ಯಾರ ಜತೆಯೂ ಚುನಾವಣೆ ಮೈತ್ರಿ ಇಲ್ಲ: ಎಚ್ಡಿ ಕುಮಾರಸ್ವಾಮಿ
ಕಲಬುರಗಿ, ಮಾರ್ಚ್ 06: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಜೆಡಿಎಸ್ ವರಿಷ್ಠ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ ಅವರು ಸ್ಪಷ್ಟ ಮಾತುಗಳಲ್ಲಿ ತಿಳಿಸಿದ್ದಾರೆ.
ಅವಧಿ ಮುಗಿಯುವ ಮುನ್ನವೇ ಚುನಾವಣೆ ಬರುವ ಸಾಧ್ಯತೆ ಇದೆ. ಚುನಾವಣೆ ಯಾವುದೇ ಕ್ಷಣದಲ್ಲಿ ಘೋಷಣೆಯಾದರೂ ಅದನ್ನು ಎದುರಿಸಲು ಜೆಡಿಎಸ್ ಸಿದ್ಧವಾಗಿದೆ ಎಂದು ಹೇಳಿದರು.
ಕಲಬುರಗಿಯಲ್ಲಿಂದು ಮಾಧ್ಯಮಗಳ ಜತೆ ಮಾತನಾಡಿದ ಅವರು, ಚುನಾವಣೆ ಮೈತ್ರಿ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ನೇರ ಉತ್ತರ ನೀಡಿ, ''ನಾವು ಯಾರ ಜತೆಯೂ ಇಲ್ಲ. ನಮಗೆ ರೈಟೂ ಬೇಡ, ಲೆಫ್ಟೂ ಬೇಡ. ಸ್ಟ್ರೈಟ್ ಆಗಿ ಹೋಗೋಣ ಎಂಬ ತೀರ್ಮಾನ ಮಾಡಿದ್ದೇವೆ,''ಎನ್ನುವ ಮೂಲಕ ಅವರು ಮೈತ್ರಿ ಮಾತಿಗೆ ತೆರೆ ಎಳೆದರು.
ಅವಧಿಗೆ ಮೊದಲೇ ಚುನಾವಣೆ ಬರಬಹುದು ಎನ್ನುವ ಕಾರಣಕ್ಕೇ ನಾವು ಪಕ್ಷ ಸಂಘಟನೆಯಲ್ಲಿ ಬಿಡುವಿಲ್ಲದೇ ತೊಡಗಿಸಿಕೊಂಡಿದ್ದೇವೆ. ಕೋವಿಡ್ ಕಾರಣದಿಂದ ಎರಡು ವರ್ಷ ಸಂಘಟನೆ ಕೆಲಸ ಮಂದಗತಿಯಲ್ಲಿತ್ತು. ಈಗ ಎಲ್ಲವೂ ವೇಗವಾಗಿದೆ. ಸೋಂಕು, ಮತ್ತಿತರೆ ಸಮಸ್ಯೆಗಳು ಇಲ್ಲದಿರುವುದರಿಂದ ಪಕ್ಷದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದೇವೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.
ಬಿಜೆಪಿ ಬಗ್ಗೆ ನಿಮಗೆ ಸಾಫ್ಟ್ ಕಾರ್ನರ್ ಇದೆ ನಿಮಗೆ ಎಂದು ಆರೋಪವಿದೆಯಲ್ಲ? ಎನ್ನುವ ಪ್ರಶ್ನೆಗೆ, ''ಬಿಜೆಪಿ ಬಗ್ಗೆ ಸಾಫ್ಟ್ ಕಾರ್ನರ್ ಇದೆಯೋ ಇಲ್ಲವೋ ಎಂಬುದಕ್ಕೆ ನನ್ನ ಹೇಳಿಕೆಗಳೇ ಉತ್ತರ'' ಎನ್ನುವ ಮೂಲಕ ಬಿಜೆಪಿ ಬಗ್ಗೆ ಒಲವಿಲ್ಲ ಎನ್ನುವುದನ್ನು ಸ್ಪಷ್ಟವಾಗಿ ತಿಳಿಸಿದರು.

