PM Narendra Modi Visit To Kalaburagi : ಕಲಬುರಗಿಗೆ ಜ.19ಕ್ಕೆ ಮೋದಿ; ಸಿದ್ಧತೆ ಪರಿಶೀಲಿಸಿದ ಆರ್. ಅಶೋಕ
ಕಲಬುರಗಿ, ಜನವರಿ 15; ಭಾರತದ ಪ್ರಧಾನಿ ನರೇಂದ್ರ ಮೋದಿ ಜನವರಿ 19ರಂದು ಕಲಬುರಗಿಗೆ ಭೇಟಿ ನೀಡಲಿದ್ದಾರೆ. ಕಂದಾಯ ಇಲಾಖೆ ಆಯೋಜನೆ ಮಾಡಿರುವ ಬೃಹತ್ ಕಾರ್ಯಕ್ರಮದಲ್ಲಿ ಮೋದಿ ಭಾಗಿಯಾಗಲಿದ್ದಾರೆ.
ಕಲಬುರಗಿಗೆ ಭೇಟಿ ನೀಡಿದ ಕಂದಾಯ ಸಚಿವ ಆರ್. ಅಶೋಕ ಮೋದಿ ಕಾರ್ಯಕ್ರಮದ ಸಿದ್ಧತೆಗಳನ್ನು ಪರಿಶೀಲಿಸಿದರು. ಜಿಲ್ಲಾಡಳಿತದ ಜೊತೆ ಮಾತುಕತೆ ನಡೆಸಿದರು. ಶಿಷ್ಠಾಚಾರದಂತೆ ಅಚ್ಚುಕಟ್ಟಾಗಿ ಕಾರ್ಯಕ್ರಮ ನಡೆಯಲು ಎಲ್ಲರೂ ಶ್ರಮಿಸಬೇಕು ಎಂದು ಸೂಚನೆ ನೀಡಿದರು.
ನರೇಂದ್ರ ಮೋದಿ ತಾಂಡಾ ನಿವಾಸಿಗಳಿಗೆ ಹಕ್ಕು ಪತ್ರ ವಿತರಿಸಲು ಕಲಬುರಗಿಗೆ ಆಗಮಿಸುತ್ತಿದ್ದಾರೆ. ಮಳಖೇಡ್ದಲ್ಲಿ ನಡೆಯಲಿರುವ ಬೃಹತ್ ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆಯ ಇತಿಹಾಸದಲ್ಲಿಯೇ ಏಕಕಾಲದಲ್ಲಿ ಕಲಬುರಗಿ ಸೇರಿದಂತೆ ರಾಯಚೂರು, ಬೀದರ್, ಯಾದಗಿರಿ ಹಾಗೂ ವಿಜಯಪುರ ಜಿಲ್ಲೆಗಳ 51,900 ತಾಂಡಾ ನಿವಾಸಿಗಳಿಗೆ ಹಕ್ಕು ಪತ್ರ ವಿತರಣೆ ಮಾಡಲಿದ್ದಾರೆ.
ಕಲಬುರಗಿ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಮಾತನಾಡಿ, "ಕಾರ್ಯಕ್ರಮದ ಸುಗಮ ನಿರ್ವಹಣೆ ಮತು ಯಶಸ್ಸಿಗೆ 11 ಸಮಿತಿಗಳನ್ನು ರಚಿಸಲಾಗಿದೆ. ಜಿಲ್ಲೆಯ ವಿವಿಧ ಸ್ಥಳಗಳಿಂದ ಫಲಾನುಭವಿಗಳನ್ನು ಕರೆತರಲು 2,582 ಸಾರಿಗೆ ಬಸ್ ವ್ಯವಸ್ಥೆ ಮಾಡಲಾಗಿದ್ದು, ಪ್ರತಿ ಬಸ್ಗೆ ಮತ್ತು ಫಲಾನುಭವಿಗಳನ್ನು ನೋಡಿಕೊಳ್ಳಲು ಗ್ರಾಮ ಲೆಕ್ಕಿಗರನ್ನು ನಿಯೋಜಿಸಲಾಗಿದೆ" ಎಂದು ಮಾಹಿತಿ ನೀಡಿದರು.

