ಜನವರಿ 19ಕ್ಕೆ ಕಲಬುರಗಿಗೆ ಪ್ರಧಾನಿ ಮೋದಿ ಭೇಟಿ: ಭದ್ರತೆ, ಸಂಚಾರ, ಸ್ವಚ್ಛತೆ ಬಗ್ಗೆ ಪೂರ್ವಭಾವಿ ಸಭೆ ನಡೆಸಿದ ಡಿಸಿ
ಕಲಬುರಗಿ, ಜ. 10: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇದೇ ಜನವರಿ 19ಕ್ಕೆ ಕಲಬುರಗಿಗೆ ಭೇಟಿ ನೀಡಲಿದ್ದಾರೆ. ಜಿಲ್ಲೆಯಲ್ಲಿ 30 ಸಾವಿರಕ್ಕೂ ಹೆಚ್ಚು ಫಲಾನುಭವಿಗಳು ಸೇರಿದಂತೆ ವಿವಿಧ ಜಿಲ್ಲೆಗಳ ತಾಂಡಾ ನಿವಾಸಿಗಳಿಗೆ ಹಕ್ಕು ಪತ್ರ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಈ ಹಿನ್ನಲೆ ಮಂಗಳವಾರ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಅವರು ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಪೂರ್ವಭಾವಿಯಾಗಿ ಸಭೆ ನಡೆಸಿದ್ದಾರೆ.
ಸೇಡಂ ತಾಲೂಕಿನ ಮಳಖೇಡ ಬಳಿ ರಾಜ್ಯ ಹೆದ್ದಾರಿಗೆ ಹೊಂದಿಕೊಂಡಂತೆ ಸುಮಾರು 60 ಎಕರೆ ವಿಶಾಲ ಪ್ರದೇಶದಲ್ಲಿ ಹಕ್ಕು ಪತ್ರ ವಿತರಣೆ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಪ್ರಧಾನಮಂತ್ರಿ ಮೋದಿ ಅಂದು ಕಲಬುರಗಿ ಸೇರಿದಂತೆ ಯಾದಗಿರಿ, ಬೀದರ, ರಾಯಚೂರು ಹಾಗೂ ವಿಜಯಪುರ ಜಿಲ್ಲೆಗಳ ತಾಂಡಾ ನಿವಾಸಿಗಳಿಗೆ ಹಕ್ಕು ಪತ್ರ ವಿತರಣೆ ಮತ್ತು ಜಿಲ್ಲೆಯ ಜಲ್ ಜೀವನ್ ಮಿಷನ್ ಯೋಜನೆಯ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.

"ಕಾರ್ಯಕ್ರಮ ಸುಗಮ ನಿರ್ವಹಣೆ ಮತು ಯಶಸ್ಸಿಗೆ ವಿವಿಧ 10 ಸಮಿತಿಗಳನ್ನು ರಚಿಸಲಾಗಿದ್ದು, ಆಯಾ ಅಧಿಕಾರಿಗಳಿಗೆ ನೀಡಲಾಗುವ ಜವಾಬ್ದಾರಿಯನ್ನು ಚಾಚುತಪ್ಪದೆ ಸಮರ್ಪಕವಾಗಿ ನಿರ್ವಹಿಸಬೇಕು. ವೇದಿಕೆ ನಿರ್ಮಾಣ, ಹೆಲಿಪ್ಯಾಡ್ ನಿರ್ಮಾಣ, ಪಾರ್ಕಿಂಗ್ ವ್ಯವಸ್ಥೆ, ಸುಗಮ ಸಂಚಾರ, ಸಾರ್ವಜನಿಕರ ಮತ್ತು ಗಣ್ಯರ ಆಸನದ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ಸ್ವಚ್ಛತೆ, ಭದ್ರತೆ ಹೀಗೆ ಎಲ್ಲವು ಅಚ್ಚುಕಟ್ಟಾಗಿರಬೇಕು. ಮುನ್ನೆಚ್ಚರಿಕೆಯಾಗಿ ಕಾರ್ಯಕ್ರಮ ಸ್ಥಳದಲ್ಲಿ ಆ್ಯಂಬುಲೆನ್ಸ್, ಅಗ್ನಿಶಾಮಕ ವಾಹನ ಇರಬೇಕು. ಬೇರೆ ಜಿಲ್ಲೆಗಳಿಂದ ಫಲಾನುಭವಿಗಳನ್ನು ಕರೆತೆರುವ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಬೇಕು. ಸಣ್ಣ-ಪುಟ್ಟ ಏನೇ ಸಮಸ್ಯೆ ಇದ್ದರು ತಮ್ಮ ಗಮನಕ್ಕೆ ತರಬೇಕು" ಎಂದು ಅಧಿಕಾರಿಗಳಿಗೆ ಡಿ.ಸಿ. ಯಶವಂತ ವಿ. ಗುರುಕರ್ ಸೂಚನೆ ನೀಡಿದ್ದಾರೆ.