ಅಧಿವೇಶನ ನಂತರ ಜನತಾ ಜಲಧಾರೆ
ವಿಧಾನಮಂಡಲ ಬಜೆಟ್ ಅಧಿವೇಶನ ಮುಗಿದ ಕೂಡಲೇ ರಾಜ್ಯ ನೀರಾವರಿ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಹಮ್ಮಿಕೊಳ್ಳಲಾಗಿರುವ ʼಜನತಾ ಜಲಧಾರೆʼ ಗಂಗಾ ರಥಯಾತ್ರೆಯನ್ನು ಆರಂಭ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.
ರಾಜ್ಯಾದ್ಯಂತ ನಡೆಯಲಿರುವ ʼಜನತಾ ಜಲಧಾರೆʼ ಗಂಗಾ ರಥಯಾತ್ರೆಯಲ್ಲಿ ವಿವಿಧ ಜೀವನದಿಗಳು ಉಗಮವಾಗುವ, ಸಂಗಮಗಳು, ಪುಣ್ಯಕ್ಷೇತ್ರಗಳು ಸೇರಿದಂತೆ 53 ಕಡೆಗಳಲ್ಲಿ ಜಲ ಸಂಗ್ರಹ ಮಾಡಲಾಗುವುದು. ಆ ಸಂದರ್ಭದಲ್ಲಿ ಕಳೆದ 75 ವರ್ಷಗಳಲ್ಲಿ ನಮ್ಮ ರಾಜ್ಯಕ್ಕೆ ಆಗಿರುವ ನೀರಾವರಿ ಅನ್ಯಾಯಗಳನ್ನು ತಿಳಿಸುವ ಹಾಗೂ ಮುಂದೆ ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಕೈಗೊಳ್ಳಬೇಕಾದ ಕಾರ್ಯಕ್ರಮಗಳ ಬಗ್ಗೆ ಗಂಗೆಯ ಸಾಕ್ಷಿಯಾಗಿ ಸಂಕಲ್ಪ ಮಾಡಲಾಗುವುದು ಎಂದು ಕುಮಾರಸ್ವಾಮಿ ಹೇಳಿದರು.

ನೀರಾವರಿಗೆ ದ್ರೋಹ ಎಸಗಲಾಗಿದೆ:
ರಾಜ್ಯಕ್ಕೆ ಐದು ವರ್ಷ ಜಲ ಸಂಪನ್ಮೂಲ ಸಚಿವರಾಗಿಯೂ ಕೆಲಸ ಮಾಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿರುವ ಮುಂಗಡ ಪತ್ರದಲ್ಲೂ ನೀರಾವರಿ ಕ್ಷೇತ್ರವನ್ನು ಕಡೆಗಣಿಸಿ ದೊಡ್ಡಮಟ್ಟದ ದ್ರೋಹ ಎಸಗಲಾಗಿದೆ ಎಂದು ಕುಮಾರಸ್ವಾಮಿ ಅವರು ಆರೋಪ ಮಾಡಿದರು.

