KKRTC ಬಸ್ಗೆ ಬೆಂಕಿ; ಮಹಾರಾಷ್ಟ್ರಕ್ಕೆ ಬಸ್ ತಾತ್ಕಲಿಕ ಸ್ಥಗಿತ
ಕಲಬುರಗಿ, ಅಕ್ಟೋಬರ್ 31: ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ಮೀಸಲಾತಿ ಹೋರಾಟದ ವೇಳೆ ಕರ್ನಾಟಕದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕೆಕೆಆರ್ಟಿಸಿ) ಬಸ್ಗೆ ಬೆಂಕಿ ಹಚ್ಚಲಾಗಿದೆ. ಬಸ್ನಲ್ಲಿದ್ದ ಎಲ್ಲಾ 48 ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ.
ಕೆಕೆಎಸ್ಆರ್ಟಿಸಿ ಸಾಮಾನ್ಯ ಬಸ್ಗೆ ಬೆಂಕಿ ಹಚ್ಚಿದ ಪರಿಣಾಮ ಮಹಾರಾಷ್ಟ್ರಕ್ಕೆ ಬಸ್ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಈ ಕುರಿತು ಕೆಕೆಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಎಂ. ರಾಚಪ್ಪ ಮಾಹಿತಿ ನೀಡಿದ್ದಾರೆ.

ಮಹಾರಾಷ್ಟ್ರದಲ್ಲಿ ಮೀಸಲಾತಿ ಸಂಬಂಧ ಹೋರಾಟ ನಡೆಯುತ್ತಿದ್ದು, ಸೋಮವಾರ ಕಾರ್ಯಚರಣೆಯಲ್ಲಿದ್ದ ಕರ್ನಾಟಕಕ್ಕೆ ಸೇರಿದ ಕೆಕೆಆರ್ಟಿಸಿ ಬಸ್ಸಿಗೆ ಬೆಂಕಿ ಹಚ್ಚಿದ ಪರಿಣಾಮ ಅಂತರ ರಾಜ್ಯ ಬಸ್ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಹೇಳಿದ್ದಾರೆ.
ಬಸ್ಗೆ ಬೆಂಕಿ ಹಚ್ಚಿದರು; ಸೋಮವಾರ ಬೀದರ್ ಜಿಲ್ಲೆಯ ಭಾಲ್ಕಿಯಿಂದ ಪುಣೆಗೆ ಹೊರಟಿದ್ದ ಬಸ್ ಸಂಖ್ಯೆ ಕೆಎ-38 ಎಫ್ 1201 ಬಸ್ ಅನ್ನು ಮಹಾರಾಷ್ಟ್ರದ ಉಮರ್ಗಾ ಬಳಿಯ ತರುರಿ ಗ್ರಾಮದಲ್ಲಿ ಪ್ರತಿಭಟನಾಕಾರರು ತಡೆದು, ಪ್ರಯಾಣಿಕರನ್ನು ಕೆಳಗಿಳಿಸಿದರು.
ಬಳಿಕ ಬಸ್ಸಿಗೆ ಬೆಂಕಿ ಹಚ್ಚಿದ್ದಾರೆ. ಈ ಹಿನ್ನೆಲೆಯಲ್ಲಿ ತುಳಜಾಪುರ ಯಾತ್ರೆ ಸೇರಿದಂತೆ ಮಹಾರಾಷ್ಟ್ರಕ್ಕೆ ಅಂತರ ರಾಜ್ಯ ಬಸ್ಗಳ ಕಾರ್ಯಾಚರಣೆಯನ್ನು ಕೆಕೆಆರ್ಟಿಸಿ ತಾತ್ಕಲಿಕವಾಗಿ ಸ್ಥಗಿತಗೊಳಿಸಿದೆ. ಪರಿಸ್ಥಿತಿ ಹತೋಟಿಗೆ ಬಂದ ಬಳಿಕ ಪುನಃ ಬಸ್ ಸಂಚಾರ ಆರಂಭವಾಗಲಿದೆ.
ಪ್ರತಿಭಟನಾನಿರತರು ಬಸ್ಗೆ ಬೆಂಕಿ ಹಚ್ಚಿದರೂ ಸಹ ಸ್ಥಳೀಯ ಪೊಲೀಸರ ನೆರವಿನಿಂದ ಬಸ್ನಲ್ಲಿದ್ದ ಪ್ರಯಾಣಿಕರನ್ನು ಸುರಕ್ಷಿತವಾಗಿ ಅವರು ತಲುಪಬೇಕಾದ ಸ್ಥಳಕ್ಕೆ ಪರ್ಯಾಯ ಸಾರಿಗೆ ವ್ಯವಸ್ಥೆ ಮೂಲಕ ಕಳಿಸಿ ಕೊಡಲಾಗಿದೆ.
