ಕಲಬುರಗಿ; ದಾಖಲೆ ಇಲ್ಲದ 1.40 ಕೋಟಿ ರೂ. ಹಣ ವಶಕ್ಕೆ
ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಕಲಬುರಗಿ ಜಿಲ್ಲೆಯಲ್ಲಿ ಚೆಕ್ಪೋಸ್ಟ್ ಸ್ಥಾಪನೆ ಮಾಡಲಾಗಿದೆ. ಬುಧವಾರ ಯಾವುದೇ ದಾಖಲೆ ಇಲ್ಲದ ಅಂದಾಜು 1.90 ಕೋಟಿ ರೂ. ಹಣವನ್ನು ಇಲ್ಲಿ ವಶಕ್ಕೆ ಪಡೆಯಲಾಗಿದೆ.
ಕಲಬುರಗಿ, ಮಾರ್ಚ್ 23; ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾಗಲು ಕೆಲವೇ ದಿನಗಳು ಬಾಕಿ ಇದೆ. ಚುನಾವಣೆ ಹಿನ್ನಲೆಯಲ್ಲಿ ಜಿಲ್ಲೆಗಳಲ್ಲಿ ಚೆಕ್ಪೋಸ್ಟ್ಗಳನ್ನು ಹಾಕಲಾಗಿದ್ದು, ಚುನಾವಣಾ ಅಕ್ರಮ ನಡೆಯದಂತೆ ಎಚ್ಚರ ವಹಿಸಲಾಗುತ್ತಿದೆ. ಪೊಲೀಸರು ಸೇರಿದಂತೆ ವಿವಿಧ ಇಲಾಖೆಗಳ ಸಿಬ್ಬಂದಿಗಳು ಚೆಕ್ಪೋಸ್ಟ್ನ ಉಸ್ತುವಾರಿ ನೋಡಿಕೊಳ್ಳುತ್ತಾರೆ. ಮತದಾರರಿಗೆ ಹಂಚಲು ತರುವ ಹಣ, ವಸ್ತುಗಳನ್ನು ಚೆಕ್ಪೋಸ್ಟ್ಗಳಲ್ಲಿ ವಶಕ್ಕೆ ಪಡೆಯಲಾಗುತ್ತಿದೆ.
ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆಯಲ್ಲಿಯೂ ಚೆಕ್ಪೋಸ್ಟ್ ಸ್ಥಾಪನೆ ಮಾಡಲಾಗಿದೆ. ಬುಧವಾರ ಯಾವುದೇ ದಾಖಲೆ ಇಲ್ಲದ ಅಂದಾಜು 1.90 ಕೋಟಿ ರೂ. ಹಣವನ್ನು ಇಲ್ಲಿ ವಶಕ್ಕೆ ಪಡೆಯಲಾಗಿದೆ. ಈ ಕುರಿತು ಜಿಲ್ಲಾ ಚುನಾವಣಾಧಿಕಾರಿ, ಕಲಬುರಗಿ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಮಾಹಿತಿ ನೀಡಿದ್ದಾರೆ.

ಕಿಣ್ಣಿಸಡಕ್ ಚೆಕ್ಪೋಸ್ಟ್ ಬಳಿ ದಾಖಲೆ ಇಲ್ಲದ 1.40 ಕೋಟಿ ರೂ.ಗಳು ಹಾಗೂ ಜೇವರ್ಗಿ ಚೆಕ್ಪೋಸ್ಟ್ನಲ್ಲಿ 50 ಲಕ್ಷ ರೂ. ಹಣವನ್ನು ವಶಕ್ಕೆ ಪಡೆಯಲಾಗಿದೆ. ವಶಕ್ಕೆ ಪಡೆಯಲಾದ ಹಣವನ್ನು ಅಧಿಕಾರಿಗಳು ಲೆಕ್ಕ ಮಾಡುವ ಚಿತ್ರಗಳನ್ನು ಜಿಲ್ಲಾಡಳಿತ ಟ್ವೀಟ್ ಮಾಡಿದೆ. ಈ ಹಣ ಎಲ್ಲಿಂದ ಸಾಗಣೆ ಮಾಡಲಾಗುತ್ತಿತ್ತು?. ಯಾರಿಗೆ ಸೇರಿದ್ದು ಎಂದು ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ.

