ಅಕ್ರಮ ಮರಳು ಗಣಿಗಾರಿಕೆ; ಹತ್ಯೆಯಾದ ಪೇದೆ ಕುಟುಂಬಕ್ಕೆ ಪರಿಹಾರ ವಿತರಣೆ
ಕಲಬುರಗಿ, ಜೂನ್ 21; ಅಕ್ರಮ ಮರಳು ಸಾಗಣೆ ತಪಾಸಣೆ ಸಂದರ್ಭದಲ್ಲಿ ಟ್ರಾಕ್ಟರ್ಗೆ ಸಿಲುಕಿ ಸಾವನ್ನಪ್ಪಿದ ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ನೆಲೋಗಿ ಪೊಲೀಸ್ ಠಾಣೆಯ ಮುಖ್ಯ ಪೇದೆ ಮಯೂರ್ ಚವ್ಹಾಣ ಕುಟುಂಬಕ್ಕೆ ಸಚಿವರು ಸಾಂತ್ವನ ಹೇಳಿದರು. ಪಕ್ಷದ ವತಿಯಿಂದ ಪರಿಹಾರ ವಿತರಣೆ ಮಾಡಿದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐಟಿ-ಬಿಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಮುಖ್ಯ ಪೇದೆ ನಿವಾಸಕ್ಕೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ಶಾಸಕರಾದ ಎಂ. ವೈ. ಪಾಟೀಲ, ಕಲಬುರಗಿ ಎಸ್ಪಿ ಇಶಾ ಪಂತ್, ತಹಶೀಲ್ದಾರ್ ಸಂಜೀವ ಕುಮಾರ ದಾಸರ್ ಮುಂತಾದವರು ಉಪಸ್ಥಿತರಿದ್ದರು. ಸಚಿವರು ಈ ಸಂದರ್ಭದಲ್ಲಿ ಶಾಸಕ ಎಂ. ವೈ. ಪಾಟೀಲ ಜೊತೆ ಸೇರಿ ಪಕ್ಷದ ವತಿಯಿಂದ 1 ಲಕ್ಷ ರೂ. ಚೆಕ್ ಅನ್ನು ಮೃತ ಮಯೂರ್ ಚವ್ಹಾಣ ಅವರ ಪತ್ನಿ ನಿರ್ಮಲಾಗೆ ವಿತರಿಸಿದರು.
ಎಲ್ಲಾ ಸೌಲಭ್ಯ ಕಲ್ಪಿಸಲಾಗುತ್ತದೆ; ಈ ಸಂದರ್ಭದಲ್ಲಿ ಸಚಿವರು, ಶಾಸಕರು ಕುಟುಂಬಕ್ಕೆ ಸರ್ಕಾರದಿಂದ ಸಿಗಬೇಕಾದ ಎಲ್ಲಾ ಸೌಲಭ್ಯ ಕಲ್ಪಿಸಲಾಗುವುದು. ಧೈರ್ಯದಿಂದಿರಿ, ಆತ್ಮ ವಿಶ್ವಾಸ ಕಳೆದುಕೊಳ್ಳಬೇಡಿ. ಸರ್ಕಾರ ನಿಮ್ಮೊಂದಿಗಿದೆ ಎಂದು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, "ಮೃತ ಮಯೂರ್ ಚವ್ಹಾಣ ಕುಟುಂಬಕ್ಕೆ ಪೊಲೀಸ್ ಇಲಾಖೆಯಿಂದ 30 ಲಕ್ಷ ರೂ. ಪರಿಹಾರ ನೀಡಲಾಗುವುದು. ಜೊತೆಗೆ ಸೇವಾ ವಿಮೆ, ಗ್ರಾಜುಟಿ ಸೇರಿದಂತೆ ಇತರೆ 10 ಲಕ್ಷ ರೂ. ಕುಟುಂಬಕ್ಕೆ ಸಿಗಲಿದೆ" ಎಂದರು.
"ಸರ್ಕಾರದ ನಿಯಮಾವಳಿಯಂತೆ ಕುಟುಂಬದ ಓರ್ವ ಸದಸ್ಯರಿಗೆ ಸರ್ಕಾರಿ ನೌಕರಿ ನೀಡಲಾಗುವುದು. ಮಕ್ಕಳ ವಿಧ್ಯಾಬ್ಯಾಸದ ಬಗ್ಗೆಯೂ ಸರ್ಕಾರ ಗಮನಹರಿಸಲಿದೆ" ಎಂದು ಭರವಸೆ ನೀಡಿದರು.