ಟ್ರಾಕ್ಟರ್ ಹತ್ತಿದ ಸಚಿವ ಆರ್. ಅಶೋಕ
ಕಂದಾಯ ಸಚಿವ ಆರ್. ಅಶೋಕ ಪ್ರಧಾನಮಂತ್ರಿಗಳ ಕಾರ್ಯಕ್ರಮ ನಿಗದಿಯಾಗಿರುವ ಸೇಡಂ ತಾಲೂಕಿನ ಮಳಖೇಡ್ ರಾಜ್ಯ ಗೆದ್ದಾರಿ-10ಕ್ಕೆ ಹೊಂದಿಕೊಂಡಿರುವ ಸ್ಥಳಕ್ಕೆ ಭೇಟಿ ನೀಡಿ, ವೇದಿಕೆ ನಿರ್ಮಾಣ ಕಾರ್ಯಕ್ಕೆ ಭೂಮಿ ಪೂಜೆ ನೆರವೇರಿಸಿದರು.
ವೇದಿಕೆ ಸ್ಥಳ, ಸಾರ್ವಜನಿಕ ಆಸನದ ಸ್ಥಳ, ಊಟದ ಕೌಂಟರ್ ಸ್ಥಳ ಎಲ್ಲವನ್ನು ಅಧಿಕಾರಿಗಳೊಂದಿಗೆ ಪರಿಶೀಲಿಸಿದರು. ಇದೇ ಸಂದರ್ಭದಲ್ಲಿ ನೆಲಸಮಗೊಳಿಸುವ ಕಾರ್ಯದಲ್ಲಿ ನಿರತವಾಗಿದ್ದ ಟ್ರ್ಯಾಕ್ಟರ್ ಹತ್ತಿದ ಸಚಿವರು ಟ್ರಾಕ್ಟರ್ ಓಡಿಸಿ ಗಮನ ಸೆಳೆದರು.

ಯಾವುದೇ ಲೋಪಕ್ಕೆ ಅವಕಾಶ ನೀಡಬೇಡಿ
ಸಚಿವ ಆರ್. ಅಶೋಕ ವಿವಿಧ ಜಿಲ್ಲೆಗಳ ಫಲಾನುಭವಿಗಳ ಜೊತೆಗೆ ಮೋದಿ ಅಭಿಮಾನಿಗಳ ಸಹ ಆಗಮಿಸುವುದರಿಂದ, ಬೃಹತ್ ಜರ್ಮನ್ ವೇದಿಕೆ ನಿರ್ಮಾಣ, ಹೆಲಿಪ್ಯಾಡ್ ನಿರ್ಮಾಣ, ಪಾರ್ಕಿಂಗ್ ವ್ಯವಸ್ಥೆ, ಸುಗಮ ಸಂಚಾರ, ಸಾರ್ವಜನಿಕರ ಮತ್ತು ಗಣ್ಯರ ಆಸನದ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ಊಟ, ಸ್ವಚ್ಛತೆ, ಭದ್ರತೆ ಹೀಗೆ ಎಲ್ಲವು ವ್ಯವಸ್ಥಿತವಾಗಿರಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಕಾರ್ಯಕ್ರಮ ಸ್ಥಳದಲ್ಲಿ ಅಂಬುಲೆನ್ಸ್, ಅಗ್ನಿಶಾಮಕ ವಾಹನ ಇರಬೇಕು. ಬೇರೆ ಜಿಲ್ಲೆಗಳಿಂದ ಫಲಾನುಭವಿಗಳನ್ನು ಕರೆತರುವ ಅಧಿಕಾರಿಗಳೊಂದಿಗೆ ಹಿರಿಯ ಅಧಿಕಾರಿಗಳನ್ನು ಸಮನ್ವಯ ಅಧಿಕಾರಿಗಳನ್ನಾಗಿ ಸಾಧಿಸಬೇಕು ಎಂದು ಸೂಚಿಸಿದ ಸಚಿವರು, ಯಾವುದೇ ಲೋಪಕ್ಕೆ ಅವಕಾಶ ನೀಡಬಾರದು ಎಂದರು.

