PM Modi visit To Kalaburagi ; ಸರ್ಕಾರಿ ಬಸ್ ಸಂಚಾರದಲ್ಲಿ ವ್ಯತ್ಯಯ
ಕಲಬುರಗಿ, ಜನವರಿ 18; ಭಾರತದ ಪ್ರಧಾನಿ ನರೇಂದ್ರ ಮೋದಿ ಜನವರಿ 19ರಂದು ಕಲಬುರಗಿಗೆ ಭೇಟಿ ನೀಡಲಿದ್ದಾರೆ. ಬೃಹತ್ ಸಮಾವೇಶದ ಹಿನ್ನಲೆಯಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ.
ಪ್ರಧಾನಿ ನರೇಂದ್ರ ಮೋದಿ ಗುರುವಾರ ಸೇಡಂ ತಾಲ್ಲೂಕಿನ ಮಳಖೇಡದಲ್ಲಿ ತಾಂಡಾ ನಿವಾಸಿಗಳಿಗೆ ಹಕ್ಕು ಪತ್ರ ವಿತರಿಸುವ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಮಾವೇಶಕ್ಕೆ ಜನರನ್ನು ಕರೆತರಲು ಬಸ್ ನಿಯೋಜನೆ ಮಾಡಲಾಗಿದೆ.
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗ-1ರಿಂದ ಹೆಚ್ಚಿನ ಸಂಖ್ಯೆಯಲ್ಲಿ ಬಸ್ಗಳನ್ನು ಕರಾರು ಒಪ್ಪಂದದ ಮೇಲೆ ನೀಡಲಾಗುತ್ತಿದೆ ಈ ಹಿನ್ನಲೆಯಲ್ಲಿ ವಿವಿಧ ಮಾರ್ಗದ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ.
ಸಮಾವೇಶಕ್ಕೆ ಫಲಾನುಭವಿಗಳನ್ನು ಕರೆತರಲು 2,382 ಬಸ್ ವ್ಯವಸ್ಥೆ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಕಲಬುರಗಿ ವಿಭಾಗ-1ರ ವಿಭಾಗೀಯ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ.

ಯಾವ-ಯಾವ ಬಸ್ ಸಂಚಾರ
ನರೇಂದ್ರ ಮೋದಿ ಸಮಾವೇಶದ ಹಿನ್ನಲೆಯಲ್ಲಿ ಜನವರಿ 18ರ ಸಂಜೆಯಿಂದ 19ರ ಸಂಜೆಯವರೆಗೆ ವೇಗದೂತ, ಗ್ರಾಮೀಣ ಮತ್ತು ನಗರ ಸಾರಿಗೆ ಸಂಚಾರದಲ್ಲಿ ಅಡಚಣೆ ಉಂಟಾಗಲಿದ್ದು, ಸಾರ್ವಜನಿಕ ಪ್ರಯಾಣಿಕರು ಹಾಗೂ ವಿದ್ಯಾರ್ಥಿಗಳು ಇದಕ್ಕೆ ಸಹಕರಿಸಬೇಕೆಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಕಲಬುರಗಿ ವಿಭಾಗ-1ರ ವಿಭಾಗೀಯ ನಿಯಂತ್ರಣಾಧಿಕಾರಿಗಳು ಮನವಿ ಮಾಡಿದ್ದಾರೆ.
ನಿಗಮದ ವಿಭಾಗ-2 ರಿಂದ ಹೆಚ್ಚಿನ ಸಂಖ್ಯೆಯಲ್ಲಿ ಬಸ್ಗಳನ್ನು ಕರಾರು ಒಪ್ಪಂದದ ಮೇಲೆ ನೀಡಲಾಗುತ್ತಿದೆ. ಕಲಬುರಗಿ, ಆಳಂದ, ಅಫಜಲಪೂರ, ಜೇವರ್ಗಿ ಹಾಗೂ ಯಡ್ರಾಮಿ ವಲಯಗಳಲ್ಲಿ (ಸಾಮಾನ್ಯ ಹಾಗೂ ವೇಗದೂತ) ಸಾರಿಗೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ.

ಮುಖ್ಯಮಂತ್ರಿಗಳ ಆಗಮನ
ನರೇಂದ್ರ ಮೋದಿ ಸಮಾವೇಶಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಹ ಆಗಮಿಸುತ್ತಿದ್ದಾರೆ. ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಜನವರಿ 19ರಂದು ಬೆಳಿಗ್ಗೆ 9.40 ಗಂಟೆಗೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಮುಖ್ಯಮಂತ್ರಿಗಳು ಆಗಮಿಸುವರು. ಪ್ರಧಾನಮಂತ್ರಿ ನರೇಂದ್ರ ಮೋದಿಯನ್ನು ಕಲಬುರಗಿ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಳ್ಳಲಿದ್ದಾರೆ. ಬಳಿಕ ಅವರ ಜೊತೆ ಯಾದಗಿರಿ ಜಿಲ್ಲೆಗೆ ತೆರಳಲಿದ್ದಾರೆ.