ಜಿಲ್ಲೆಯ ವಿವಿಧ ಸ್ಥಳಗಳಿಂದ ಫಲಾನುಭವಿಗಳನ್ನು ಕರೆತರಲು 2,500 ಸಾರಿಗೆ ಬಸ್ ವ್ಯವಸ್ಥೆ ಮಾಡಬೇಕು ಎಂದು ಕೆ.ಕೆ.ಅರ್.ಟಿ.ಸಿ. ಸಂಸ್ಥೆಯ ಎಂ.ಡಿ. ರಾಚಪ್ಪ ಅವರಿಗೆ ತಿಳಿಸಿದ್ದಾರೆ. ಇನ್ನು ಮಳಖೇಡ್ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮುಂಜಾಗ್ರತವಾಗಿ ಸಿ.ಎಚ್.ಸಿ. ಕೇಂದ್ರಕ್ಕೆ ಬೇಕಾಗುವ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸಬೇಕು ಎಂದು ಡಿ.ಎಚ್.ಓ ಡಾ.ರಾಜಶೇಖರ ಮಾಲಿ ಅವರಿಗೆ ತಿಳಿಸಿದ್ದಾರೆ.
*ಅಧಿಕಾರಿಗಳು ಕೇಂದ್ರಸ್ಥಾನ ಬಿಡುವಂತಿಲ್ಲ*
ಪ್ರಧಾನಮಂತ್ರಿಗಳ ಪ್ರವಾಸ ಹಿನ್ನೆಲೆಯಲ್ಲಿ ಜನವರಿ 20ರ ವರೆಗೆ ಜಿಲ್ಲೆಯ ಯಾವುದೇ ಅಧಿಕಾರಿ, ಸಿಬ್ಬಂದಿ ಕೇಂದ್ರಸ್ಥಾನ ಬಿಡುವಂತಿಲ್ಲ. ಅಲ್ಲದೇ ಪ್ರತಿ ಕಚೇರಿಯಲ್ಲಿ ಶೇ.100ರ ಹಾಜರಾತಿಯೊಂದಿಗೆ ಕಾರ್ಯನಿರ್ವಹಿಸಬೇಕು. ಕೇಂದ್ರಸ್ಥಾನ ಬಿಡಬೇಕಾದಲ್ಲಿ ತಮ್ಮ ಅನುಮತಿ ಅಗತ್ಯ. ಉಲ್ಲಂಘಿಸಿದಲ್ಲಿ ಶಿಸ್ತು ಕ್ರಮ ಅನಿವಾರ್ಯ ಎಂದು ಡಿ.ಸಿ. ಯಶವಂತ ವಿ. ಗುರುಕರ್ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ.
ಸಭೆಯಲ್ಲಿ ಕೆ.ಕೆ.ಆರ್.ಡಿ.ಬಿ. ಅಧ್ಯಕ್ಷರು ಹಾಗೂ ಕಲಬುರಗಿ ದಕ್ಷಿಣ ಶಾಸಕ ದತ್ತಾತ್ರೇಯ ಪಾಟೀಲ ರೇವೂರ, ಕೆ.ಕೆ.ಆರ್.ಟಿ.ಸಿ. ಮತ್ತು ಕಲಬುರಗಿ - ಯಾದಗಿರಿ ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷರು ಹಾಗೂ ಸೇಡಂ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ, ವಿಧಾನ ಪರಿಷತ್ ಶಾಸಕ ಶಶೀಲ ಜಿ. ನಮೋಶಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಭಾಗಿಯಾಗಿದ್ದರು.












Click it and Unblock the Notifications