ರಾಜ್ಯಸಭೆ ಉಪ ಚುನಾವಣೆ; ಬಿಜೆಪಿ ಟಿಕೆಟ್ ಅಶೋಕ ಗಸ್ತಿ ಕುಟುಂಬಕ್ಕೆ ನೀಡಿ
ಕಲಬುರಗಿ, ನವೆಂಬರ್ 04: ರಾಜ್ಯಸಭಾ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಯಾರು? ಎಂಬ ಬಗ್ಗೆ ಚರ್ಚೆಗಳು ಆರಂಭವಾಗಿವೆ. ಕಲ್ಯಾಣ ಕರ್ನಾಟಕ ಭಾಗದ ನಾಯಕರಿಗೆ ಟಿಕೆಟ್ ನೀಡಬೇಕು ಎಂದು ಬಿಜೆಪಿಯ ನಾಯಕರು ಒತ್ತಾಯಿಸುತ್ತಿದ್ದಾರೆ.
ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದ ಅಶೋಕ್ ಗಸ್ತಿ ಕೋವಿಡ್ನಿಂದ ಮೃತಪಟ್ಟಿದ್ದರು. ಚುನಾವಣಾ ಆಯೋಗ ತೆರವಾದ ಸ್ಥಾನಕ್ಕೆ ಡಿಸೆಂಬರ್ 1ರಂದು ಉಪ ಚುನಾವಣೆ ನಡೆಸುವುದಾಗಿ ಘೋಷಣೆ ಮಾಡಿದೆ.
ಉಪ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಬಿಜೆಪಿ ಅಭ್ಯರ್ಥಿ ಯಾರು? ಎಂಬ ಪ್ರಶ್ನೆ ಎದ್ದಿದೆ. ರಾಜ್ಯಸಭಾ ಉಪಚುನಾವಣೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ನಾಯಕರಿಗೆ ಟಿಕೆಟ್ ನೀಡಬೇಕು ಎಂಬ ಬೇಡಿಕೆಯನ್ನು ಮುಂದಿಡಲಾಗಿದೆ.

ಬಿಜೆಪಿಯ ಸಾಮಾನ್ಯ ಕಾರ್ಯಕರ್ತರಾಗಿದ್ದ ಅಶೋಕ್ ಗಸ್ತಿ ಅವರಿಗೆ ಪಕ್ಷ ರಾಜ್ಯಸಭೆ ಚುನಾವಣೆ ಟಿಕೆಟ್ ನೀಡಿತ್ತು. ಚುನಾವಣೆಯಲ್ಲಿಯೂ ಅವರು ಜಯಗಳಿಸಿ ರಾಜ್ಯಸಭೆ ಪ್ರವೇಶ ಮಾಡಿದ್ದರು. ಜೂನ್ನಲ್ಲಿ ಅವರು ರಾಜ್ಯಸಭೆ ಸದಸ್ಯರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದರು. ಸೆಪ್ಟೆಂಬರ್ನಲ್ಲಿ ಕೋವಿಡ್ ಸೋಂಕಿನಿಂದಾಗಿ ಮೃತಪಟ್ಟಿದ್ದರು.
ರಾಜ್ಯಸಭೆ ಉಪ ಚುನಾವಣೆಗೆ ಅಶೋಕ್ ಗಸ್ತಿ ಪತ್ನಿ ಸುಮಾ ಅವರಿಗೆ ಬಿಜೆಪಿ ಟಿಕೆಟ್ ನೀಡಬೇಕು ಎಂದು ಸವಿತಾ ಸಮಾಜದ ಪ್ರಮುಖರು ಒತ್ತಾಯ ಮಾಡುತ್ತಿದ್ದಾರೆ. "ಟಿಕೆಟ್ ನೀಡಿದರೆ ಜವಾಬ್ದಾರಿ ನಿರ್ವಹಣೆ ಮಾಡಲು ಸಿದ್ಧ" ಎಂದು ಸುಮಾ ಅವರು ಸಹ ಹೇಳಿದ್ದಾರೆ.
ಕಲಬುರಗಿ ಮಹಾನಗರ ಬಿಜೆಪಿ ಘಟಕದ ಅಧ್ಯಕ್ಷ ಸಿದ್ದಾಜಿ ಪಾಟೀಲ ಈ ಕುರಿತು ಮಾತನಾಡಿದ್ದಾರೆ. "ಈ ಭಾಗದವರಿಗೆ ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಮನವಿ ಮಾಡಲಾಗುತ್ತದೆ" ಎಂದು ತಿಳಿಸಿದ್ದಾರೆ.












Click it and Unblock the Notifications