ಪಿಎಸ್ಐ ಹಗರಣ: ಪ್ರಮುಖ ಆರೋಪಿ ದಿವ್ಯಾ ಪತಿ ರಾಜೇಶ್ ಹಾಗರಗಿಗೆ ಜಾಮೀನು
ಕಲಬುರಗಿ, ಸೆ.27 : ಪಿಎಸ್ಐ ನೇಮಕಾತಿ ಹಗರಣದ ಆರೋಪಿ ರಾಜೇಶ್ ಹಾಗರಗಿ ಅವರಿಗೆ ಕರ್ನಾಟಕ ಹೈಕೋರ್ಟ್ ಕಲಬುರಗಿ ಪೀಠವು ಮಂಗಳವಾರ (ಸೆಪ್ಟೆಂಬರ್ 27) ರಂದು ಜಾಮೀನು ನೀಡಿದೆ.
ಬಂಧಿತ ರಾಜೇಶ್ ಹಾಗರಗಿ ಬಿಜೆಪಿ ಮಾಜಿ ಕಾರ್ಯಕರ್ತೆ ಮತ್ತು ಪೊಲೀಸ್ ಸಬ್ಇನ್ಸ್ಪೆಕ್ಟರ್ ನೇಮಕಾ ಹಗರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಅವರ ಪತಿ.
ರಹಸ್ಯ ಬಯಲು; ದಿವ್ಯಾ ಹಾಗರಗಿ ತಪ್ಪಿಸಿಕೊಳ್ಳಲು ನೆರವಾಗಿದ್ದು ಯಾರು?
ಕಳೆದ ಏಪ್ರಿಲ್ 7 ರಂದು ಸಿಐಡಿ ಅಧಿಕಾರಿಗಳಿಂದ ಬಂಧನಕ್ಕೆ ಒಳಗಾಗಿದ್ದ ಆರೋಪಿ ರಾಜೇಶ್ ಹಾಗರಗಿ ಕಲಬುರಗಿಯ ಜ್ಞಾನಜ್ಯೋತಿ ಇಂಗ್ಲಿಷ್ ಮಾಧ್ಯಮ ಶಾಲೆಯ ಅಧ್ಯಕ್ಷರಾಗಿದ್ದಾರೆ. ಇಂದು ಕರ್ನಾಟಕ ಹೈಕೋರ್ಟ್ನ ಕಲಬುರಗಿ ಪೀಠ ಪ್ರಕರಣದಲ್ಲಿ ಅವರಿಗೆ ಜಾಮೀನು ಮಂಜೂರು ಮಾಡಿದೆ.
ಸಾಕ್ಷಿ ನಾಶಕ್ಕೆ ಪ್ರಯತ್ನಿಸುವಂತಿಲ್ಲ. ಪೊಲೀಸ್ ಠಾಣಾ ವ್ಯಾಪ್ತಿಯಿಂದ ಅನುಮತಿ ಇಲ್ಲದೇ ಹೊರಹೋಗುವಂತಿಲ್ಲ ಎಂಬ ಷರತ್ತುಗಳನ್ನು ವಿಧಿಸಿ ನ್ಯಾಯಾಲಯವು ಅರ್ಜಿದಾರ ಆರೋಪಿಗೆ ಜಾಮೀನು ನೀಡಿದೆ.
ಈ ವೇಳೆ ಹಗರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಪತಿ ಎಂಬ ಕಾರಣಕ್ಕೆ ಆರೋಪಿಗೆ ಜಾಮೀನು ನಿರಾಕರಿಸಲಾಗದು ಎಂದು ನ್ಯಾಯಮೂರ್ತಿ ಎಂ ಜಿ ಉಮಾ ಅವರ ನೇತೃತ್ವದ ಏಕಸದಸ್ಯ ಪೀಠವು ಜಾಮೀನು ಆದೇಶದಲ್ಲಿ ಹೇಳಿದೆ.