ಮೇಕೆದಾಟು: ಬಿಜೆಪಿ-ಕಾಂಗ್ರೆಸ್ʼಗೆ ತರಾಟೆ:
ಬೆಂಗಳೂರಿನಲ್ಲಿ ಹೇಳಿಕೆ ನೀಡಿರುವ ಕೇಂದ್ರದ ಜಲಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಅವರು, ಕರ್ನಾಟಕ ಮತ್ತು ತಮಿಳುನಾಡು ಸಿದ್ಧವಾದರೆ ಮಧ್ಯಸ್ಥಿಕೆ ವಹಿಸುವುದಾಗಿ ತಿಳಿಸಿದ್ದಾರೆ. ಆದರೆ, ಅದಕ್ಕೆ ಕಾಲಮಿತಿ ಹಾಕಿಕೊಳ್ಳಲು ಸಾಧ್ಯವಿಲ್ಲ. ಎರಡೂ ರಾಜ್ಯಗಳು ಒಮ್ಮತಕ್ಕೆ ಬನ್ನಿ ಆಂತಾರೆ ಅವರು. ಮುಖ್ಯಮಂತ್ರಿ ಮಾತ್ರ ಮೇಕೆದಾಟು ಯೋಜನೆಗೆ 1,000 ಕೋಟಿ ಇಟ್ಟಿರುವುಗಾಗಿ ಹೇಳುತ್ತಾರೆ. ಇನ್ನು ಕಾಂಗ್ರೆಸ್ ನಾಯಕರು ನಮ್ಮ ಪಾದಯಾತ್ರೆಯನ್ನು ನೋಡಿ ಹೆದರಿಕೊಂಡು ಇಷ್ಟು ಹಣ ಘೋಷಣೆ ಮಾಡಿದರು ಎಂದು ಹೇಳಿಕೊಳ್ಳುತ್ತಿದ್ದಾರೆ. ನಾವೇನು ಕಾಂಗ್ರೆಸ್ʼನವರಿಗೆ ಹೆದರಿ ಹಣ ಘೋಷಣೆ ಮಾಡಿಲ್ಲ ಎಂದು ಬಿಜೆಪಿಯವರು ಹೇಳುತ್ತಿದ್ದಾರೆ. ಮೇಕೆದಾಟು ಯೋಜನೆಯನ್ನು ಆರಂಭ ಮಾಡುವ ಯೋಗ್ಯತೆ ಇವರಿಗಿಲ್ಲ. ಎರಡೂ ರಾಷ್ಟ್ರೀಯ ಪಕ್ಷಗಳು ನಾಡಿನ ಜನರಿಗೆ ದ್ರೋಹ ಮಾಡಿವೆ ಎಂದು ಮಾಜಿ ಮುಖ್ಯಮಂತ್ರಿಗಳು ಟೀಕಾಪ್ರಹಾರ ನಡೆಸಿದರು.

ಕಾಳಿ ಹೆಸರಿನಲ್ಲಿ ನಾಟಕ:
ಈ ನಾಟಕ ಸಾಲದು ಎಂಬಂತೆ, 5 ಜಿಲ್ಲೆಗಳಿಗೆ ಕಾಳಿ ನದಿ ನೀರು ಕೊಡುತ್ತೇವೆ ಎಂದು ಇನ್ನೊಂದು ಯೋಜನೆಯನ್ನು ಸರಕಾರ ಘೋಷಣೆ ಮಾಡಿಕೊಂಡಿದೆ. ಸತ್ಯ ಸಂಗತಿ ಎಂದರೆ, ಕಾಳಿ ನದಿಗೆ ಅಡ್ಡಲಾಗಿ ಕಟ್ಟಿರುವ ಸೂಪಾ ಅಣೆಕಟ್ಟು ನೀರಿನ ಕೊರತೆ ಎದುರಿಸುತ್ತಿದೆ. ಒಂದು ಕಡೆ ಮಹದಾಯಿಯ 5 ಟಿಎಂಸಿ ನೀರನ್ನು ಸೂಪಾದಲ್ಲಿ ತುಂಬಿಡಲು ಅವಕಾಶ ಕೊಡಿ ಎಂದು ನ್ಯಾಯಾಧಿಕರಣಕ್ಕೆ ಮನವಿ ಮಾಡಲಾಗಿತ್ತು. ಆ ಬೇಡಿಕೆಯನ್ನು ನ್ಯಾಯಾಧಿಕರಣ ತಿರಸ್ಕರಿಸಿದೆ. ಹಾಗಾದರೆ, ನೀರಿನ ಕೊರತೆ ಇರುವ ಸೂಪಾ ಜಲಾಶಯದಿಂದ ಸರಕಾರ 5 ಜಿಲ್ಲೆಗಳಿಗೆ ನೀರನ್ನು ಎಲ್ಲಿಂದ ತರುತ್ತದೆ? ಎಂದು ಅವರು ಪ್ರಶ್ನೆ ಮಾಡಿದರು.
