ರಾಜೀನಾಮೆ ಬಗ್ಗೆ ಒಂದು ವಾರದಲ್ಲಿ ನಿರ್ಧಾರ: ಉಮೇಶ್ ಜಾಧವ್
ಕಲಬುರಗಿ, ಫೆಬ್ರವರಿ 15: ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುವ ಬಗ್ಗೆ ಕ್ಷೇತ್ರದಲ್ಲಿ ಸಮೀಕ್ಷೆ ಮಾಡಿಸುತ್ತಿದ್ದು, ಇನ್ನೊಂದು ವಾರದಲ್ಲಿ ಈ ಬಗ್ಗೆ ನಿರ್ಧಾರ ಪ್ರಟಿಸುತ್ತೇವೆ ಎಂದು ಕಾಂಗ್ರೆಸ್ನ ಅತೃಪ್ತ ಶಾಸಕ ಉಮೇಶ್ ಜಾಧವ್ ಹೇಳಿದ್ದಾರೆ.
ಸಂತಸೇವಾಲಾಲ ಜಯಂತಿ ಕಾರ್ಯಕ್ರಮದ ಬಳಿ ಮಾಧ್ಯಮದವರ ಜೊತೆ ಮಾತನಾಡಿರುವ ಅವರು, ಬಂಜಾರ ಸಮುದಾಯದವರು ಯಾರೂ ಸಂಸದರಾಗಿಲ್ಲ, ಹಾಗಾಗಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಒತ್ತಡ ಇದೆ ಎಂದು ಜಾಧವ್ ಅವರು ಸೂಕ್ಷ್ಮವಾಗಿ ತಾವು ಬಿಜೆಪಿ ಸೇರುವ ಗುಟ್ಟು ಬಿಟ್ಟುಕೊಟ್ಟರು.
ನನ್ನ ಸದಸ್ಯತ್ವವನ್ನು ಅನರ್ಹಗೊಳಿಸುವಂತೆ ಕಾಂಗ್ರೆಸ್ ದೂರು ನೀಡಿದೆ. ಹಾಗೇನಾದರೂ ಆದಲ್ಲಿ ಕಾನೂನು ಹೋರಾಟ ಮಾಡುತ್ತೇನೆ ಎಂದಿರುವ ಜಾಧವ್, ಪ್ರಿಯಾಂಕ್ ಖರ್ಗೆ ವಿರುದ್ಧವೂ ಪರೋಕ್ಷವಾಗಿ ಗುಡುಗಿದರು. ಸಾಮಾಜಿಕ ಜಾಲತಾಣದಲ್ಲಿ ನನ್ನ ವಿರದ್ಧ ಅಪಪ್ರಚಾರಕ್ಕೆ ಅವರೇ ಕಾರಣ ಎಂದು ಪರೋಕ್ಷವಾಗಿ ಹೇಳಿದರು.

ಕುಮಾರಸ್ವಾಮಿ ಮಂಡಿಸಿದ ಬಜೆಟ್ ಅನ್ನು ಟೀಕಿಸಿದ ಅವರು, ನನ್ನ ಕ್ಷೇತ್ರಕ್ಕೆ ಉದ್ದೇಶಪೂರ್ವಕವಾಗಿ ಏನೂ ನೀಡಿಲ್ಲ ಎಂದರು. ಕೇಂದ್ರ ಸರ್ಕಾರದ ಬಜೆಟ್ ಅನ್ನು ಹೊಗಳಿದ ಅವರು, ಆ ಬಜೆಟ್ ತೃಪ್ತಿದಾಯಕವಾಗಿದೆ ಎಂದರು.












Click it and Unblock the Notifications