"ಜಿಲ್ಲೆಯಲ್ಲಿ ಅಕ್ರಮ ಮರಳು ಮಾಫಿಯಾಗೆ ಕಡಿವಾಣ ಹಾಕಲಾಗುವುದು. ನಮ್ಮ ಸರ್ಕಾರ ಬಂದು 1 ತಿಂಗಳಾಗಿದೆ. ಜಿಲ್ಲೆಯಲ್ಲಿನ ಅಕ್ರಮ ಮರಳುಗಾರಿಕೆ, ಗಣಿಗಾರಿಕೆ, ಜೂಜು ಅಡ್ಡೆ ತಡೆಯಲು ಈಗಾಗಲೇ ಹೆಜ್ಜೆ ಇಟ್ಟಿದ್ದೇವೆ. ಈ ಪ್ರಕರಣ ಸ್ಟಾಕ್ ಯಾರ್ಡ್ನಿಂದ ಮರಳು ತರುವಾಗ ಘಟಿಸಿದೆ. ಇದರಲ್ಲಿ ಯಾರೇ ತಪ್ಪಿತಸ್ಥರಿದ್ದರೂ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು" ಎಂದು ಸಚಿವರು ಹೇಳಿದರು.
ಅಕ್ರಮಗಳಿಗೆ ಕಡಿವಾಣ ಹಾಕಿ; ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, "ಕಲಬುರಗಿ ಜಿಲ್ಲೆಯಲ್ಲಿ ಅನಧಿಕೃತವಾಗಿ ನಡೆಯುತ್ತಿರುವ ಅಕ್ರಮ ಮದ್ಯ ಮತ್ತು ಮರಳು ಸಂಗ್ರಹಣೆ ಮತ್ತು ಮಾರಾಟ, ಕ್ರಿಕೆಟ್ ಬೆಟ್ಟಿಂಗ್, ಗ್ಯಾಂಬ್ಲಿಂಗ್, ಚೈನ್ ಸ್ನ್ಯಾಚಿಂಗ್, ಕಳ್ಳತನ, ಗಾಂಜಾ ಮಾರಾಟ, ಸ್ಮಗ್ಲಿಂಗ್ ಇವೆಲ್ಲಕ್ಕೂ ಕಡಿವಾಣ ಹಾಕಬೇಕು" ಎಂದು ಪೊಲೀಸರಿಗೆ ಸೂಚನೆ ನೀಡಿದರು.
ಮಂಗಳವಾರ ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕಂದಾಯ, ಪೊಲೀಸ್ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಪುಂಡ-ಪೋಕರಿಗಳು, ರೌಡಿಗಳನ್ನು ಮಟ್ಟ ಹಾಕಿ ಜನರ ನೆಮ್ಮದಿ ಜೀವನಕ್ಕೆ ಪೊಲೀಸ್ ಅಧಿಕಾರಿಗಳು ಕಾರ್ಯ ನಿರ್ವಹಣೆ ಮಾಡಬೇಕು ಎಂದರು.
ಸಚಿವರು ಮಾತನಾಡಿ, "ರೌಡಿಗಳು ಪೊಲೀಸರನ್ನು ನೋಡಿ ಹೆದರಬೇಕು. ಅದರ ಬದಲು ರೌಡಿಗಳ ಜೊತೆ ಪೊಲೀಸ್ ಅಧಿಕಾರಿಗಳು ಹುಟ್ಟುಹಬ್ಬ ಆಚರಿಸುವ ಕೆಟ್ಟು ಗೀಳು ಹುಟ್ಟುಕೊಂಡಿದೆ. ಈ ಮೂಲಕ ಸಮಾಜಕ್ಕೆ ಪೊಲೀಸ್ ಇಲಾಖೆಯಿಂದ ಯಾವ ರೀತಿಯ ಸಂದೇಶ ಹೋಗುತ್ತದೆ? ಎಂಬುದು ನೀವು ಬಲ್ಲಿರಾ?" ಎಂದು ಪ್ರಶ್ನಿಸಿದರು.
"ರೌಡಿಗಳು, ಸಮಾಜ ಘಾತುಕರು ಖಾಕಿ ಕಂಡರೆ ಭಯ ಬರುವಂತೆ ನಿಮ್ಮ ಕೆಲಸದಲ್ಲಿ ಬದಲಾವಣೆ ತನ್ನಿ. ಇಲ್ಲ ಜಾಗ ಖಾಲಿ ಮಾಡಿ. ತಮ್ಮ ಹಾಗೂ ಸಚಿವ ಡಾ. ಶರಣಪ್ರಕಾಶ ಪಾಟೀಲ ಹೆಸರಿನಲ್ಲಿ ಠಾಣೆಗಳಲ್ಲಿ ವಸೂಲಿ ಮಾಡಲಾಗುತ್ತಿದೆ ಎಂಬ ಮಾಹಿತಿ ಬಂದಿದ್ದು, ಈ ರೀತಿಯ ವಸೂಲಿಗೆ ಇಳಿದಿದಲ್ಲಿ ಅಂತಹ ಅಧಿಕಾರಿಗಳ ಮೇಲೆ ಸರ್ಕಾರ ಕಾನೂನು ಕ್ರಮ ಕೈಗೊಳ್ಳಲಿದೆ" ಎಂದು ಎಚ್ಚರಿಸಿದರು.












Click it and Unblock the Notifications