"ಪ್ರಕರಣದ ಪ್ರಮುಖ ಆರೋಪಿಯಾಗಿರುವ ದಿವ್ಯಾ ಹಾಗರಗಿ ಪತಿ ಎಂಬ ಆಧಾರದ ಮೇಲೆ ಆರೋಪಿ ರಾಜೇಶ್ ಜಾಮೀನಿಗೆ ಅರ್ಹರಲ್ಲ ಎಂದು ಹೇಳಲಾಗದು. ಆರೋಪ ಸಾಬೀತುಪಡಿಸುವ ದಾಖಲೆಗಳು ಇರಬೇಕು. ಐಪಿಸಿ ಸೆಕ್ಷನ್ 212 ಹೊರತುಪಡಿಸಿ, ಅರ್ಜಿದಾರ ಆರೋಪಿ ವಿರುದ್ಧ ಗಂಭೀರ ಆರೋಪ ಕಾಣುತ್ತಿಲ್ಲ" ಎಂದು ಪೀಠವು ಜಾಮೀನು ಮಂಜೂರು ಮಾಡಿದೆ.
ಸಿಐಡಿ ಪರ ವಾದ ಮಂಡಿಸಿದ್ದ ಸರ್ಕಾರಿ ವಕೀಲ ಕಿರಣ್ ಜವಳಿ "ಪಿಎಸ್ಐ ದೊಡ್ಡ ಆರ್ಥಿಕ ಅಪರಾಧವಾಗಿದ್ದು, ಪತ್ನಿ ದಿವ್ಯಾ ಹಾಗರಗಿಗೆ ಆಶ್ರಯ ನೀಡುವ ಮೂಲಕ ರಾಜೇಶ್ ಪ್ರಮಾದವೆಸಗಿದ್ದಾರೆ. ಹೀಗಾಗಿ, ಅವರಿಗೆ ಜಾಮೀನು ಮಂಜೂರು ಮಾಡಬಾರದು" ಎಂದು ಆಕ್ಷೇಪ ವ್ಯಕ್ತಪಡಿಸಿದ್ದರು.
ಅರ್ಜಿದಾರರ ಪರ ವಕೀಲರಾದ ಅವಿನಾಶ್ ಉಪ್ಲಾಂವಕರ್ "ಪ್ರಕರಣದಲ್ಲಿ 15ನೇ ಆರೋಪಿಯಾಗಿರುವ ಮಲ್ಲಿಕಾರ್ಜುನ ಮೇಳಕುಂದಿ ಅವರ ವಿರುದ್ಧವೂ ಭಾರತೀಯ ದಂಡ ಸಂಹಿತೆಯ ಸೆಕ್ಷನ್ಗಳಾದ 120ಬಿ, 201, 212 ಜೊತೆಗೆ ಸೆಕ್ಷನ್ 34ರ ಅಡಿ ಪ್ರಕರಣ ದಾಖಲಾಗಿದ್ದು, ಅವರಿಗೆ ವಿಚಾರಣಾಧೀನ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ರಾಜೇಶ್ ಅವರ ವಿರುದ್ಧವೂ ಇದೇ ಆರೋಪಗಳಿದ್ದು, ಅವರಿಗೆ ಜಾಮೀನು ನಿರಾಕರಿಸಲಾಗಿದೆ" ಎಂದು ನ್ಯಾಯಾಲಯಕ್ಕೆ ತಿಳಿಸಿದ್ದರು.
ಪೊಲೀಸ್ ಇಲಾಖೆಯ ಪಿಎಸ್ಐ ನೇಮಕಾತಿ ಪರೀಕ್ಷೆ ಹಗರಣದ ತನಿಖೆ ಕೈಗೆತ್ತಿಕೊಂಡಿರುವ ಸಿಐಡಿ ಅಧಿಕಾರಿಗಳ ತಂಡ ಈಗಾಗಲೇ ಹಗರಣದಲ್ಲಿ ಕಲಬುರಗಿಯ ಒಂದನೇಯ ಜೆಎಂಎಫ್ಸಿ ನ್ಯಾಯಾಲಯಕ್ಕೆ ಮೂರು ಆರೋಪ ಪಟ್ಟಿಸಲ್ಲಿಸಿದೆ.