ಕಲಬುರಗಿ; ಪ್ರವಾಹದಿಂದ ಜೀವಹಾನಿಯಾದರೆ 24 ಗಂಟೆಯಲ್ಲೇ ಪರಿಹಾರ
ಕಲಬುರಗಿ, ಮೇ 26; "ಮಳೆ ಮತ್ತು ಪ್ರವಾಹದಿಂದ ಮನೆ ಮತ್ತು ಜೀವ ಹಾನಿ ಪ್ರಕರಣದಲ್ಲಿ 24 ಗಂಟೆಯೊಳಗೆ ತ್ವರಿತವಾಗಿ ಸಂತ್ರಸ್ತರ ಮನೆ ಬಾಗಿಲಿಗೆ ಹೋಗಿ ಪರಿಹಾರ ನೀಡಬೇಕು. ಸಂತ್ರಸ್ತರಿಗೆ ನೀಡಲಾದ ಪರಿಹಾರದ ಕುರಿತ ವಿವರವನ್ನು ಆಯಾ ಗ್ರಾಮದ ಚಾವಡಿ ಮತ್ತು ಪಟ್ಟಣಗಳ ವಾರ್ಡ್ವಾರು ಸಾರ್ವಜನಿಕವಾಗಿ ಪ್ರಕಟಿಸಬೇಕು" ಎಂದು ಕಲಬುರಗಿ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಸೂಚನೆ ನೀಡಿದರು.
ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಯಿತು. ಜಿಲ್ಲಾಧಿಕಾರಿ ಮತ್ತು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಯಶವಂತ ವಿ. ಗುರುಕರ್ ಮಳೆಗಾಲ ಎದುರಿಸುವ ಕುರಿತು ಅಧಿಕಾರಿಗಳಿಗೆ ಹಲವು ನಿರ್ದೇಶನಗಳನ್ನು ನೀಡಿದರು.

ಯಶವಂತ ವಿ. ಗುರುಕರ್ ಮಾತನಾಡಿ, "ವಾಡಿಕೆಯಂತೆ ಜೂನ್ ಮೊದಲನೇ ವಾರದಲ್ಲಿ ಜಿಲ್ಲೆಯಲ್ಲಿ ಮುಂಗಾರು ಮಳೆ ಆರಂಭವಾಗಲಿದ್ದು, ಮಳೆ ಮತ್ತು ಪ್ರವಾಹದಿಂದ ಉಂಟಾಗುವ ಅವಾಂತರ ತಡೆಗಟ್ಟಲು ಈಗಿನಿಂದಲೆ ಸಿದ್ಧತೆ ಮಾಡಿಕೊಳ್ಳಬೇಕು. ಮಳೆಗಾಲದಲ್ಲಿ ಯಾವುದೇ ರೀತಿಯ ಮಾನವ, ಪ್ರಾಣ ಹಾನಿಯಾಗದಂತೆ ಮುನ್ನೆಚ್ಚರಿಕೆ ವಹಿಸುವುದು ನಮ್ಮ ಮೊದಲ ಆದ್ಯತೆ ಆಗಬೇಕು ಎಂದರು" ಎಂದರು.
