ಕಲಬುರಗಿ: ಹಿಂದುಳಿದ ವರ್ಗಗಳ ವಿರಾಟ್ ಸಮಾವೇಶಕ್ಕೆ 5 ಲಕ್ಷಕ್ಕೂ ಹೆಚ್ಚು ಜನರ: ವಿ.ಸುನೀಲ್ ಕುಮಾರ್
ಬೆಂಗಳೂರು, ಅಕ್ಟೋಬರ್ 27: ಬಿಜೆಪಿ ಒಬಿಸಿ ಮೋರ್ಚಾ ನೇತೃತ್ವದಲ್ಲಿ ಇದೇ 30ರಂದು ಹಿಂದುಳಿದ ವರ್ಗಗಳ ವಿರಾಟ್ ಸಮಾವೇಶವು ಕಲಬುರಗಿಯಲ್ಲಿ ನಡೆಯಲಿದೆ. ನಾಗನಹಳ್ಳಿ ಪೊಲೀಸ್ ಕೇಂದ್ರದ ಹತ್ತಿರ ರದ್ದೇವಾಡಗಿ ಬಡಾವಣೆಯಲ್ಲಿ ನಡೆಯುವ ಈ ಐತಿಹಾಸಿಕ ಸಮಾವೇಶದಲ್ಲಿ 5 ಲಕ್ಷಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ ಇದೆ ಎಂದು ರಾಜ್ಯದ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ತಿಳಿಸಿದ್ದಾರೆ.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಕ್ಟೋಬರ್ 30ರಂದು ಒಬಿಸಿ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ಡಾ. ಲಕ್ಷ್ಮಣ್, ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಈ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ರಾಜ್ಯದ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್, ಒಬಿಸಿ ಮೋರ್ಚಾ ರಾಜ್ಯ ಅಧ್ಯಕ್ಷ ನೆ.ಲ.ನರೇಂದ್ರಬಾಬು, ಹಿಂದುಳಿದ ವರ್ಗಗಳ ಸಚಿವರು, ಶಾಸಕರು, ಸಂಸದರು ಇತರ ಗಣ್ಯರು ಪಾಲ್ಗೊಳ್ಳುವರು ಎಂದು ಮಾಹಿತಿ ನೀಡಿದರು.
'ಕೋಟಿ ಕಂಠ ಗಾಯನ'ದಲ್ಲಿ 1.25 ಕೋಟಿ ಜನರು ಭಾಗಿಯಾಗುವ ನಿರೀಕ್ಷೆ: ಸುನೀಲ್ ಕುಮಾರ್
ಕರ್ನಾಟಕದ ಬಿಜೆಪಿ ವತಿಯಿಂದ ಮುಂದಿನ 2 ತಿಂಗಳುಗಳಲ್ಲಿ ವಿವಿಧ ರೀತಿಯ ಜನಜಾಗೃತಿ ಸಮಾವೇಶಗಳನ್ನು ಬೇರೆಬೇರೆ ಭಾಗಗಳಲ್ಲಿ ನಡೆಸಲಾಗುತ್ತಿದೆ. ನವ ಭಾರತ ನಿರ್ಮಾಣಕ್ಕೆ ನವ ಕರ್ನಾಟಕದ ಸಿದ್ಧತೆ ಎಂಬ ಕಲ್ಪನೆಯೊಂದಿಗೆ ರಾಜ್ಯಾದ್ಯಂತ ಎಲ್ಲಾ ಸಮುದಾಯ- ಎಲ್ಲ ವ್ಯಕ್ತಿಗಳನ್ನು ಜೋಡಿಸುವ ಕಾರ್ಯ ನಡೆದಿದೆ ಎಂದು ತಿಳಿಸಿದರು.
