ಲೋಕಸಭೆ ಚುನಾವಣೆ: ಕಲಬುರಗಿ ಮತದಾರರು, ವಿಧಾನಸಭಾ ಕ್ಷೇತ್ರ ಮಾಹಿತಿ
ಕಲಬುರಗಿ, ಮಾರ್ಚ್ 19: ಕೇಂದ್ರ ಚುನಾವಣಾ ಆಯೋಗ ಕಲಬುರಗಿ ಲೋಕಸಭೆ ಕ್ಷೇತ್ರದ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದೆ. 9 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಮಾರ್ಚ್ 16ರಿಂದಲೇ ಮಾದರಿ ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದಿದೆ. ಮೇ 7ರಂದು ಮತದಾನ ನಡೆಯಲಿದ್ದು, ಜೂನ್ 4ರಂದು ಮತ ಎಣಿಕೆ ನಡೆಯಲಿದೆ.
ಕಲಬುರಗಿ ಲೋಕಸಭಾ ಕ್ಷೇತ್ರದ ಚುನಾವಣೆ ಸಿದ್ಧತೆಗಳ ಕುರಿತು ಕಲಬುರಗಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾಧಿಕಾರಿ ಬಿ. ಫೌಜಿಯಾ ತರನ್ನುಮ್ ಮಾಹಿತಿ ನೀಡಿದ್ದಾರೆ. ನೀತಿ ಸಂಹಿತೆ ಜಾರಿಯಾದ ಹಿನ್ನಲೆಯಲ್ಲಿ ಚುನಾಯಿತ ಜನಪ್ರತಿನಿಧಿಗಳಿಗೆ, ನಿಗಮ-ಮಂಡಳಿ ಅಧ್ಯಕ್ಷರಿಗೆ ನೀಡಲಾದ ಸರ್ಕಾರಿ ವಾಹನ ಹಿಂಪಡೆಯಲಾಗಿದೆ. ಸರ್ಕಾರಿ ವಸತಿ ಗೃಹಗಳನ್ನು ಸಹ ವಶಕ್ಕೆ ಪಡೆಯಲಾಗುತ್ತದೆ.

ಏಪ್ರಿಲ್ 12ರಂದು ಚುನಾವಣಾ ಅಧಿಸೂಚನೆ ಪ್ರಕಟವಾಗಲಿದೆ. ಏಪ್ರಿಲ್ 19ರ ತನಕ ನಾಮಪತ್ರ ಸಲ್ಲಿಸಲು ಅವಕಾಶವಿದೆ. ಏಪ್ರಿಲ್ 20ಕ್ಕೆ ನಾಮಪತ್ರ ಪರಿಶೀಲನಾ ಕಾರ್ಯ ನಡೆಯಲಿದೆ. ಏಪ್ರಿಲ್ 22ಕ್ಕೆ ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನ. ಮೇ 7ಕ್ಕೆ ಮತದಾನ ನಡೆಯಲಿದೆ.
ಮತದಾರರ ವಿವರಗಳು: ಕಲಬುರಗಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಅಫಜಲಪೂರ, ಜೇವರ್ಗಿ, ಚಿತ್ತಾಪೂರ, ಗುಲಬರ್ಗಾ ದಕ್ಷಿಣ, ಗುಲಬರ್ಗಾ ಉತ್ತರ, ಗುಲಬರ್ಗಾ ಗ್ರಾಮೀಣ, ಸೇಡಂ ಮತ್ತು ಯಾದಗಿರಿ ಜಿಲ್ಲೆಯ ಗುರುಮಠಕಲ್ ವಿಧಾನ ಕ್ಷೇತ್ರಗಳು ಬರಲಿವೆ. ಆದರೆ ಜಿಲ್ಲೆಯ ಆಳಂದ ಮತ್ತು ಚಿಂಚೋಳಿ ವಿಧಾನಸಭಾ ಕ್ಷೇತ್ರಗಳು ಬೀದರ್ ಲೋಕಸಭಾ ಕ್ಷೇತ್ರಕ್ಕೆ ಒಳಪಡುತ್ತವೆ.
9 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ 2,378 ಮತಗಟ್ಟೆ ಸ್ಥಾಪಿಸಲಾಗುತ್ತದೆ. 11,43,159 ಪುರುಷರು ಮತ್ತು 11,25,463 ಮಹಿಳೆಯರು, ಇತರೆ 322 ಸೇರಿ 22,68,944 ಮತದಾರರು ಇದ್ದಾರೆ. ಇದುವರೆಗೆ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸದವರು ನಾಮಪತ್ರ ಸಲ್ಲಿಕೆ ಕೊನೆ ದಿನಾಂಕದ 10 ದಿನಗಳ ಮುಂಚಿನ ತನಕವೂ ಆನ್ಲೈನ್ ಮೂಲಕ ಹೆಸರು ನೋಂದಾಯಿಸಬಹುದಾಗಿದೆ.
