ಕಲಬುರಗಿ ಪಾಲಿಕೆ ಫಲಿತಾಂಶ; ಬೆಂಗಳೂರಿಗೆ ಬಂದ ಜೆಡಿಎಸ್ ಸದಸ್ಯರು!

ಕಲಬುರಗಿ, ಸೆಪ್ಟೆಂಬರ್ 07; ಕಲಬುರಗಿ ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶ ಅತಂತ್ರವಾಗಿದೆ. ಯಾರಿಗೆ ಅಧಿಕಾರ ಸಿಗಲಿದೆ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ. 4 ಸ್ಥಾನಗಳಲ್ಲಿ ಜಯಗಳಿಸಿರುವ ಜೆಡಿಎಸ್ ನಡೆ ಮೇಲೆ ಎಲ್ಲವೂ ಅವಲಂಬಿತವಾಗಿದೆ.

ಸೋಮವಾರ ಕಲಬುರಗಿ ಮಹಾನಗರ ಪಾಲಿಕೆ ಚುನಾವಣೆಯ ಫಲಿತಾಂಶ ಘೋಷಣೆಯಾಗಿದೆ. 55 ವಾರ್ಡ್‌ಗಳ ಪೈಕಿ ಕಾಂಗ್ರೆಸ್ 27, ಬಿಜೆಪಿ 23, ಜೆಡಿಎಸ್ 4, ಒಬ್ಬರು ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ.

ಮಹಾನಗರ ಪಾಲಿಕೆಯಲ್ಲಿ ಅಧಿಕಾರ ಹಿಡಿಯಲು ಮ್ಯಾಜಿಕ್ ನಂಬರ್ 28. ಯಾವ ಪಕ್ಷವೂ ಸರಳ ಬಹುಮತ ಪಡೆಯದ ಕಾರಣ ಜೆಡಿಎಸ್ ಕಿಂಗ್ ಮೇಕರ್ ಆಗಿದೆ. ಪಕ್ಷ ಯಾರಿಗೆ ಬೆಂಬಲ ನೀಡಲಿದೆ? ಎಂದು ಕಾದು ನೋಡಬೇಕಿದೆ.

Kalaburagi Municipal Corporation Result 4 Members Come To Bengaluru

ಬೆಂಗಳೂರಿಗೆ ಪಾಲಿಕೆ ಸದಸ್ಯರು; ಕಲಬುರಗಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಗೆದ್ದಿರುವ ಪಾಲಿಕೆ ಸದಸ್ಯರಾದ ಸಾಜಿದ್ ಕಲ್ಯಾಣಿ, ವಿಜಯಲಕ್ಷ್ಮೀ ರಮೇಶ ಸಿ., ವಿಶಾಲ ಕುಮಾರ ನವರಂಗ್, ಅಲಿಮುದ್ದೀನ್ ಪಟೇಲ್ ಜೆಡಿಎಸ್ ಮುಖಂಡರಾದ ನಾಸೀರ್ ಹುಸೇನ್ ಜೊತೆ ಬೆಂಗಳೂರಿಗೆ ಆಗಮಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಸೂಚನೆಯಂತೆ ನಾಲ್ವರು ಪಾಲಿಕೆ ಸದಸ್ಯರು ವಿಮಾನದ ಮೂಲಕ ಬೆಂಗಳೂರಿಗೆ ಆಗಮಿಸಿದ್ದಾರೆ. ಮಂಗಳವಾರ ರಾತ್ರಿ ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡರನ್ನು ಎಲ್ಲರೂ ಭೇಟಿ ಮಾಡಿದ್ದಾರೆ.

ಬುಧವಾರ ಬೆಳಗ್ಗೆ ಎಲ್ಲಾ ಪಾಲಿಕೆ ಸದಸ್ಯರು ಎಚ್. ಡಿ. ಕುಮಾರಸ್ವಾಮಿ ಭೇಟಿ ಮಾಡಲಿದ್ದು, ಒಟ್ಟಿಗೆ ಉಪಹಾರ ಸೇವಿಸಲಿದ್ದಾರೆ. ಬಳಿಕ ಮುಂದಿನ ಕಾರ್ಯತಂತ್ರದ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಜೆಡಿಎಸ್ ಮುಂದಿನ ನಡೆ ಕುತೂಹಲಕ್ಕೆ ಕಾರಣವಾಗಿದೆ.

ಕಲಬುರಗಿ ಪಾಲಿಕೆಯಲ್ಲಿ ಕಾಂಗ್ರೆಸ್ ಬೆಂಬಲಿಸುವಂತೆ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಎಚ್. ಡಿ. ಕುಮಾರಸ್ವಾಮಿ ಜೊತೆ ಮಾತುಕತೆ ನಡೆಸಿದ್ದಾರೆ. ಸ್ಥಳೀಯ ನಾಯಕರ ಜೊತೆ ಮಾತುಕತೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಈ ಬಾರಿ ಮಹಾನಗರ ಪಾಲಿಕೆ ಮೇಯರ್ ಸ್ಥಾನ ಸಾಮಾನ್ಯ ಮಹಿಳೆ, ಉಪ ಮೇಯರ್ ಸ್ಥಾನ ಒಬಿಸಿಗೆ ನಿಗದಿಯಾಗಿದೆ. ಈ ಅರ್ಹತೆ ಇರುವ ಅಭ್ಯರ್ಥಿಗಳು ಕಾಂಗ್ರೆಸ್ ಮತ್ತು ಬಿಜೆಪಿ ಎರಡು ಪಕ್ಷದಲ್ಲಿದ್ದಾರೆ. ಪಾಲಿಕೆ ಗದ್ದುಗೆ ಏರಲು ರಾಷ್ಟ್ರೀಯ ಪಕ್ಷಗಳ ನಡುವೆ ಪೈಪೋಟಿ ನಡೆಯಲಿದೆ.

23 ಸ್ಥಾನಗಳಲ್ಲಿ ಜಯಗಳಿಸಿರುವ ಬಿಜೆಪಿ ಜೆಡಿಎಸ್‌ನ ನಾಲ್ಕು ಸದಸ್ಯರ ಬೆಂಬಲ ಪಡೆದರೆ ಒಂದು ಸಂಸದ, ಮೂವರು ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರ ಬೆಂಬಲದೊಂದಿಗೆ ಅಧಿಕಾರ ಹಿಡಿಯಬಹುದು.

ಒಂದು ವೇಳೆ ಜೆಡಿಎಸ್‌ ಕಾಂಗ್ರೆಸ್‌ಗೆ ಬೆಂಬಲ ನೀಡಿದರೆ ಕಾಂಗ್ರೆಸ್‌ ಸಂಖ್ಯಾಬಲ 31ಕ್ಕೆ ಏರಿಕೆಯಾಗಿದೆ. ಇದರಿಂದಾಗಿ ಸಂಪೂರ್ಣ ಬಹುಮತದೊಂದಿಗೆ ಕಾಂಗ್ರೆಸ್ ಅಧಿಕಾರ ಹಿಡಿಯಲಿದೆ.

ಎಚ್. ಡಿ. ದೇವೇಗೌಡರು ಪಾಲಿಕೆ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, "ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಜೆಡಿಎಸ್ 4 ಸ್ಥಾನಗಳಿಸಿದೆ. ಕಾಂಗ್ರೆಸ್ ಪಕ್ಷಕ್ಕೆ ಸಹಕಾರ ನೀಡುವಂತೆ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಳಿದ್ದಾರೆ. ನನ್ನ ಮತ್ತು ಎಚ್. ಡಿ. ಕುಮಾರಸ್ವಾಮಿ ಜೊತೆ ಅವರು ಮಾತನಾಡಿದ್ದಾರೆ" ಎಂದು ಹೇಳಿದ್ದಾರೆ.

"ಬಿಜೆಪಿಯವರು ಯಾರೂ ಸಹ ನನ್ನ ಜೊತೆ ಮಾತನಾಡಿಲ್ಲ. ಸಿದ್ದರಾಮಯ್ಯ, ಡಿ. ಕೆ. ಶಿವಕುಮಾರ್, ಖರ್ಗೆ ಕುಳಿತು ಚರ್ಚಿಸುತ್ತಾರೆ. ಬಿಜೆಪಿಯವರು ಕುಮಾರಸ್ವಾಮಿ ಜೊತೆ ಚರ್ಚೆ ನಡೆಸಿರಬಹುದು, ನನ್ನ ಜೊತೆ ಮಾತನಾಡಿಲ್ಲ" ಎಂದು ದೇವೇಗೌಡರು ಸ್ಪಷ್ಟಪಡಿಸಿದರು.

ಪಾಲಿಕೆಯಲ್ಲಿ ಸಹಕಾರ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್. ಡಿ. ಕುಮಾರಸ್ವಾಮಿ ಜೊತೆ ಮಾತುಕತೆ ನಡೆಸಿದ್ದಾರೆ. ಆದರೆ ಸ್ಥಳೀಯ ಮುಖಂಡರ ಜೊತೆ ಚರ್ಚಿಸಿ ಅಂತಿಮ ತೀರ್ಮಾನವನ್ನು ಕೈಗೊಳ್ಳಲಾಗುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+