ಹಿಂದುಳಿದ ವರ್ಗಗಳ ಅಭಿವೃದ್ಧಿಗೆ 250 ಕೋಟಿ
ಕೇಂದ್ರ- ರಾಜ್ಯದಲ್ಲಿ ಬಿಜೆಪಿ ಸರಕಾರಗಳು ಹಿಂದುಳಿದ ವರ್ಗಗಳ ಚಟುವಟಿಕೆಗಳು- ಅಭಿವೃದ್ಧಿಗೆ ವಿಶೇಷ ಆದ್ಯತೆ ಕೊಟ್ಟಿವೆ. ಹಿಂದುಳಿದ ವರ್ಗಗಳ ಜಾತಿಗಳ ಆಯೋಗಕ್ಕೆ ನಮ್ಮ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರಕಾರ ಸಾಂವಿಧಾನಿಕ ಮಾನ್ಯತೆ ಕೊಟ್ಟಿದೆ. ಹಿಂದಿನ ಸರಕಾರಗಳು ಈ ಕುರಿತು ಕೇವಲ ಮಾತನ್ನಷ್ಟೇ ಆಡಿದ್ದವು, ಆದರೆ ನಮ್ಮ ಸರಕಾರ ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ 250 ಕೋಟಿ ನೀಡಿದ್ದು, ಸಣ್ಣಸಣ್ಣ ಸಮುದಾಯಗಳನ್ನು ಗುರುತಿಸುವ ಕಾರ್ಯ ನಡೆಸುತ್ತಿದೆ. ಅಲ್ಲದೆ, ಅವರನ್ನು ಮುಖ್ಯವಾಹಿನಿಗೆ ತರಲಾಗುತ್ತಿದೆ. ಹಾಸ್ಟೆಲ್ಗಳ ನಿರ್ಮಾಣ, ಶೈಕ್ಷಣಿಕ ಚಟುವಟಿಕೆಗೆ ಉತ್ತೇಜನ, ಗಂಗಾ ಕಲ್ಯಾಣ ಯೋಜನೆ ವಿಸ್ತರಣೆ ಮೂಲಕ ಈ ಸಮುದಾಯಗಳ ಕಲ್ಯಾಣಕ್ಕೆ ಶ್ರಮಿಸಲಾಗುತ್ತಿದೆ ಎಂದು ವಿವರಿಸಿದರು.
ಸಮಾವೇಶಕ್ಕೆ ಎಲ್ಲಾ ಜಿಲ್ಲೆ ಜನರು ಭಾಗಿ
ಸಿದ್ದರಾಮಯ್ಯ ಕೇವಲ ಹಿಂದುಳಿದ ವರ್ಗಗಳ ಧ್ವನಿ ಎಂದು ಭಾಷಣದಲ್ಲಷ್ಟೇ ಹೇಳಿದರೆ ಹೊರತು ಅದನ್ನು ಕಾರ್ಯರೂಪಕ್ಕೆ ತರಲಿಲ್ಲ. ನಮ್ಮ ಸರಕಾರ ಕಾರ್ಯರೂಪಕ್ಕೆ ತಂದಿದೆ. ಹಾಗಾಗಿ ಎಲ್ಲಾ ಜಿಲ್ಲೆಗಳಿಂದ ಈ ಸಮಾವೇಶಕ್ಕೆ ಜನರು ಭಾಗವಹಿಸಬೇಕು ಎಂದು ಮನವಿ ಮಾಡಿದರು. ಈ ನಿಟ್ಟಿನಲ್ಲಿ ನೆ.ಲ.ನರೇಂದ್ರಬಾಬು ಮತ್ತು ಪದಾಧಿಕಾರಿಗಳು ರಾಜ್ಯದೆಲ್ಲೆಡೆ ಪ್ರವಾಸ ಮಾಡಿದ್ದಾರೆ. ಈ ಸಮಾವೇಶವು ರಾಜಕೀಯ ಪರಿವರ್ತನೆಯ ದಾರಿ ಮಾಡಿಕೊಡಲಿದೆ ಎಂದು ತಿಳಿಸಿದರು.