ಚುನಾವಣೆ ದಿನಾಂಕ ಘೋಷಣೆ?; ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಗೆ ಕೆಲವೇ ದಿನಗಳು ಬಾಕಿ ಇದೆ. ಈಗಾಗಲೇ ಕೇಂದ್ರ ಚುನಾವಣಾ ಆಯೋಗದ ತಂಡ ರಾಜ್ಯಕ್ಕೆ ಆಗಮಿಸಿ ಚುನಾವಣಾ ಸಿದ್ಧತೆಗಳ ಕುರಿತು ಮಾಹಿತಿ ಸಂಗ್ರಹ ಮಾಡಿದೆ. ಚುನಾವಣಾ ಕಾರ್ಯದ ಕುರಿತು ಜಿಲ್ಲಾಧಿಕಾರಿಗಳಿಗೆ ಸೂಚನೆಗಳನ್ನು ನೀಡಿದೆ. ಏಪ್ರಿಲ್ ಮೊದಲ ವಾರದಲ್ಲಿ ಚುನಾವಣಾ ದಿನಾಂಕ ಘೋಷಣೆಯಾಗುವ ನಿರೀಕ್ಷೆ ಇದ್ದು, ದಿನಾಂಕ ಘೋಷಣೆಯ ಜೊತೆಗೆ ಮಾದರಿ ನೀತಿ ಸಂಹಿತೆ ಜಾರಿಗೆ ಬರುತ್ತದೆ. ಬಳಿಕ ಇನ್ನಷ್ಟು ಕಠಿಣ ನಿಯಮಗಳು ಜಾರಿಗೆ ಬರಲಿವೆ.
ಕಲಬುರಗಿ ಮಾತ್ರವಲ್ಲ ಚಿಕ್ಕಮಗಳೂರು, ಬೆಳಗಾವಿ ಮತ್ತು ಗದಗದಲ್ಲಿಯೂ ಹಣ, ಚಿನ್ನದ ಆಭರಣ ಮತ್ತು ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ. 38 ಲಕ್ಷ ರೂಪಾಯಿ ಮೌಲ್ಯದ ಸೀರೆ ಮತ್ತು ಹಣವನ್ನು ಬೆಳಗಾವಿಯಲ್ಲಿ ವಶಪಡಿಸಿಕೊಳ್ಳಲಾಗಿದೆ. ಗದಗದಲ್ಲಿ 2 ಕೋಟಿ ರೂ. ಹಣವನ್ನು ಚೆಕ್ಪೋಸ್ಟ್ನಲ್ಲಿ ಪೊಲೀಸರು ವಶಕ್ಕೆ ಪಡೆದು, ಹಣದ ಮೂಲದ ಬಗ್ಗೆ ತನಿಖೆ ಕೈಗೊಂಡಿದ್ದಾರೆ.
ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಮತದಾರರಿಗೆ ಹಂಚಲು ತಂದಿದ್ದ ಸೀರೆ, ಕುಕ್ಕರ್, ಮಿಕ್ಸಿ, ಯುಗಾದಿ ಕಿಟ್ ಹೀಗೆ ವಿವಿಧ ಸಾಮಾಗ್ರಿಗಳನ್ನು ಹಲವು ಕಡೆ ವಶಕ್ಕೆ ಪಡೆಯಲಾಗುತ್ತಿದೆ. ಚುನಾವಣಾ ಆಯೋಗದ ಸೂಚನೆಯಂತೆ ಹಲವು ಜಿಲ್ಲೆಗಳಲ್ಲಿ ಪೊಲೀಸರು ಕಾರ್ಯಾಚರಣೆ ಕೈಗೊಂಡಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ 16 ಲಕ್ಷ ರೂ. ಮೌಲ್ಯದ ಸೀರೆಗಳನ್ನು ವಶಕ್ಕೆ ಪಡೆಯಲಾಗಿದೆ. ಬೆಳಗಾವಿ ನಗರದಲ್ಲಿ ದಾಖಲೆ ಇಲ್ಲದ 9 ಲಕ್ಷ ರೂ. ಹಣವನ್ನು ವಶಕ್ಕೆ ಪಡೆಯಲಾಗಿದೆ.
ಚಿಕ್ಕಮಗಳೂರಿನಲ್ಲಿ ಚಿನ್ನ ವಶಕ್ಕೆ; ಚಿಕ್ಕಮಗಳೂರು ಪೋಲಿಸರು ಸಹ ಚುನಾವಣೆ ಸಮಯದಲ್ಲಿ ಕಾರ್ಯಾಚರಣೆ ನಡೆಸಿ ದಾಖಲೆ ಇಲ್ಲದೇ ಸಾಗಣೆ ಮಾಡುತ್ತಿದ್ದ ಕೋಟ್ಯಾಂತರ ರೂಪಾಯಿ ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಎಸ್ಪಿ ಉಮಾ ಪ್ರಶಾಂತ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಪಿಕಪ್ ವಾಹನದಲ್ಲಿ ಸಾಗಿಸುತ್ತಿದ್ದ ಚಿನ್ನವನ್ನು ತರೀಕೆರೆ ಪಟ್ಟಣದ ಪೊಲೀಸ್ ಚೆಕ್ಪೋಸ್ಟ್ನಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ.
ವಶಕ್ಕೆ ಪಡೆದುಕೊಂಡ ಚಿನ್ನದ ಮೌಲ್ಯ ಸುಮಾರು 2 ಕೋಟಿ 30 ಲಕ್ಷ ಎಂದು ಅಂದಾಜಿಸಲಾಗಿದೆ. ಪಿಕಪ್ ವಾಹನದಲ್ಲಿ ನಾಲ್ಕು ಬಾಕ್ಸ್ಗಳಲ್ಲಿ ಚಿನ್ನವನ್ನು ಸಾಗಣೆ ಮಾಡಲಾಗುತ್ತಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಾಹನ ಸವಾರ ಸೇರಿದಂತೆ ಇಬ್ಬರನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ. ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಚೆಕ್ಪೋಸ್ಟ್ ರಚನೆ ಮಾಡಲಾಗಿದ್ದು, ವಾಹನಗಳ ತಪಾಸಣೆ ನಡೆಸಲಾಗುತ್ತಿದೆ.












Click it and Unblock the Notifications