2 ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಸುಸಜ್ಜಿತ ಆಸ್ಪತ್ರೆ
ಬೆಂಗಳೂರು, ಅ. 14: ರಾಜ್ಯದ ಎಲ್ಲ ಭಾಗಗಳ ಜನರಿಗೆ ಗುಣಮಟ್ಟದ ಚಿಕಿತ್ಸೆ ನೀಡಲು ನೀಲಿನಕ್ಷೆ ಸಿದ್ಧಪಡಿಸಲಾಗಿದೆ. ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ 700 ಹಾಸಿಗೆಗಳಿದ್ದು, ಅದನ್ನು 1 ಸಾವಿರಕ್ಕೆ ಹೆಚ್ಚಿಸಲಾಗುವುದು. ಈ ಮೂಲಕ ಒಂದೇ ಸೂರಿನ ಅಡಿಯಲ್ಲಿ ಒಂದು ಸಾವಿರ ಹಾಸಿಗೆಗಳಿರುವ ದೇಶದ ಏಕೈಕ ಆಸ್ಪತ್ರೆ ಎಂಬ ಹೆಗ್ಗಳಿಕೆಗೆ ಜಯದೇವ ಸಂಸ್ಥೆ ಪಾತ್ರವಾಗಲಿದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
"ಹಿಂದುಳಿದ ಹೈದರಾಬಾದ್ ಕರ್ನಾಟಕ ಭಾಗದ ಜನರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಕಲಬುರಗಿಯ ಜಿಮ್ಸ್ ಆಸ್ಪತ್ರೆಯ ಮೂರನೇ ಮಹಡಿ ಆವರಣದಲ್ಲಿ ಜಯದೇವ ಸಂಸ್ಥೆಯ ಘಟಕವನ್ನು ಸ್ಥಾಪಿಸಲಾಗಿದೆ. ಸದ್ಯ ತಪಾಸಣೆ ಮತ್ತು ಶಸ್ತ್ರಚಿಕಿತ್ಸೆಗಳನ್ನೂ ಅಲ್ಲಿ ನೆರವೇರಿಸಲಾಗುತ್ತಿದೆ. ಏಳೂವರೆ ಎಕರೆ ಪ್ರದೇಶದಲ್ಲಿ ಆಸ್ಪತ್ರೆಯ ನೂತನ ಕಟ್ಟಡ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಂಡು ಅನುಮೋದನೆ ನೀಡಲಾಗಿದೆ" ಎಂದು ಸಚಿವರು ತಿಳಿಸಿದರು.
"ಕಲ್ಯಾಣ ಕರ್ನಾಟಕ ಅಭಿವೃದ್ಧಿ ನಿಧಿಯಿಂದ 37 ಕೋಟಿ ರೂ. ಹಣ ಬಿಡುಗಡೆ ಆಗಿದೆ. ಎಲ್ಲಾ ಕಾಮಗಾರಿ ಪೂರ್ಣಗೊಂಡು 350 ಹಾಸಿಗೆಗಳ ಸುಸಜ್ಜಿತ ಆಸ್ಪತ್ರೆ ಕಾರ್ಯಾರಂಭಿಸಲು ಇನ್ನೂ 2 ವರ್ಷ ಬೇಕಾಗುತ್ತದೆ. ಅಲ್ಲಿಯವರೆಗೆ ಒತ್ತಡ ನಿವಾರಿಸುವ ನಿಟ್ಟಿನಲ್ಲಿ ಮುಂದಿನ 15 ದಿನಗಳಲ್ಲಿ ಮತ್ತೊಂದು ಕ್ಯಾತ್ಲ್ಯಾಬ್ ಸ್ಥಾಪನೆಗೂ ಕ್ರಮ ಕೈಗೊಳ್ಳಲಾಗಿದೆ" ಎಂದರು.

"ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಎಸ್ಡಿಎಸ್ ಟಿಆರ್ ಸಿ ಮತ್ತು ರಾಜೀವ್ಗಾಂಧಿ ಎದೆರೋಗಗಳ ಸಂಸ್ಥೆಯ ಆಡಳಿತ ಮಂಡಳಿ ಸಭೆಯಲ್ಲೂ ಅನೇಕ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಒಟ್ಟಾರೆ ರಾಜ್ಯದ ಜನತೆಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇರಿಸಲಾಗಿದೆ" ಎಂದರು.












Click it and Unblock the Notifications