224 ಕ್ಷೇತ್ರ, 312 ಮಂಡಲಗಳಿಂದ ಕಾರ್ಯಕರ್ತರ ಆಗಮನ
ಒಬಿಸಿ ಮೋರ್ಚಾ ರಾಜ್ಯ ಅಧ್ಯಕ್ಷ ನೆ.ಲ.ನರೇಂದ್ರಬಾಬು ಅವರು ಮಾತನಾಡಿ, ರದ್ದೇವಾಡಗಿ ಬಡಾವಣೆಯಲ್ಲಿ ಸಮಾವೇಶ ನಡೆಯಲಿದ್ದು, 224 ಕ್ಷೇತ್ರ, 312 ಮಂಡಲಗಳಿಂದ ಜನರು ಭಾಗವಹಿಸಲಿದ್ದಾರೆ. 205 ಒಬಿಸಿ ಸಮುದಾಯಗಳ ಪ್ರಮುಖರನ್ನು ಆಹ್ವಾನಿಸಿದ್ದೇವೆ. ಈ ಸಮಾವೇಶ ಹಿಂದುಳಿದ ವರ್ಗಗಳ ಸಂಘಟನೆಯ ಪ್ರತೀಕ. ಬಿಜೆಪಿ ಒಬಿಸಿ ಮೋರ್ಚಾದ ಶಕ್ತಿ, ಸಂಘಟನೆಯನ್ನು ಅದು ಅನಾವರಣಗೊಳಿಸಲಿದೆ. ರಾಜ್ಯದಾದ್ಯಂತ ಜಾಗೃತಿ ಸಭೆಗಳನ್ನು ನಡೆಸಿದ್ದು, 59ಕ್ಕೂ ಹೆಚ್ಚು ಶೇಕಡಾದಷ್ಟಿರುವ ಹಿಂದುಳಿದ ಸಮಾಜದ ಜಾಗೃತಿಗೆ ಸಮಾವೇಶವು ಪೂರಕ ಎಂದರು.
ರಾಜ್ಯ-ಕೇಂದ್ರ ಸರಕಾರಗಳಿಂದ ಒಬಿಸಿ ಅಭಿವೃದ್ಧಿಗೆ ಶ್ರಮ
ಯಡಿಯೂರಪ್ಪ ಅಧಿಕಾರದ ಅವಧಿಯಲ್ಲಿ ಒಬಿಸಿಯ 80 ಸಾವಿರ ಮಂದಿಗೆ ಸಹಕಾರ ಕ್ಷೇತ್ರದಲ್ಲಿ ಅವಕಾಶ ಕೊಟ್ಟಿದ್ದಾರೆ. ಅತಿ ಹೆಚ್ಚಿನ ಯೋಜನೆಗಳು ಜಾರಿಯಾಗಿವೆ. ಒಬಿಸಿಗೆ ಆಶಾದಾಯಕವಾಗಿ ಕೇಂದ್ರ- ರಾಜ್ಯದ ಬಿಜೆಪಿ ಸರಕಾರಗಳು ಕೆಲಸ ಮಾಡುತ್ತಿವೆ. ಆರ್ಥಿಕ, ಶೈಕ್ಷಣಿಕ, ರಾಜಕೀಯವಾಗಿ ಹಿಂದುಳಿದ ವರ್ಗದ ಅಭಿವೃದ್ಧಿಗೆ ಬಿಜೆಪಿ ಶ್ರಮಿಸುತ್ತಿದೆ ಎಂದು ವಿವರ ನೀಡಿದರು.
ಸಂಸದ ಪಿ.ಸಿ.ಮೋಹನ್ ಅವರು ಮಾತನಾಡಿ, ಮಾಜಿ ಸಚಿವ ಈಶ್ವರಪ್ಪ ನೇತೃತ್ವದಲ್ಲಿ 5 ತಂಡಗಳ ಪ್ರವಾಸ ನಡೆಸಲಾಗಿದೆ. ಕೇಂದ್ರದ ಬಿಜೆಪಿ ಸರಕಾರದಿಂದ ವೈದ್ಯಕೀಯ ಸೀಟ್, ಪಿಜಿ ಸೀಟು, ವೈದ್ಯಕೀಯ ಕಾಲೇಜಿನ ಹೆಚ್ಚಳದಿಂದ ಒಬಿಸಿ ಸಮುದಾಯಕ್ಕೆ ಹೆಚ್ಚಿನ ಪ್ರಯೋಜನ ಸಿಕ್ಕಿದೆ ಎಂದರು.