ಪ್ರತಿ ಮತಗಟ್ಟೆಯಲ್ಲಿ ಕುಡಿಯುವ ನೀರು, ಶೌಚಾಲಯ, ನೆರಳಿನ ವ್ಯವಸ್ಥೆ, ಹಿರಿಯರು ಮತ್ತು ವಿಕಲಚೇತನರಿಗೆ ಅಗತ್ಯ ವ್ಯವಸ್ಥೆ ಮಾಡಲಾಗಿದೆ. 85 ವರ್ಷ ಮೇಲ್ಪಟ್ಟ ವಯೋವೃದ್ಧರು, ವಿಶೇಷ ಚೇತನರಿಗೆ ಮತಗಟ್ಟೆಗೆ ಬಂದು ಮತದಾನ ಮಾಡಲು ಸಾಧ್ಯವಾಗದಿದ್ದಲ್ಲಿ ಅಂತಹ ಮತದಾರರ ಮನೆಗೆ 12ಡಿ ನಮೂನೆ ನೀಡಿ ಮನೆಯಿಂದಲೇ ಮತದಾನಕ್ಕೆ ಅವಕಾಶ ನೀಡಲಾಗುತ್ತದೆ.
39 ಚೆಕ್ ಪೋಸ್ಟ್ ಸ್ಥಾಪನೆ: ಕಲಬುರಗಿ ಮಹಾರಾಷ್ಟ್ರ ಮತ್ತು ತೆಲಾಂಗಾಣ ಜೊತೆ ಗಡಿ ಹಂಚಿಕೊಳ್ಳಲಿದೆ. ಆದ್ದರಿಂದ ಜಿಲ್ಲೆಯಾದ್ಯಂತ 39 ಚೆಕ್ ಪೋಸ್ಟ್ ಸ್ಥಾಪಿಸಲಾಗಿದೆ. 40 ಫ್ಲೈಯಿಂಗ್ ಸ್ಕ್ವಾಡ್ ತಂಡ, 9 ವಿ.ಎಸ್.ಟಿ. ತಂಡ, 9 ವಿ.ವಿ.ಟಿ. ತಂಡ, 10 ಖರ್ಚು ವೆಚ್ಚಗಳ ತಂಡ ರಚಿಸಲಾಗಿದೆ. ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಜಾರಿಗೆ ತರಲು 202 ಜನರನ್ನು ಸೆಕ್ಟರ್ ಅಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ.
ಮಾದರಿ ನೀತಿ ಸಂಹಿತೆ ಜಾರಿಯಾಗಿರುವುದರಿಂದ ರಾಜಕೀಯ ಸಭೆ, ಸಮಾರಂಭಕ್ಕೆ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಜಿಲ್ಲಾಧಿಕಾರಿಗಳ ಕಚೇರಿ ಅಥವಾ ತಾಲೂಕಾ ಮಟ್ಟದಲ್ಲಿ ಸಹಾಯಕ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಅಥವಾ ಸುವಿಧಾ ತಂತ್ರಾಶದ ಮೂಲಕ ಪರವಾನಿಗೆ ಪಡೆಯಬೇಕು. ಅತಿಥಿಗೃಹಗಳು ಜಿಲ್ಲಾ ಚುನಾವಣಾಧಿಕಾರಿಗಳ ವಶದಲ್ಲಿ ಇರಲಿದ್ದು, ರಾಜಕೀಯ ಪಕ್ಷಗಳಿಗೆ, ಅಭ್ಯರ್ಥಿಗಳಿಗೆ ಪ್ರವಾಸಿ ಮಂದಿರ ನಿಷೇಧಿಸಲಾಗಿದೆ.
ಮತದಾರರ ಮೇಲೆ ಪ್ರಭಾವ ಭೀರುವ ಸರ್ಕಾರಿ ಯೋಜನೆಗಳನ್ನು ಸ್ಥಗಿತಗೊಳಿಸಲಾಗುವುದು. ಆದರೆ ಕುಡಿಯುವ ನೀರು, ಬರ ಪರಿಹಾರ ಕಾರ್ಯಗಳು ಎಂದಿನಂತೆ ನಡೆಯಲಿವೆ ಎಂದು ಸ್ಪಷ್ಟಪಡಿಸಲಾಗಿದೆ. ಚುನಾವಣೆ ಮುಕ್ತ ಮತ್ತು ನ್ಯಾಯಸಮ್ಮತವಾಗಿ ನಡೆಯಲು ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಎಲ್ಲಾ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.












Click it and Unblock the Notifications