ಮೋದಿ ವಿರುದ್ಧ ಹೇಳಿಕೆ ನೀಡಿದರೆ ನಾಲಿಗೆ ಸುಡಬೇಕಾಗುತ್ತದೆ: ಯತ್ನಾಳ ವಿವಾದ
ಕಲಬುರ್ಗಿ, ನವೆಂಬರ್ 10: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಬಾಯಿಗೆ ಬಂದಂತೆ ಹೇಳಿಕೆ ನೀಡುವವರ ನಾಲಿಗೆ ಸುಡಬೇಕಾಗುತ್ತದೆ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ ಯತ್ನಾಳ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ನೋಟು ಅಮಾನ್ಯೀಕರಣದಿಂದ ಜನರನ್ನು ಸಂಕಷ್ಟಕ್ಕೆ ನೂಕಿದ ಮೋದಿ ಅವರನ್ನು ಸುಡಬೇಕು ಎಂಬ ಅರ್ಥದಲ್ಲಿ ಹೇಳಿಕೆ ನೀಡಿದ್ದ ಮಾಜಿ ಸಚಿವ ಟಿ.ಬಿ. ಜಯಚಂದ್ರ ವಿರುದ್ಧ ಯತ್ನಾಳ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ನವರು ಹತಾಶೆಯಿಂದ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಮೋದಿ ಅವರನ್ನು ರಾಹುಲ್ ಗಾಂಧಿ ಚೋರ್ ಎನ್ನುತ್ತಾರೆ. ರಾಹುಲ್ ಗಾಂಧಿ ಒಬ್ಬ ಅಪ್ರಬುದ್ಧ, ಅರೆಹುಚ್ಚ ಎಂದು ಯತ್ನಾಳ ಟೀಕಿಸಿದರು.

ಕಾಂಗ್ರೆಸ್ ನಾಯಕರು ಬಾಯಿಗೆ ಬಂದಂತೆ ಮಾತನಾಡುವುದನ್ನು ನಿಲ್ಲಿಸಬೇಕು. ಇಲ್ಲದಿದ್ದರೆ ಅವರಿಗಿಂತ ಕೆಟ್ಟದಾಗಿ ನಾವು ಮಾತನಾಡಬೇಕಾಗುತ್ತದೆ. ಅದು ನಮಗೂ ಗೊತ್ತಿದೆ. ನಮ್ಮ ಸಂಯಮದ ಪರೀಕ್ಷೆ ಮಾಡಬೇಡಿ ಎಂದು ಎಚ್ಚರಿಕೆ ನೀಡಿದರು.
ಈ ಹಿಂದೆ ಸಿದ್ದರಾಮಯ್ಯ ಟಿಪ್ಪು ಜಯಂತಿ ಮಾಡಿ ಅಧಿಕಾರ ಕಳೆದುಕೊಂಡರು. ಈಗ ಎಚ್ ಡಿ ಕುಮಾರಸ್ವಾಮಿ ಅಧಿಕಾರ ಕಳೆದುಕೊಳ್ಳುವ ಭೀತಿಯಿಂದ ಆರೋಗ್ಯದ ನೆಪವೊಡ್ಡಿ ಟಿಪ್ಪು ಜಯಂತಿಯಿಂದ ದೂರವೇ ಉಳಿದಿದ್ದಾರೆ.
ಟಿಪ್ಪು ಜಯಂತಿ ಆಚರಣೆ ಕುಮಾರಸ್ವಾಮಿ ಅವರಿಗೆ ಇಷ್ಟವಿಲ್ಲ. ಅದಕ್ಕಾಗಿ ಆಹ್ವಾನ ಪತ್ರಿಕೆಯಲ್ಲಿ ಶಿಷ್ಟಾಚಾರಕ್ಕೆ ಕೂಡ ತಮ್ಮ ಹೆಸರು ಹಾಕುವುದು ಬೇಡ ಎಂದಿದ್ದರು. ಅವರ ಈ ಧೈರ್ಯಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ಎಚ್ ಡಿ ದೇವೇಗೌಡ ಜಯಂತಿಯಲ್ಲಿ ಹಾಜರಾಗಿಲ್ಲ. ಪರಮೇಶ್ವರ್ ವಿದೇಶ ಪ್ರವಾಸಕ್ಕೆ ತೆರಳಿದ್ದಾರೆ. ಇದರ ಅರ್ಥ ಅವರಾರಿಗೂ ಟಿಪ್ಪು ಜಯಂತಿಯಲ್ಲಿ ಪಾಲ್ಗೊಳ್ಳುವ ಮನಸ್ಸಿಲ್ಲ. ಈ ಕಾರಣಕ್ಕಾಗಿಯೇ ಅಂತರ ಕಾಯ್ದುಕೊಂಡಿದ್ದಾರೆ ಎಂದು ಹೇಳಿದರು.












Click it and Unblock the Notifications