ಕೃಷ್ಣಾ ಮೇಲ್ದಂಡೆ ಯೋಜನೆಗೆ ಬಜೆಟ್ʼನಲ್ಲಿ 5,000 ಕೋಟಿ ರೂ. ಘೋಷಣೆ ಮಾಡಿದ್ದಾರೆ. ಈ ಮಟ್ಟದಲ್ಲಿ ಹೋದರೆ ಆ ಯೋಜನೆಯನ್ನು ಪೂರ್ಣ ಮಾಡಲು ಇನ್ನೂ ಎಷ್ಟು ವರ್ಷ ಬೇಕು? ಇನ್ನು, ನವಿಲೆ ಯೋಜೆನೆಗೆ 1,000 ಕೋಟಿ ರೂ. ಎನ್ನುತ್ತೀರಿ. ಅದಕ್ಕೆ ಕೇಂದ್ರದ ಒಪ್ಪಿಗೆಯೇ ಸಿಕ್ಕಿಲ್ಲ. ದುಡ್ಡನ್ನು ಹೇಗೆ ಖರ್ಚು ಮಾಡುತ್ತೀರಿ ಎಂದು ಕುಮಾರಸ್ವಾಮಿ ಅವರು ಸರಕಾರವನ್ನು ನೇರವಾಗಿ ಕೇಳಿದರು.
ಚಿತ್ರಕೃಪೆ: india-wris.nrsc.gov.in

ನೀರಾವರಿ ವಿಷಯದಲ್ಲಿ ಮೂರು ನಾಮ:
ಎಲ್ಲಿ ಯಾವ ಅಣೆಕಟ್ಟು ಕಟ್ಟಬೇಕು ಎಂದು ಡಿಪಿಆರ್'ಗಳು ಆಗಿಲ್ಲ. ತುಂಗಭದ್ರಾ ನದಿ ಪ್ರಾಧಿಕಾರ ತೀರ್ಮಾನ ಕೈಗೊಂಡಿಲ್ಲ. ಕೃಷ್ಣಾ ಮೇಲ್ದಂಡೆ ಯೋಜನೆಯ ಅಧಿಸೂಚನೆ ಹೊರಬಿದ್ದ ಮೇಲೆ ಇನ್ನೂ ಹೊಸ ಸಮಸ್ಯೆಗಳು ಸೃಷ್ಟಿಯಾಗುತ್ತವೆ. ಹಾಗಿದ್ದರೂ ನಮ್ಮ ಮುಖ್ಯಮಂತ್ರಿಗಳು ನಾನೇ ದೊಡ್ಡ ನೀರಾವರಿ ತಜ್ಞ ಎಂದು ಹೇಳಿಕೊಳ್ಳುತ್ತಾರೆ. ಬಿಜೆಪಿಯವರು ನೀರಾವರಿ ವಿಷಯದಲ್ಲಿ ರಾಜ್ಯದ ಜನರಿಗೆ ಮೂರು ನಾಮ ಹಾಕಲು ಹೊರಟಿದ್ದಾರೆ. ಯುವಜನರಿಗೆ ಉದ್ಯೋಗದ ವಿಷಯದಲ್ಲಿ ಈ ಬಜೆಟ್ʼನಲ್ಲಿ ಸಂಪೂರ್ಣ ನಿರ್ಲಕ್ಷ್ಯ ವಹಿಸಲಾಗಿದೆ. ಇವೆಲ್ಲ ವಿಷಯಗಳನ್ನು ಜನತಾ ಜಲಧಾರೆಯಲ್ಲಿ ಜನರ ಮುಂದೆ ಇಡುತ್ತೇನೆ ಎಂದರು .ಈ ಸಂದರ್ಭದಲ್ಲಿ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಬಂಡೆಪ್ಪ ಖಾಷೆಂಪೂರ್ ಹಾಗೂ ಕಲಬುರಗಿ ಜಿಲ್ಲೆಯ ಪಕ್ಷದ ಮುಖಂಡರು ಹಾಜರಿದ್ದರು.
Recommended Video
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications