ಖರ್ಗೆ ಸೋಲಿಸಲು ಕಾಂಗ್ರೆಸ್ ಶಾಸಕನನ್ನು ಕಣಕ್ಕಿಳಿಸಲಿದೆ ಬಿಜೆಪಿ?
Recommended Video

ಕಲಬುರಗಿ, ಅಕ್ಟೋಬರ್ 01 : ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಬಾರದು ಎಂದು ಪಕ್ಷದ ಹೈಕಮಾಂಡ್ ಕರ್ನಾಟಕ ಬಿಜೆಪಿ ನಾಯಕರಿಗೆ ಸೂಚನೆ ಕೊಟ್ಟಿದೆ. ಆದ್ದರಿಂದ, ಕಾಂಗ್ರೆಸ್ ಶಾಸಕರನ್ನು ಖರ್ಗೆ ವಿರುದ್ಧ ಕಣಕ್ಕಿಳಿಸಲು ಬಿಜೆಪಿ ತಂತ್ರ ರೂಪಿಸಿದೆ.
ಅಚ್ಚರಿಯ ಸಂಗತಿಯಾದರೂ ಇದು ಸತ್ಯ. ಈಗಾಲೇ ಬಿಜೆಪಿ ಕಾಂಗ್ರೆಸ್ ಶಾಸಕರಿಗೆ ಪಕ್ಷಕ್ಕೆ ಸೇರುವಂತೆ ಆಹ್ವಾನ ನೀಡಿದ್ದೂ ಆಗಿದೆ. ಅದನ್ನು ಅವರು ನಯವಾಗಿ ತಿರಸ್ಕರಿಸಿದ್ದೂ ಆಗಿದೆ. ಆದರೆ, ಖರ್ಗೆ ಸೋಲಿಸಲು ಬಿಜೆಪಿ ತಂತ್ರ ಮಾಡುತ್ತಿರುವುದಂತೂ ಗುಟ್ಟಾಗಿ ಉಳಿದಿಲ್ಲ.
ಚಿಂಚೋಳಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಾ.ಉಮೇಶ್ ಜಾಧವ್ ಅವರನ್ನು ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಕಲಬುರಗಿ ಕ್ಷೇತ್ರದಿಂದ ಕಣಕ್ಕಿಳಿಸಲು ಬಿಜೆಪಿ ತಂತ್ರ ರೂಪಿಸಿತ್ತು. ಆದರೆ, ಇದಕ್ಕೆ ಪ್ರಾಥಮಿಕ ಹಂತದಲ್ಲಿಯೇ ವಿಘ್ನ ಎದುರಾಗಿದೆ.
2 ಬಾರಿ ಲೋಕಸಭೆಗೆ, 9 ಬಾರಿ ವಿಧಾನಸಭೆಗೆ ಆರಿಸಿ ಬಂದಿರುವ ಮಲ್ಲಿಕಾರ್ಜುನ ಖರ್ಗೆ ಅವರು ಸೋಲಿಲ್ಲದ ಸರದಾರ ಎಂದು ಖ್ಯಾತಿ ಪಡೆದಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ದೊಡ್ಡ ಹುದ್ದೆಯಲ್ಲಿರುವ ಅವರನ್ನು ಸೋಲಿಸಿ ಪಕ್ಷಕ್ಕೆ ಮುಖಭಂಗ ಉಂಟು ಮಾಡುವುದು ಬಿಜೆಪಿಯ ಗುರಿಯಾಗಿದೆ....

ಡಾ.ಉಮೇಶ್ ಜಾಧವ್
ಚಿಂಚೋಳಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಾ.ಉಮೇಶ್ ಜಾಧವ್ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡು 2019ರ ಲೋಕಸಭೆ ಚುನಾವಣೆಯಲ್ಲಿ ಕಲಬುರಗಿ ಕ್ಷೇತ್ರದಿಂದ ಕಣಕ್ಕಿಳಿಸುವುದು ಬಿಜೆಪಿ ತಂತ್ರವಾಗಿದೆ. 2018ರ ವಿಧಾನಸಭೆ ಚುನಾವಣೆಯಲ್ಲಿ ಉಮೇಶ್ ಜಾಧವ್ ಅವರು 73,905 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ.

