ಆಪರೇಷನ್ ಕಮಲಕ್ಕೆ ಮೋದಿ, ಷಾ ಸಾಥ್: ಖರ್ಗೆ ಆರೋಪ
ಕಲಬುರಗಿ, ಫೆಬ್ರುವರಿ 9: ಕರ್ನಾಟಕದಲ್ಲಿ ನಡೆಯುತ್ತಿರುವ ಆಪರೇಷನ್ಕಮಲಕ್ಕೆ ಕೇವಲ ರಾಜ್ಯದವರು ಮಾತ್ರವಲ್ಲ ಪ್ರಧಾನಿ ಮೋದಿ, ಅಮಿತ್ ಷಾ ಕೂಡ ಸಾಥ್ ನೀಡುತ್ತಿದ್ದಾರೆ ಎಂದು ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.
ಬಜೆಟ್ ಮಂಡನೆಗೂ ಮುನ್ನ ಶುಕ್ರವಾರ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಬಿಡುಗಡೆ ಮಾಡಿರುವ ಆಡಿಯೋ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಮೋದಿ, ಅಮಿತ್ ಷಾ ಏನೇ ಮಾಡಿದರೂ ಸರ್ಕಾರವನ್ನು ಕೆಡವಲು ಸಾಧ್ಯವಿಲ್ಲ, ಆಡಿಯೋ ಕುರಿತು ತನಿಖೆ ಆಗಬೇಕು. ಮುಂದೆ ಯಾರು ಇಂತಹ ತಪ್ಪು ದಾರಿಗೆ ಇಳಿಯಲು ಧೈರ್ಯ ಮಾಡುವುದಿಲ್ಲ. ಸ್ಪೀಕರ್ ಈ ವಿಚಾರವನ್ನು ಗಂಭೀರವಾಗಿ ತೆಗೆದುಕೊಳ್ಳಬೇಕಿದೆ ಎಂದು ಹೇಳಿದರು.
ಈ ಹಿಂದೆ ಗೋವಾ, ಮಣಿಪುರ ಮತ್ತು ಉತ್ತರಾಖಂಡ್ನಲ್ಲಿ ಪ್ರಯತ್ನ ಮಾಡಿ ಸರ್ಕಾರ ರಚನೆ ಮಾಡಿದ್ದಾರೆ. ಈಗ ಅದೇ ಮಾದರಿಯಲ್ಲಿ ಕರ್ನಾಟಕದಲ್ಲಿ ಸರ್ಕಾರ ರಚನೆ ಮಾಡಲು ಮುಂದಾಗಿದ್ದಾರೆ. ಆದರೆ, ಅದು ಯಶಸ್ವಿಯಾಗುವುದಿಲ್ಲ. ಸಮ್ಮಿಶ್ರ ಸರ್ಕಾರದ ಶಾಸಕರೆಲ್ಲರೂ ಒಗ್ಗಟ್ಟಾಗಿದ್ದಾರೆ. ಮೈತ್ರಿ ಸರ್ಕಾರವನ್ನು ಅಧಿಕಾರದಿಂದ ಕೆಳಗೆ ಇಳಿಸುವುದಕ್ಕೆ ಬಿಜೆಪಿ ಸಾಕಷ್ಟು ಪ್ರಯತ್ನ ಮಾಡುತ್ತಿದೆ.

ಚುನಾವಣೆ ಮುಂಚೆ ಸರ್ಕಾರ ಉರುಳಿಸಿ ಬಿಜೆಪಿ ಸರ್ಕಾರ ರಚಿಸಿ ಚುನಾವಣೆಗೆ ಹೋಗುವುದಕ್ಕೆ ಬಿಜೆಪಿ ಯತ್ನಿಸುತ್ತಿದೆ. ಪ್ರಜಾಪ್ರಭುತ್ವದಲ್ಲಿ ಚುನಾಯಿತ ಸರ್ಕಾರವನ್ನು ತೆಗೆದುಹಾಕಿ ನಿಮ್ಮ ಸರ್ಕಾರವನ್ನು ತರುವ ಹಳೆ ಚಾಳಿ ಬಿಟ್ಟಿಲ್ಲ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.












Click it and Unblock the Notifications