ಇನ್ನೂ ಮಹಾರಾಷ್ಟ್ರದಲ್ಲಿ ಕಾರ್ಯಚರಣೆಯಲ್ಲಿರುವ ಬಸ್ಗಳನ್ನು ಹತ್ತಿರದ ಪೊಲೀಸ್ ಠಾಣೆ, ಬಸ್ ಡಿಪೋಗಳಲ್ಲಿ ನಿಲುಗಡೆ ಮಾಡಲು ಸಂಸ್ಥೆಯ ಸಿಬ್ಬಂದಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಮಹಾರಾಷ್ಟ್ರದಲ್ಲಿ ತೀವ್ರಗೊಂಡ ಹೋರಾಟ; ಮೀಸಲಾತಿ ನೀಡುವಂತೆ ಒತ್ತಾಯಿಸಿ ಮರಾಠ ಸಮುದಾಯ ನಡೆಸುತ್ತಿರುವ ಹೋರಾಟ ಮಹಾರಾಷ್ಟ್ರದಲ್ಲಿ ತೀವ್ರಗೊಂಡಿದೆ. ಸೋಮವಾರ ರಾತ್ರಿ ನಡೆದ ಪ್ರತಿಭಟನೆಯ ವೇಳೆ ಕೆಕೆಆರ್ಟಿಸಿ ಬಸ್ಗಳಿಗೆ ಬೆಂಕಿ ಹಚ್ಚಲಾಗಿದೆ.
ಮೀಸಲಾತಿಗೆ ಆಗ್ರಹಿಸಿ ಹಲವು ದಿನಗಳಿಂದ ಮಹಾರಾಷ್ಟ್ರದಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಸೋಮವಾರ ರಾಜ್ಯದ ಹಲವು ಕಡೆ ಈ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಕರ್ನಾಟಕದ ಬಸ್ಗೆ ಬೆಂಕಿ ಹಚ್ಚುವ ಮೂಲಕ ಪ್ರತಿಭಟನಾನಿರತರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಸ್ಗೆ ಬೆಂಕಿ ಹಚ್ಚಿದ ಪ್ರಕರಣದ ಬಳಿಕ ಮಂಗಳವಾರ ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಹುಬ್ಬಳ್ಳಿ ಸೇರಿದಂತೆ ವಿವಿಧ ಕಡೆಗಳಿಂದ ಮಹಾರಾಷ್ಟ್ರಕ್ಕೆ ಸಂಚಾರ ನಡೆಸಬೇಕಿದ್ದ ಬಸ್ಗಳ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ.
ಮೀಸಲಾತಿ ನೀಡುವಂತೆ ಒತ್ತಾಯಿಸಿ ಮರಾಠ ಸಮುದಾಯ ನಡೆಸುತ್ತಿರುವ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಮಹಾರಾಷ್ಟ್ರ ವಿಧಾನಸಭೆ ವಿಶೇಷ ಅಧಿವೇಶನ ಕರೆಯಬೇಕು ಎಂದು ಒತ್ತಾಯಿಸಿ ನವೆಂಬರ್ 1ರಿಂದ ಪ್ರತಿಭಟನೆ ತೀವ್ರಗೊಳಿಸುತ್ತೇವೆ ಎಂದು ಹೋರಾಟಗಾರ ಮನೋಜ್ ಜಾರಂಗೆ ಪಾಟೀಲ್ ಎಚ್ಚರಿಕೆ ನೀಡಿದ್ದಾರೆ.
ವಿಶೇಷ ಅಧಿವೇಶನ ಕರೆಯುವ ಕುರಿತು ಚರ್ಚಿಸಿ, ದಿನಾಂಕ ನಿಗದಿ ಮಾಡಿ. ಇಲ್ಲದಿದ್ದರೆ ನಾವು ಅಕ್ಟೋಬರ್ 31ರಂದು ಮತ್ತೊಮ್ಮೆ ಸಭೆ ಸೇರಿ ಭವಿಷ್ಯದ ಹೋರಾಟದ ಕುರಿತು ತೀರ್ಮಾನ ಕೈಗೊಳ್ಳುತ್ತೇವೆ. ನೀವು ಮರಾಠಿಗರಿಗೆ ಮೀಸಲಾತಿ ನೀಡಬೇಕು ಎಂದು ಮನೋಜ್ ಪಾಟೀಲ್ ಒತ್ತಾಯಿಸಿದ್ದಾರೆ.
ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ನವದೆಹಲಿಗೆ ತೆರಳಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆ ರಾಜ್ಯದ ಮೀಸಲಾತಿ ಹೋರಾಟದ ಕುರಿತು ಚರ್ಚೆ ನಡೆಸಿದ್ದಾರೆ ಎಂಬ ಮಾಹಿತಿ ಇದೆ.
ಮಹಾರಾಷ್ಟ್ರದ ಮರಾಠ ಮೀಸಲಾತಿ ಶಾಸನವನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ. ಆದ್ದರಿಂದ ಇತರ ಹಿಂದುಳಿದ ವರ್ಗ (ಒಬಿಸಿ) ಮೀಸಲಾತಿಯ ಪ್ರಯೋಜನಗಳನ್ನು ಪಡೆಯಲು ಮರಾಠಿಗರಿಗೆ ಕುಂಬಿ ಜಾತಿ ಪ್ರಮಾಣ ಪತ್ರವನ್ನು ನೀಡಬೇಕು ಎಂದು ಹೋರಾಟ ನಡೆಸಲಾಗುತ್ತಿದೆ.












Click it and Unblock the Notifications