ಬಿಜೆಪಿಗೆ ಹೋಗಲ್ಲ ಅಂದ್ರು ಶಾಸಕರು
ಬಿಜೆಪಿ ಉಮೇಶ್ ಜಾಧವ್ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಲು ಕೇವಲ ತಂತ್ರ ರೂಪಿಸಿಲ್ಲ. ಪಕ್ಷಕ್ಕೆ ಅವರನ್ನು ಆಹ್ವಾನಿಸಿದೆ. ಮಾಧ್ಯಮಗಳ ಜೊತೆ ಮಾತನಾಡಿರುವ ಉಮೇಶ್ ಜಾಧವ್ ಅವರು, 'ಬಿಜೆಪಿಯಿಂದ ನನಗೆ ಆಹ್ವಾನ ಬಂದಿತ್ತು. ಕಾಂಗ್ರೆಸ್ನಲ್ಲಿ ನಿಮಗೆ ಸಚಿವ ಸ್ಥಾನ, ನಿಗಮ/ಮಂಡಳಿ ಅಧ್ಯಕ್ಷ ಸ್ಥಾನ ಸಿಗುವುದಿಲ್ಲ. ಪಕ್ಷಕ್ಕೆ ಬನ್ನಿ ಎಂದು ಆಹ್ವಾನಿಸಿದೆ. ಆದರೆ, ನಾನು ಕಾಂಗ್ರೆಸ್ ಬಿಟ್ಟು ಹೋಗುವುದಿಲ್ಲ. ಮಲ್ಲಿಕಾರ್ಜುನ ಖರ್ಗೆ ನಮ್ಮ ನಾಯಕರು ಅವರ ವಿರುದ್ದ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ' ಎಂದು ಸ್ಪಷ್ಟಪಡಿಸಿದ್ದಾರೆ.

ಬಾಬೂರಾವ್ ಚಿಂಚನಸೂರು ಬಿಜೆಪಿಗೆ
ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸಬೇಕು ಎಂದು ಪಣ ತೊಟ್ಟಿರುವ ಬಿಜೆಪಿ ಅದಕ್ಕಾಗಿ ವೇದಿಕೆ ಸಿದ್ಧಪಡಿಸುತ್ತಿದೆ. ಈಗಾಗಲೇ ಅಫಜಪುರ ಕ್ಷೇತ್ರದ ಮಾಜಿ ಶಾಸಕ ಮಾಲೀಕಯ್ಯ ಗುತ್ತೇದಾದ್ ಬಿಜೆಪಿ ಸೇರಿದ್ದಾರೆ. ಆಗಸ್ಟ್ ತಿಂಗಳಿನಲ್ಲಿ ಮಾಜಿ ಸಚಿವ ಬಾಬೂರಾವ್ ಚಿಂಚನಸೂರು ಅವರು ಬಿಜೆಪಿ ಸೇರಿದ್ದರು. ಎಲ್ಲಾ ಪ್ರಬಲ ನಾಯಕರನ್ನು ಒಟ್ಟು ಹಾಕಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕಟ್ಟಿ ಹಾಕುವುದು ಬಿಜೆಪಿಯ ತಂತ್ರವಾಗಿದೆ.

ಬಿಜೆಪಿಗೆ ಅಭ್ಯರ್ಥಿ ಕೊರತೆ
ಮಲ್ಲಿಕಾರ್ಜುನ ಖರ್ಗೆ ಅವರ ಎದುರು ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಾಗಿ ಬಿಜೆಪಿ ಹುಡುಕಾಟ ನಡೆಸುತ್ತಿದೆ. 2014ರ ಚುನಾವಣೆಯಲ್ಲಿ ರೇವು ನಾಯಕ್ ಬೆಳಮಗಿ ಸ್ಪರ್ಧಿಸಿದ್ದರು. 432460 ಮತಗಳನ್ನು ಪಡೆದು ಸೋಲು ಕಂಡಿದ್ದರು. ಆದರೆ, ಈಗ ಅವರು ಜೆಡಿಎಸ್ ಸೇರಿದ್ದಾರೆ. ಆದ್ದರಿಂದ, ಬಿಜೆಪಿಗೆ ಅಭ್ಯರ್ಥಿಗಳ ಕೊರತೆ ಎದುರಾಗಿದೆ.

ಕೆ.ರತ್ನಪ್ರಭಾ ಅವರ ಹೆಸರು ಮುಂಚೂಣಿಯಲ್ಲಿ
ಕಲಬುರಗಿ ಕ್ಷೇತ್ರದಿಂದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಕರ್ನಾಟಕ ಸರ್ಕಾರ ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ ಅವರು ಸ್ಪರ್ಧಿಸುವ ಸಾಧ್ಯತೆ ಇದೆ. ರತ್ನಪ್ರಭಾ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಿದರೆ ಪ್ರಜ್ಞಾವಂತರ ಮತಗಳ ಜೊತೆ ದಲಿತರ ಮತಗಳನ್ನು ಸಹ ಸೆಳೆಯಬಹುದು ಎಂಬುದು ಬಿಜೆಪಿಯ ಲೆಕ್ಕಾಚಾರವಾಗಿದೆ. ಬಿಜೆಪಿ ಅಭ್ಯರ್ಥಿ ಯಾರಾಗಲಿದ್ದಾರೆ? ಎಂದು ಕಾದು ನೋಡಬೇಕಾಗಿದೆ.












Click it and Unblock the Notifications