"ಅಶ್ವಥ್ ನಾರಾಯಣಗೆ ಧಮ್ ಇದ್ದರೆ ಮೋದಿ ಬಳಿ ಹೋಗಿ ನೆರೆ ಪರಿಹಾರ ತರಲಿ''
ಕಲಬುರಗಿ, ಅಕ್ಟೋಬರ್ 25: ಉಪ ಮುಖ್ಯಮಂತ್ರಿ ಅಶ್ವತ್ಥ ನಾರಾಯಣ್ ಅವರಿಗೆ ಧಮ್ ಇದ್ದರೆ ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ಹೋಗಿ ನೆರೆ ಪರಿಹಾರ ತೆಗೆದುಕೊಂಡು ಬರಲಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಅಶ್ವಥ್ ನಾರಾಯಣ ಅವರಿಗೆ ಸವಾಲು ಹಾಕಿದರು.
ಕಲಬುರಗಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ, ""ಸಿದ್ದರಾಮಯ್ಯ ಅವರಿಗಿಂತ ಹೆಚ್ಚು ಧಮ್ ಇದೆ ಎಂದು ಅಶ್ವಥ್ ನಾರಾಯಣ್ ಅವರು ಹೇಳಿದ್ದಾರೆ. ಹಾಗಾದರೆ, ಅವರಿಗೆ ಧಮ್ ಇದ್ದರೆ ಪ್ರಧಾನಿ ಮೋದಿ ಅವರ ಮುಂದೆ ಕೂತು ಪರಿಹಾರ ತೆಗೆದುಕೊಂಡು ಬರಲಿ'' ಎಂದು ಹೇಳಿದರು.
ಮುಂದಿನ ಮುಖ್ಯಮಂತ್ರಿ ಯಾರು ಆಗಬೇಕು ಎಂದು ಕಾಂಗ್ರೆಸ್ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಜನರು ಅಭಿಮಾನದಿಂದ ಮುಖ್ಯಮಂತ್ರಿ ಆಗಲಿ ಎನ್ನುತ್ತಿದ್ದಾರೆ ಎಂದರು.
ರಾಜರಾಜೇಶ್ವರಿ ನಗರ ಹಾಗೂ ಶಿರಾ ಕ್ಷೇತ್ರಗಳ ಉಪ ಚುನಾವಣೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ. ಪ್ರವಾಹ ಪರಿಸ್ಥಿತಿಯನ್ನು ಸರ್ಕಾರ ಉತ್ತಮವಾಗಿ ನಿರ್ವಹಿಸಿಲ್ಲ. ಇನ್ನು ಡಿಸಿಎಂ ಲಕ್ಷ್ಮಣ್ ಸವದಿ ಅವರು ಬಿಜೆಪಿಗೆ ಕಾಂಗ್ರೆಸ್ ಶಾಸಕರು ಬರುತ್ತಾರೆ ಎಂದು ಪದೇ ಪದೇ ಹೇಳುತ್ತಿದ್ದಾರೆ. ಆದರೆ, ರಾಜಕೀಯವಾಗಿ ಈ ಹೇಳಿಕೆ ನೀಡುತ್ತಿದ್ದಾರೆ ಎಂದು ತಿಳಿಸಿದರು.
ಸಿಎಂ ಅವರು ವೈಮಾನಿಕ ಸಮೀಕ್ಷೆಯ ಸಂದರ್ಭ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿಲ್ಲ. ಇದರಿಂದ ಯಾವುದೇ ರೀತಿಯಾದ ಪ್ರಯೋಜನವಾಗಿಲ್ಲ. ಅಲ್ಲದೇ ರಾಜ್ಯದಲ್ಲಿ 25 ಮಂದಿ ಬಿಜೆಪಿ ಸಂಸದರು ಇದ್ದರೂ ಕೂಡಾ ಯಾವುದೇ ಪ್ರಯೋಜನವಿಲ್ಲ ಎಂದು ಟೀಕಿಸಿದರು.