ಕಂದಾಯ ಇಲಾಖೆಯ ಇತಿಹಾಸದಲ್ಲೇ ದೊಡ್ಡ ಕಾರ್ಯಕ್ರಮ
ದೇಶದ ಇತಿಹಾಸದಲ್ಲಿಯೇ ಐತಿಹಾಸಿಕವಾಗಿ ರಾಜ್ಯದಾದ್ಯಂತ ಲಂಬಾಣಿ ತಾಂಡಾ, ಹಟ್ಟಿ, ಹಾಗೂ ಆಡಿಯಲ್ಲಿರುವ ಅಲೆಮಾರಿ ಜನಾಂಗದವರಿಗೆ ಖಾಯಂ ಸೂರು ಒದಗಿಸುವ ದೃಷ್ಠಿಯಿಂದ 1 ಲಕ್ಷ 2 ಸಾವಿರ ಜನರಿಗೆ ಹಕ್ಕು ಪತ್ರ ವಿತರಣೆ ಮಾಡಲಾಗುತ್ತಿದೆ.
ಕಂದಾಯ ಸಚಿವ ಆರ್. ಅಶೋಕ ಈ ಕುರಿತು ಮಾಹಿತಿ ನೀಡಿದ್ದದಾರೆ. "ಜನವರಿ 19ಕ್ಕೆ ಕಲಬುರಗಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಕಲಬುರಗಿ ಸೇರಿ 5 ಜಿಲ್ಲೆಗಳ 51,900 ತಾಂಡಾ ನಿವಾಸಿಗಳಿಗೆ ಹಕ್ಕುಪತ್ರಗಳನ್ನು ವಿತರಿಸಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರು, ಜಿಲ್ಲೆಯ ಶಾಸಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ" ಎಂದು ಹೇಳಿದ್ದಾರೆ.

150 ಎಕರೆ ಮೈದಾನದಲ್ಲಿ ಸಮಾವೇಶ
ಕಲಬುರಗಿಯಲ್ಲಿ ರಾಜ್ಯ ಹೆದ್ದಾರಿ-10ಕ್ಕೆ ಹೊಂದಿಕೊಂಡ ಮಳಖೇಡ್ದಲ್ಲಿ ಸುಮಾರು 150 ಎಕರೆ ವಿಶಾಲ ಪ್ರದೇಶದಲ್ಲಿ ನಡೆಯುವ ಸಮಾವೇಶದಲ್ಲಿ ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು ಹಾಗೂ ವಿಜಯಪುರ ಜಿಲ್ಲೆಗಳ ಫಲಾನುಭವಿಗಳು ಸೇರಿದಂತೆ 1.50 ಲಕ್ಷ ಜನರು ಸೇರುವ ನಿರೀಕ್ಷೆ ಇದೆ. ಸಮಾವೇಶಕ್ಕೆ ಆಗಮಿಸುವ ಜನರಿಗಾಗಿಯೇ 2,382 ಬಸ್ ವ್ಯವಸ್ಥೆ ಮಾಡಲಾಗಿದೆ.
ಕಾರ್ಯಕ್ರಮಕ್ಕೆ ಆಗಮಿಸುವ ಜನರಿಗೆ ಊಟ, ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ಊಟಕ್ಕಾಗಿ 200 ಕೌಂಟರ್ ತೆರೆಯಲಾಗುತ್ತದೆ. ಕಾರ್ಯಕ್ರಮ ಸ್ಥಳದಲ್ಲಿ ಮುಂಜಾಗ್ರತೆಯಾಗಿ ಅಂಬುಲೆನ್ಸ್, ಅಗ್ನಿಶಾಮಕ ವಾಹನ ವ್ಯವಸ್ಥೆ ಮಾಡಲಾಗಿದೆ. ಫಲಾನುಭವಿಗಳನ್ನು ಕರೆತರಲು ಬಸ್ ವ್ಯವಸ್ಥೆ ಸರ್ಕಾರದಿಂದಲೇ ಮಾಡಲಾಗಿದ್ದು, ಕಂದಾಯ ಇಲಾಖೆಯ ಸಿಬ್ಬಂದಿಗಳು ಇದರ ಮೇಲ್ವಿಚಾರಣೆ ಮಾಡಲಿದ್ದಾರೆ.












Click it and Unblock the Notifications