ಜನದಟ್ಟಣೆಯಾಗದಂತೆ ನೋಡಿಕೊಳ್ಳಿ
ಕಾರ್ಯಕ್ರಮಕ್ಕೆ ಫಲಾನುಭವಿಗಳ ಹೊರತಾಗಿ ಸಾರ್ವಜನಿಕರು, ಮೋದಿ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬರುವುದರಿಂದ ಅಲ್ಲಲ್ಲಿ ಪ್ರವೇಶಕ್ಕೆ ಅವಕಾಶ ನೀಡಿ ಬ್ಯಾರಿಕೇಡ್ ಹಾಕಬೇಕು. ಇಡೀ ಪ್ರಾಂಗಣ ಸುತ್ತುವಂತೆ ಆಗಬಾರದು. ಪೊಲೀಸ್ ಇಲಾಖೆ ಈ ನಿಟ್ಟಿನಲ್ಲಿ ತುಂಬಾ ಎಚ್ಚರಿಕೆಯಿಂದ ಬ್ಯಾರಿಕೇಡ್ ವ್ಯವಸ್ಥೆ ಮಾಡಬೇಕು. ಯಾವುದೇ ರೀತಿಯಲ್ಲಿ ಕಾರ್ಯಕ್ರಮ ಸುತ್ತಮುತ್ತ ಮತ್ತು ರಾಜ್ಯ ಹೆದ್ದಾರಿಯಲ್ಲಿ ಜನದಟ್ಟಣೆಯಾಗದಂತೆ ಸುಗಮ ಸಂಚಾರ ವ್ಯವಸ್ಥೆ ಮಾಡಬೇಕು ಎಂದು ಎಸ್. ಪಿ. ಇಶಾ ಪಂತ್ಗೆ ನಿರ್ದೇಶನ ನೀಡಿದರು.

ಹೇಗಿರಲಿದೆ ಮುಖ್ಯ ವೇದಿಕೆ
ಮೋದಿ ಕಾರ್ಯಕ್ರಮದ ಮುಖ್ಯ ವೇದಿಕೆ ಜರ್ಮನ್ ಟೆಂಟ್ನಿಂದ ಕೂಡಿರಲಿದ್ದು, ಐದು ಕಡೆ ವಾಹನಗಳ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಊಟಕ್ಕೆ 200 ಕೌಂಟರ್ ಸ್ಥಾಪಿಸಲಾಗುತಿದ್ದು, 600 ಬಾಣಸಿಗರು ಇರಲಿದ್ದಾರೆ. ಮೋದಿ ಕಾರ್ಯಕ್ರಮ ಐತಿಹಾಸಿಕವಾಗಿದೆ. ದೇಶದ ಇತಿಹಾಸದಲ್ಲಿಯೇ ರಾಜ್ಯದಾದ್ಯಂತ ಲಂಬಾಣಿ ತಾಂಡಾ, ಹಟ್ಟಿ, ಹಾಗೂ ಆಡಿಯಲ್ಲಿರುವ ಅಲೆಮಾರಿ ಜನಾಂಗದವರಿಗೆ ಖಾಯಂ ಸೂರು ಒದಗಿಸುವ ದೃಷ್ಠಿಯಿಂದ 1 ಲಕ್ಷ 2 ಸಾವಿರ ಜನರಿಗೆ ಹಕ್ಕು ಪತ್ರ ವಿತರಣೆ ಮಾಡಲಾಗುತ್ತಿದೆ.

51,900 ತಾಂಡಾ ನಿವಾಸಿಗಳಿಗೆ ಹಕ್ಕುಪತ್ರ
ಜನವರಿ 19ರಂದು ಕಲಬುರಗಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ನರೇಂದ್ರ ಮೋದಿ ಕಲಬುರಗಿ ಸೇರಿ 5 ಜಿಲ್ಲೆಗಳ 51,900 ತಾಂಡಾ ನಿವಾಸಿಗಳಿಗೆ ಹಕ್ಕುಪತ್ರಗಳನ್ನು ವಿತರಿಸಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರು, ಜಿಲ್ಲೆಯ ಶಾಸಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಮಳಖೇಡ್ದಲ್ಲಿ ಸುಮಾರು 150 ಎಕರೆ ವಿಶಾಲ ಪ್ರದೇಶದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು ಹಾಗೂ ವಿಜಯಪುರ ಜಿಲ್ಲೆಗಳ ಫಲಾನುಭವಿಗಳು ಸೇರಿದಂತೆ 1.50 ಲಕ್ಷ ಜನರು ಸೇರುವ ನಿರೀಕ್ಷೆಇದೆ. ಇವರ ಆಗಮನಕ್ಕಾಗಿ 2,382 ಬಸ್ ವ್ಯವಸ್ಥೆ ಮಾಡಲಾಗಿದೆ.












Click it and Unblock the Notifications