ಚುನಾವಣೆಗೂ ಮುನ್ನ ಮಲ್ಲಿಕಾರ್ಜುನ ಖರ್ಗೆ ತವರು ಜಿಲ್ಲೆಗೆ 1.4 ಸಾವಿರ ಕೋಟಿ ರೂ.ಕೊಡುಗೆ!
ಕಲಬುರಗಿ, ಮಾರ್ಚ್ 14: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರ ಜಿಲ್ಲೆ ಕಲಬುರಗಿಯಲ್ಲಿ ಈ ಬಾರಿಯೂ ಕಾಂಗ್ರೆಸ್ ಅನ್ನು ಕಟ್ಟಿಹಾಕಲು ಬಿಜೆಪಿ ಪಣ ತೊಟ್ಟಿದೆ. ಹಾಲಿ ಸಂಸದ ಉಮೇಶ್ ಜಾಧವ್ ಅವರನ್ನು ಮತ್ತೆ ಕಣಕ್ಕಿಳಿಸಿದೆ. ಇದೆ ವೇಳೆ ಮತ್ತೆ ಕಲಬುರಗಿಯನ್ನು ಗೆಲ್ಲುವ ವಿಶ್ವಾಸದಲ್ಲಿರುವ ಕಾಂಗ್ರೆಸ್ ಹಲವು ಅಭಿವೃದ್ಧಿ ಕೆಲಸಗಳಿಗೆ ಕೈ ಹಾಕಿದೆ.
ಇದೇ ಕಾರಣಕ್ಕೆ ಕಲಬುರಗಿಯಲ್ಲಿ ಸಾವಿರಾರು ಕೋಟಿ ರೂಪಾಯಿಯ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಲೋಕಸಭೆ ಚುನಾವಣೆ ವೇಳಾಪಟ್ಟಿ ಘೋಷಣೆಗೂ ಮುನ್ನ ತವರು ಜಿಲ್ಲೆ ಕಲಬುರಗಿಯಲ್ಲಿ 1,464 ಕೋಟಿ ರೂ.ಗಳ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ.

ಇದೇ ವೇಳೆ ಕಾರ್ಯಕ್ರಮದಲ್ಲಿ ಕಳೆದ ವಾರ ಚುನಾವಣಾ ಪೂರ್ವ ಭರವಸೆಗಳ ಭಾಗವಾಗಿ ಕಾಂಗ್ರೆಸ್ ಘೋಷಿಸಿದ ಐದು ಗ್ಯಾರಂಟಿಗಳು ಮತ್ತು ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದ ಐದು ಗ್ಯಾರಂಟಿಗಳ ಸುತ್ತ ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ್ದಾರೆ.
ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರ ವೇತನವನ್ನು ದ್ವಿಗುಣಗೊಳಿಸುವ ಕ್ರಮಗಳು, ಮಹಿಳೆಯರಿಗೆ ವಸತಿ ನಿಲಯಗಳ ನಿರ್ಮಾಣದ ಜೊತೆಗೆ ದೇಶಾದ್ಯಂತ ಸರ್ಕಾರಿ ವಲಯದಲ್ಲಿ ಖಾಲಿ ಇರುವ 30 ಲಕ್ಷ ಹುದ್ದೆಗಳನ್ನು ಭರ್ತಿ ಮಾಡುವ ಭರವಸೆಯನ್ನು ಕಾಂಗ್ರೆಸ್ 'ಪೆಹಲಿ ನೌಕ್ರಿ ಪಕ್ಕ' ಯೋಜನೆಯಲ್ಲಿ ಘೋಷಿಸಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಜಾತಿಗಣತಿ ವರದಿ ಆಧರಿಸಿ ಬಡವರಿಗೆ ಶಿಕ್ಷಣ ನೀಡಲು ಹಾಗೂ ಅವರ ಆದಾಯ ಹೆಚ್ಚಿಸಲು ಕ್ರಮಕೈಗೊಳ್ಳಲಾಗುವುದು. ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ರೈತರ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸಲಾಗುವುದು ಎಂದು ಮತ್ತಷ್ಟು ಭರವಸೆಗಳನ್ನು ಕಲಬುರಗಿಯಲ್ಲಿ ನಿಂತು ಜನರಿಗೆ ನೀಡಿದ್ದಾರೆ.

1,464 ಕೋಟಿ ರೂ.ಗಳ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಮಲ್ಲಿಕಾರ್ಜುನ ಖರ್ಗೆ, "ಸಂವಿಧಾನದ 371 ಜೆ ಕಲಂ ತಿದ್ದುಪಡಿ ಮೂಲಕ ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ನೀಡಲು ಬಿಜೆಪಿ ನಾಯಕರು ನಿರಾಕರಿಸಿದ್ದಾರೆ. ಅವರು ನಮ್ಮ ಜ್ಞಾಪಕ ಪತ್ರವನ್ನು ಕಸದ ಬುಟ್ಟಿಗೆ ಎಸೆದಿದ್ದರು. ಅವರಿಗೆ ಕ್ಷೇತ್ರದ ಜನರಿಂದ ಮತ ಕೇಳುವ ನೈತಿಕ ಹಕ್ಕಿದೆಯೇ..?. ಕ್ಷೇತ್ರಕ್ಕೆ ಏನು ಅಭಿವೃದ್ಧಿ ಕೆಲಸ ಮಾಡಿದ್ದಾರೆ ಎಂಬುದನ್ನು ತೋರಿಸಲಿ" ಎಂದು ಪ್ರಶ್ನಿಸಿದ್ದಾರೆ.
ಇದೇ ವೇಳೆ ಯಾವುದೇ ನಿರ್ಬಂಧಗಳಿಲ್ಲದೆ ಚುನಾವಣಾ ಬಾಂಡ್ಗಳ ಯೋಜನೆಯ ಮೂಲಕ ಬಿಜೆಪಿ ಒಂದೇ ದಿನದಲ್ಲಿ 335 ಕೋಟಿ ರೂಪಾಯಿಗಳ ಬಹಿರಂಗಪಡಿಸದ ಕಾರ್ಪೊರೇಟ್ ಹಣವನ್ನು ಸ್ವೀಕರಿಸಿದೆ ಎಂದು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.












Click it and Unblock the Notifications