ರಾಜ್ಯ, ಕೇಂದ್ರ ಸರ್ಕಾರಗಳಿಂದ ಜನರ ಲೂಟಿ: ಸುರ್ಜೇವಾಲಾ ಆರೋಪ
ಕಲಬುರಗಿ, ಅಕ್ಟೋಬರ್ 19: ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಜ್ಯದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರವು ಬೆಲೆ ಏರಿಕೆಯಿಂದ ಜನರನ್ನು ಲೂಟಿ ಮಾಡುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಆರೋಪಿಸಿದ್ದಾರೆ.
ಕಲಬುರಗಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬೊಮ್ಮಾಯಿ ಸರ್ಕಾರ ಕಾಲಿನಿಂದ ತಲೆವರೆಗೂ ಭ್ರಷ್ಟಾಚಾರದಲ್ಲಿ ಮುಳುಗಿದೆ. ಕೇಂದ್ರದಲ್ಲಿ ನರೇಂದ್ರ ಮೋದಿ ಸರ್ಕಾರ ಬೆಲೆ ಏರಿಕೆ ಮೂಲಕ ಜನರನ್ನು ಕೊಳ್ಳೆ ಹೊಡೆಯುತ್ತಿದೆ ಎಂದು ಟೀಕಿಸಿದರು.
ಇಂಧನ ಬೆಲೆ, ಅನಿಲ ಬೆಲೆ, ಅಗತ್ಯ ವಸ್ತುಗಳ ಬೆಲೆ ನೋಡಿದರೆ ಇವರ ಲೂಟಿ ಬಗ್ಗೆ ಸ್ಪಷ್ಟವಾಗಿ ಗೊತ್ತಾಗುತ್ತದೆ. ಸದ್ಯ ವಿದೇಶದ ತೊಗರಿ ಬೇಳೆ ದೇಶಕ್ಕೆ ಬರಲಿದೆ. ನಮ್ಮ ದೇಶದ ರೈತರ ಬೇಳೆ ಮಾರಾಟ ಆಗದು, ರೈತರು ಮತ್ತೆ ಸಂಕಷ್ಟಕ್ಕೆ ಸಿಲುಕಲಿದ್ದಾರೆ ಎಂದರು.

ಇನ್ನು ಪ್ರಧಾನಿ ನರೇಂದ್ರ ಮೋದಿ ಯಾವ ರಾಜ್ಯದಲ್ಲೂ ದಲಿತರನ್ನು ಮುಖ್ಯಮಂತ್ರಿ ಮಾಡಿಲ್ಲ. ನಾವು ಪಂಜಾಬ್ನಲ್ಲಿ ದಲಿತ ವ್ಯಕ್ತಿಯನ್ನು ಮುಖ್ಯಮಂತ್ರಿ ಮಾಡಿದ್ದೇವೆ. ಎಲ್ಲಾ ಸಮುದಾಯಕ್ಕೂ ಪ್ರಾತಿನಿಧ್ಯ ಕೊಡುತ್ತಿದ್ದೇವೆ. ಮೋದಿ ಆಡಳಿತದಿಂದ ದೇಶದ ಜನ ಬದಲಾವಣೆ ಬಯಸುತ್ತಿದ್ದಾರೆ. ಜನ ಈ ಬಾರಿ ದೇಶ ಮತ್ತು ರಾಜ್ಯದಲ್ಲಿ ಬದಲಾವಣೆ ಬಯಸುತ್ತಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಹೇಳಿದರು.
ಇದೇ ವೇಳೆ ರಾಜ್ಯ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಗೆ ಪತ್ರ ಬರೆದ ವಿಚಾರವಾಗಿ ಮಾತನಾಡಿದ ಸುರ್ಜೇವಾಲಾ, ಕಾಂಗ್ರೆಸ್ ಒಂದು ಕುಟುಂಬ, ಕುಟುಂಬದ ಮುಖ್ಯಸ್ಥರಿಗೆ ಪತ್ರ ಬರೆಯಲು ಮೂಕ್ತ ಅವಕಾಶ ಇದೆ. ಪಕ್ಷದ ಯಾರೇ ಕಾರ್ಯಕರ್ತರು ಸೋನಿಯಾ ಗಾಂಧಿಗೆ ಪತ್ರ ಬರೆಯಬಹುದು. ತಮ್ಮ ಅಭಿಪ್ರಾಯ ಸೋನಿಯಾ ಗಾಂಧಿಗೆ ತಿಳಿಸುವುದರಲ್ಲಿ ತಪ್ಪೇನಿಲ್ಲ ಎಂದು ಪ್ರತಿಪಾದಿಸಿದರು.

ಮೋದಿ ಬಗ್ಗೆ ಅವಹೇಳನಕಾರಿ ಟ್ವೀಟ್: ವಿಷಾದ ವ್ಯಕ್ತಪಡಿಸಿದ ಡಿಕೆಶಿ
ಪ್ರಧಾನಮಂತ್ರಿ ನರೇಂದ್ರ ಮೋದಿ ಬಗ್ಗೆ ಕೆಪಿಸಿಸಿ ಸಾಮಾಜಿಕ ಜಾಲತಾಣದಿಂದ ಮಾಡಲಾಗಿರುವ ಅವಹೇಳನಕಾರಿ ಟ್ವೀಟ್ ಬಗ್ಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿಷಾದ ವ್ಯಕ್ತಪಡಿಸಿ, ತಕ್ಷಣ ಈ ಟ್ವೀಟ್ ತೆಗೆದುಹಾಕಲು ಸೂಚನೆ ನೀಡಿದ್ದಾರೆ.
ಈ ಅಚಾತುರ್ಯಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಕಾಂಗ್ರೆಸ್ ಇಂತಹ ಪ್ರಮಾದವನ್ನು ಎಂದಿಗೂ ಸಹಿಸುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.
ಕರ್ನಾಟಕ ಕಾಂಗ್ರೆಸ್ (ಅಕ್ಟೋಬರ್ 17) ರಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ 'ಹೆಬ್ಬೆಟ್ ಗಿರಾಕಿ ಮೋದಿ' ಎಂಬ ಹ್ಯಾಷ್ ಟ್ಯಾಗ್ ಬಳಸಿ ಸರಣಿ ಟ್ವೀಟ್ ಮಾಡಿತ್ತು. "ಮೌನೇಂದ್ರ ಮೋದಿ' ಎಂದು ಟ್ವೀಟ್ ಮಾಡಿತ್ತು.
ಪೆಟ್ರೋಲ್ ಬೆಲೆ ಏರಿಕೆ, ಜನರನ್ನು ದೋಚಿ ಉದ್ಯಮಿಗಳ ಹೊಟ್ಟೆ ತುಂಬಿಸುವ ಮೋದಿ, ವಾಸ್ತವಗಳ ಮಾತನಾಡದ ಮೌನೇಂದ್ರ ಮೋದಿ ಇತ್ಯಾದಿ ವಿಚಾರಗಳ ವಿರುದ್ಧ ಬರೆಯುವಾಗ ಹೆಬ್ಬೆಟ್ ಗಿರಾಕಿ ಮೋದಿ ಎಂಬ ಹ್ಯಾಷ್ ಟ್ಯಾಗ್ ಬಳಸಿತ್ತು.












Click it and Unblock the Notifications