ಸ್ಥಳಾಂತರಕ್ಕೆ ವ್ಯವಸ್ಥೆ; ಅಫಜಲಪುರ, ಜೇವರ್ಗಿ ಹಾಗೂ ಚಿತ್ತಾಪುರ ತಾಲೂಕಿನ ನದಿ ದಂಡೆಯಲ್ಲಿ ವಾಸಿಸುವ ಗ್ರಾಮಸ್ಥರನ್ನು ಅಗತ್ಯವಿದ್ದಲ್ಲಿ ಸ್ಥಳಾಂತರಕ್ಕೆ ಬೇಕಾದ ಮುನ್ನಚ್ಚರಿಕೆ ಕ್ರಮ ಕೈಗೊಳ್ಳಬೇಕು. ಜಿಲ್ಲಾ ಮಟ್ಟದ ಅಧಿಕಾರಿಗಳು ಒಳಗೊಂಡ ರೆಸ್ಕ್ಯೂ ತಂಡಗಳನ್ನು ರಚಿಸಬೇಕು. ಬೋಟಿಂಗ್ ವ್ಯವಸ್ಥೆ ಮಾಡಿಕೊಳ್ಳಬೇಕು. ಗ್ರಾಮ ಲೆಕ್ಕಾಧಿಕಾರಿಗಳು ಗ್ರಾಮದಲ್ಲಿಯೇ ಇರಬೇಕು, ಗ್ರಾಮದ ನಕ್ಷೆ, ಜನಸಂಖ್ಯೆ, ಜಾನುವಾರುಗಳ ಸಂಖ್ಯೆ ಹಾಗೂ ಗ್ರಾಮದಲ್ಲಿ ಬೆಳೆಯಲಾದ ಬೆಳೆ ವಿವರ ಸೇರಿದಂತೆ ಇನ್ನಿತರ ಅಗತ್ಯ ಮಾಹಿತಿ ಇಟ್ಟುಕೊಳ್ಳಬೇಕು ಎಂದು ನಿರ್ದೇಶನ ನೀಡಲಾಗಿದೆ.

ಮಳೆಗಾಲ ಸಂದರ್ಭದಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ವಿಶೇಷವಾಗಿ ಹಾವು ಕಚ್ಚಿದಲ್ಲಿ ಅದರ ಚಿಕಿತ್ಸೆಗೆ ಬೇಕಾಗುವ ಅಗತ್ಯ ಔಷಧಿಗಳನ್ನು ಪಿಎಚ್ಸಿಗಳಲ್ಲಿ ದಾಸ್ತಾನು ಮಾಡಿಕೊಳ್ಳಬೇಕು. ಕಲಬುರಗಿ ನಗರ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ಕುಡಿಯುವ ನೀರು ಪೂರೈಸುವ ಪೈಪ್ಲೈನ್ ಸರಿಯಾಗಿ ಕಾರ್ಯನಿರ್ವಹಿಸುತ್ತಿವೆ ಎನ್ನುವುದನ್ನು ಪರೀಕ್ಷಿಸಬೇಕು. ಎಲ್ಲಾದರು ಸೋರಿಕೆ ಇದಲ್ಲಿ ದುರಸ್ತಿ ಮಾಡಬೇಕು. ಕುಡಿಯುವ ನೀರಿನೊಂದಿಗೆ ಚರಂಡಿ ಸೇರದಂತೆ ಎಚ್ಚರ ವಹಿಸಬೇಕು ಎಂದು ಆರೋಗ್ಯ ಇಲಾಖೆಗೆ ಸೂಚಿಸಲಾಯಿತು.
ಎಲ್ಲಾ ಪೌರ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯತಿಗಳಲ್ಲಿ ನೀರು ಸರಾಗವಾಗಿ ಹೋಗಲು ಚರಂಡಿಗಳನ್ನು ಸ್ವಚ್ಛವಾಗಿಟ್ಟಿಕೊಳ್ಳಬೇಕು. ರಸ್ತೆ ಬದಿಯಲ್ಲಿ ವಿದ್ಯುತ್ ಕಂಬಗಳಿಗೆ ಗಿಡಗಳು ಹಬ್ಬಿದ್ದಲ್ಲಿ ಅದನು ಭಾಗಶಃ ಕತ್ತರಿಸಿ ವಿದ್ಯುತ್ ಅವಘಡವಾಗದಂತೆ ನೋಡಿಕೊಳ್ಳಬೇಕು. ಬೀಳುವ ಹಂತದಲ್ಲಿರುವ ವಿದ್ಯುತ್ ಕಂಬಗಳನ್ನು ಕೂಡಲೇ ಬದಲಾಯಿಸಬೇಕು ಎಂದು ಅಧಿಕಾರಿಗಳಿಗೆ ಡಿಸಿ ಸೂಚನೆ ಕೊಟ್ಟರು.
