದ್ದು, 2018ರಲ್ಲಿ ನಿಗದಿಪಡಿಸಿದ ಮೀಸಲಾತಿಯಂತೆ ಮೇಯರ್ ಚುನಾವಣೆ ನಡೆಸುವಂತೆ ನಗರಾಭಿವೃದ್ಧಿ ಇಲಾಖೆ ಆದೇಶದಲ್ಲಿ ತಿಳಿಸಿದೆ. ಈ ಹಿಂದೆ ಸಾಮಾನ್ಯ ಮಹಿಳೆಗೆ ಮೇಯರ್ ಹುದ್ದೆ ಮೀಸಲಿಡಲಾಗಿತ್ತು.
ಅತಂತ್ರ ಫಲಿತಾಂಶ ಮತ್ತು ಜೆಡಿಎಸ್ ನಿಲುವು ಇನ್ನೂ ಗೌಪ್ಯವಾಗಿರುವ ಕಾರಣ ಪಾಲಿಕೆ ಅಧಿಕಾರ ಯಾರ ಪಾಲಾಗಲಿದೆ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ಜೆಡಿಎಸ್ ಬಿಜೆಪಿ ಜೊತೆ ಕೈ ಜೋಡಿಸಲು ಈ ಹಿಂದೆ ಉತ್ಸುಕವಾಗಿತ್ತು. ಕಾಂಗ್ರೆಸ್ ಜೊತೆ ಸೇರುವ ಸಾಧ್ಯತೆ ಕಡಿಮೆ ಎಂದೇ ಅಂದಾಜಿಸಲಾಗಿದೆ.












Click it and Unblock the Notifications