ಉತ್ತರ ಕರ್ನಾಟಕದಿಂದ ಸ್ಪರ್ಧಿಸುವುದಿಲ್ಲ : ಸಿದ್ದರಾಮಯ್ಯ
ಕಲಬುರಗಿ, ಸೆಪ್ಟೆಂಬರ್ 20 : 'ಯಡಿಯೂರಪ್ಪ ಎಲ್ಲಿಂದಲೋ ಸ್ಪರ್ಧಿಸಿದರೆ ನನಗೇನು?. ನಾನು ಉತ್ತರ ಕರ್ನಾಟಕದಿಂದ ಸ್ಪರ್ಧಿಸುವುದಿಲ್ಲ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಕಲಬುರಗಿಯಲ್ಲಿ ಮಂಗಳವಾರ ಮಾತನಾಡಿದ ಸಿದ್ದರಾಮಯ್ಯ ಅವರು, 'ನನಗೆ ಕ್ಷೇತ್ರವಿದೆ, ಹೀಗಿರುವಾಗ ನಾನೇಕೆ ಕೊಪ್ಪಳದಿಂದ ಸ್ಪರ್ಧಿಸಲಿ?. ಉತ್ತರ ಕರ್ನಾಟಕದಿಂದ ಚುನಾವಣೆಗೆ ಸ್ಪರ್ಧಿಸುವುದಿಲ್ಲ' ಎಂದರು.

'ಯಡಿಯೂರಪ್ಪ ಎಲ್ಲಿಂದಲೋ ಸ್ಪರ್ಧಿಸಿದರೆ ನನಗೇನು?. ಶಿಕಾರಿಪುರ ಕ್ಷೇತ್ರವನ್ನು ಮಗನಿಗೆ ಬಿಟ್ಟುಕೊಡುವ ಉದ್ದೇಶದಿಂದ ಅವರು ಬೇರೆ ಕ್ಷೇತ್ರವನ್ನು ಹುಡುಕುತ್ತಿದ್ದಾರೆ. ಅವರು ಉತ್ತರ ಕರ್ನಾಟಕದಿಂದ ಸ್ಪರ್ಧಿಸಿದರೆ ಬಿಜೆಪಿಗೆ ಏನೂ ಲಾಭವಿಲ್ಲ' ಎಂದು ಹೇಳಿದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಉತ್ತರ ಕರ್ನಾಟದಿಂದ 2018ರ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಆದರೆ, ಯಾವ ಕ್ಷೇತ್ರದಿಂದ? ಎನ್ನುವುದು ಇನ್ನೂ ಅಂತಿಮವಾಗಿಲ್ಲ.
ಯಡಿಯೂರಪ್ಪ ಉತ್ತರ ಕರ್ನಾಕದಿಂದ ಸ್ಪರ್ಧಿಸಲಿದ್ದಾರೆ. ಆದ್ದರಿಂದ, ಸಿದ್ದರಾಮಯ್ಯ ಅವರಿಗೂ ಉತ್ತರ ಕರ್ನಾಟಕದಿಂದ ಸ್ಪರ್ಧಿಸುವಂತೆ ಆಹ್ವಾನ ನೀಡುತ್ತೇವೆ ಎಂದು ಹಲವು ಕಾಂಗ್ರೆಸ್ ನಾಯಕರು, ಸಚಿವರು ಹೇಳಿದ್ದರು.
ಸದ್ಯ, ಉತ್ತರ ಕರ್ನಾಟಕದಿಂದ ಸ್ಪರ್ಧೆ ಮಾಡುವುದಿಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ವರುಣಾ ಕ್ಷೇತ್ರದ ಶಾಸಕರಾದ ಸಿದ್ದರಾಮಯ್ಯ ಅವರು ಈ ಬಾರಿ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿ ಹಬ್ಬಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೋಲಾರದಿಂದ ಚುನಾವಣೆಗೆ ಸ್ಪರ್ಧಿಸಬೇಕು ಎಂಬ ಒತ್ತಾಯವೂ ಇದೆ. ಕಾಂಗ್ರೆಸ್ ನಾಯಕ ವಿ.ಆರ್.ಸುದರ್ಶನ್ ಈ ಕುರಿತು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿದ್ದಾರೆ.












Click it and Unblock the Notifications