"ಕೊರೊನಾ ವೈರಸ್ ಸೋಂಕಿತರಿಗೆ ಚಿಕಿತ್ಸೆ ಕೊಡದ ವೈದ್ಯರು ದೇಶದ್ರೋಹಿಗಳು"
ಬೆಂಗಳೂರು, ಏ. 08: ಇಡೀ ದೇಶ ಕೊರೊನಾ ವೈರಸ್ ಆತಂಕದಲ್ಲಿದೆ. ಇಂತಹ ಸಂದರ್ಭದಲ್ಲಿಯೂ ಕೆಲವು ವೈದ್ಯರು ತಮ್ಮ ಕರ್ತವ್ಯವನ್ನು ಮರೆತಿದ್ದಾರೆ. ಕೊರೊನಾ ಸೋಂಕಿತರಿಗೆ ಚಿಕಿತ್ಸೆ ಕೊಡಲು ಮುಂದೆ ಬರುತ್ತಿಲ್ಲ.
ಹೀಗಾಗಿ ಕೊರೋನಾ ಸೊಂಕಿತರಿಗೆ ಚಿಕಿತ್ಸೆ ನೀಡಲು ವೈದ್ಯರು ನಿರ್ಲಕ್ಷಿಸಿದರೆ ಅವರನ್ನು ದೇಶದ್ರೋಹಿಗಳೆಂದು ಪರಿಗಣಿಸಿ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕಲಬುರಗಿ ಜಿಲ್ಲಾಧಿಕಾರಿ ಶರತ್ ಬಿ ಖಡಕ್ ಎಚ್ಚರಿಕೆಯನ್ನು ಕೊಟ್ಟಿದ್ದಾರೆ. ಈ ಬಗ್ಗೆ ಕಲಬುರಗಿ ನಗರದ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಮಹಾದೇವಪ್ಪ ರಾಂಪೂರೆ ವೈದ್ಯಕೀಯ ಕಾಲೇಜಿಗೆ ಪತ್ರ ಬರೆದು ಎಚ್ಚರಿಸಿದ್ದಾರೆ.
ಕೊರೋನಾ ಸೊಂಕಿತರಿಗೆ ಚಿಕಿತ್ಸೆ ನೀಡಲು ದೇಶಾದ್ಯಂತ ವೈದ್ಯರು ಹಗಲಿರುಳು ಶ್ರಮಿಸುತ್ತಿದ್ದಾರೆ. ಆದರೆ ನಿಮ್ಮ ಕಾಲೇಜಿನ ವೈದ್ಯರು ಕರ್ತವ್ಯದಿಂದ ಜಾರಿಕೊಳ್ಳುತ್ತಿದ್ದಾರೆ, ಅಲ್ಲದೇ ಬೇರೆ ವೈದ್ಯರಿಗೂ ಸಹ ಸೊಂಕಿತರಿಗೆ ಚಿಕಿತ್ಸೆ ನೀಡದಂತೆ ಉತ್ತೇಜನ ಮಾಡುತ್ತಿದ್ದಾರೆ.
ನಿಮ್ಮ ಕಾಲೇಜಿನ ಎಲ್ಲಾ ವೈದ್ಯರು ಕಡ್ಡಾಯವಾಗಿ ಇಎಸ್ಐ ಆಸ್ಪತ್ರೆಗೆ ತೆರಳಿ ಸೋಂಕಿತರಿಗೆ ಚಿಕಿತ್ಸೆ ನೀಡಲು ಸಿದ್ದರಿರಬೇಕು. ದೇಶದಲ್ಲಿಯೇ ಮೊದಲ ವ್ಯಕ್ತಿ ಮೃತಪಟ್ಟಿದ್ದು ನಮ್ಮ ಜಿಲ್ಲೆಯಲ್ಲಿ, ಹೀಗಾಗಿ ಜಿಲ್ಲೆಯಲ್ಲಿ ಕೊರೋನಾ ತುರ್ತು ಪರಿಸ್ಥಿತಿ ಇದೆ, ಅದಕ್ಕಾಗಿ ಎಲ್ಲ ವೈದ್ಯರು ಸಹಕರಿಸಬೇಕು. ಇಲ್ಲದೆ ಹೋದಲ್ಲಿ ಅಂಥವರನ್ನು ದೇಶದ್ರೋಹಿಗಳೆಂದು ಪರಿಗಣಿಸಿ ಅವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಶರತ್ ಬಿ ಅವರು ಎಚ್ಚರಿಕೆ ಕೊಟ್ಟಿದ್ದಾರೆ.