ಕುಡಿಯುವ ನೀರಿಗೆ ಆದ್ಯತೆ; ಜಿಲ್ಲಾಧಿಕಾರಿಗಳು ಜಿಲ್ಲೆಯಾದ್ಯಂತ ಕುಡಿಯುವ ನೀರು ಪೂರೈಕೆ ಮಾಡುವ ಟ್ಯಾಂಕರ್ಗಳನ್ನು ಸ್ಚಚ್ಚಗೊಳಿಸಬೇಕು. ಕಳೆದ ವರ್ಷ ಚಿತ್ತಾಪೂರ ತಾಲೂಕಿನ ದಂಡೋತಿ ಮತ್ತು ಜೇವರ್ಗಿ ತಾಲೂಕಿನ ಮಂದೇವಾಲ ಗ್ರಾಮದಲ್ಲಿ ಕಲುಷಿತ ನೀರು ಸೇವನೆಯಿಂದ ಆದ ಅವಾಂತರ ಮತ್ತೆ ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು. ಕಲುಷಿತ ನೀರು ಸೇವನೆಯಿಂದ ಆರೋಗ್ಯ ಹದಗೆಟ್ಟರೆ ಕೂಡಲೇ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಬೇಕು ಎಂದು ಡಿಎಚ್ಓ ತಿಳಿಸಿದರು.
ಪ್ರವಾಹದಿಂದ ಬೆಳೆ ಹಾನಿಯಾದಲ್ಲಿ ಪರಿಹಾರ ಪ್ರಕರಣದಲ್ಲಿ ಗ್ರಾಮ ಲೆಕ್ಕಿಗರು ಕಚೇರಿಯಲ್ಲಿ ಕುಳಿತು ಮಾಹಿತಿ ತಯಾರಿಸದೇ ಕ್ಷೇತ್ರಕ್ಕೆ ಭೇಟಿ ನೀಡಿ ವಾಸ್ತವ ಮಾಹಿತಿ ನೀಡಬೇಕು. ಹಿಂದಿನ ವರ್ಷದ ತಪ್ಪು ಮರುಕಳಿಸಿದಿರೆ ಅಂತಹ ಗ್ರಾಮ ಲೆಕ್ಕಗರನ್ನು ಅಮಾನತು ಮಾಡಲಾಗುವುದು. ಪರಿಹಾರ ವಿತರಣೆಯಲ್ಲಿ ಯಾವುದೇ ಪಕ್ಷಪಾತ ಸಹಿಸುವುದಿಲ್ಲ. ಅರ್ಹರಿಗೆ ಎನ್. ಡಿ. ಆರ್. ಎಫ್ ಮಾರ್ಗಸೂಚಿಯಂತೆ ಪರಿಹಾರ ನೀಡಬೇಕು ಎಂದು ಡಿಸಿ ಸೂಚಿಸಿದರು.
ಸರ್ಕಾರಿ ಶಾಲಾ ಕಟ್ಟಡಗಳು ಮಳೆಯಿಂದ ಸೋರಿಕೆ ಆಗುತ್ತಿದ್ದಲ್ಲಿ ಕೂಡಲೇ ಅಂತಹ ಕಟ್ಟಡಗಳನ್ನು ಗುರುತಿಸಿ ದುರಸ್ತಿ ಕೈಗೊಳ್ಳಬೇಕು. ವಿಪತ್ತು ಪರಿಹಾರ ನಿಧಿಯಲ್ಲಿ ಇದಕ್ಕೆ ಅನುದಾನ ನೀಡಲಾಗುವುದು. ಇದೇ ರೀತಿ ಖಾಸಗಿ ಶಾಲೆ ಮೇಲೆಯೂ ನಿಗಾ ವಹಿಸಬೇಕು. ಮೇಲ್ಚಾವಣಿ ಕುಸಿದು ಮಕ್ಕಳಿಗೆ ಹಾನಿ ಪ್ರಕರಣ ಎಲ್ಲಿಯೂ ವರದಿಯಾಗಬಾರದು. ಅಂಗನವಾಡಿ ಕಟ್ಟಡಗಳ ಬಗ್ಗೆಯೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.












Click it and Unblock the Notifications