ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಇಲ್ಲ: ಯಡಿಯೂರಪ್ಪ
ಕಲಬುರಗಿ, ಸೆಪ್ಟೆಂಬರ್ 17: ಈ ಬಾರಿಯ ಚಳಿಗಾಲದ ಅಧಿವೇಶನವನ್ನು ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಸುವುದಿಲ್ಲ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದರು.
ಕಲಬುರಗಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕದಲ್ಲಿ ಪ್ರವಾಹದಿಂದ ಹಾನಿಯಾಗಿದೆ. ಇಲ್ಲಿನ ಪರಿಸ್ಥಿತಿಯಲ್ಲಿ ಅಧಿವೇಶನ ನಡೆಸುವುದು ಸಾಧ್ಯವಾಗುವುದಿಲ್ಲ. ಹೀಗಾಗಿ ಬೆಂಗಳೂರಿನಲ್ಲಿಯೇ ಚಳಿಗಾಲದ ಅಧಿವೇಶನ ನಡೆಸಲಾಗುವುದು ಎಂದು ಹೇಳಿದರು.
ವಿಧಾನಸಭೆ ಅಧಿವೇಶನ ಅಕ್ಟೋಬರ್ ತಿಂಗಳಿನಲ್ಲಿ ನಡೆಯಲಿದೆ. ವಾಡಿಕೆಯಂತೆ ಪ್ರತಿ ಚಳಿಗಾಲದ ಅಧಿವೇಶನವು ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯಬೇಕಿತ್ತು.
ರಾಜ್ಯ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಹೆಸರು ಅಂತಿಮ: ಅಧಿಕೃತ ಘೋಷಣೆಯೊಂದೇ ಬಾಕಿ
ಯಡಿಯೂರಪ್ಪ ಅವರ ನೇತೃತ್ವದಲ್ಲಿ ಸೋಮವಾರ ನಡೆದ ಹಿರಿಯ ಸಚಿವರ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಬೆಳಗಾವಿ ಜಿಲ್ಲೆ ಪ್ರವಾಹ ಪೀಡಿತವಾಗಿದೆ. ಆಡಳಿತ ಯಂತ್ರ ಅಲ್ಲಿಗೆ ವರ್ಗಾವಣೆಯಾದರೆ ಪರಿಹಾರ ಕಾರ್ಯಾಚರಣೆಗೆ ಅಡ್ಡಿಯಾಗುತ್ತದೆ ಎಂಬ ಕಾರಣಕ್ಕೆ ಬೆಂಗಳೂರಿನಲ್ಲಿಯೇ ಅಧಿವೇಶನ ನಡೆಸಲು ಸರ್ಕಾರ ತೀರ್ಮಾನಿಸಿದೆ.
ಸರ್ಕಾರಕ್ಕೆ ಮುಜುಗರದ ಭಯ
ಈಗಾಗಲೇ ನೆರೆ ಹಾನಿಗೆ ಕೇಂದ್ರ ಸರ್ಕಾರದಿಂದ ಪರಿಹಾರ ಪ್ರಕಟವಾಗದೇ ಇರುವುದಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗಿದೆ. ವಿರೋಧಪಕ್ಷಗಳು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿವೆ. ಅದರ ಜತೆಗೆ ಬೆಳಗಾವಿಯಲ್ಲಿ ಅಧಿವೇಶನ ನಡೆಸದೆ ಇರುವುದು ಅವರಿಗೆ ಅಸ್ತ್ರವಾಗಿ ಸಿಗಲಿದೆ.
ಬೆಳಗಾವಿಯಲ್ಲಿ ಅಧಿವೇಶನ ನಡೆಸಿದರೆ ಪರಿಹಾರ ವಿಳಂಬದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಜನರು ಹೆಚ್ಚಿನ ಪ್ರತಿಭಟನೆಗಳನ್ನು ನಡೆಸುತ್ತಾರೆ. ಇದರಿಂದ ಸರ್ಕಾರ ಮುಜುಗರ ಎದುರಿಸಬೇಕಾಗುತ್ತದೆ ಎನ್ನುವುದು ಕೂಡ ಸರ್ಕಾರದ ಈ ನಿರ್ಧಾರಕ್ಕೆ ಕಾರಣ ಎನ್ನಲಾಗಿದೆ.
ನೆರೆ ಪರಿಹಾರ ಕೋರಿ ಬೆಳಗಾವಿ ರೈತರ ಬಾರುಕೋಲು ಚಳವಳಿ
ಜನರ ಭಯದಿಂದ ಅಧಿವೇಶನ ನಡೆಸುತ್ತಿಲ್ಲ
'ಬೆಳಗಾವಿಯಲ್ಲಿ ನಡೆಯಬೇಕಿದ್ದ ಅಧಿವೇಶನವನ್ನು ಯಡಿಯೂರಪ್ಪ ಸರ್ಕಾರ ಬೆಂಗಳೂರಿಗೆ ವರ್ಗಾಯಿಸಲು ಮುಂದಾಗಿದ್ದು, ಆ ಭಾಗದ ಜನರಿಗೆ ಬಗೆದ ದ್ರೋಹವಾಗಿದೆ. ನೆರೆ, ಬರ ಪೀಡಿತ ಜನರ ಪ್ರತಿರೋಧ, ಪ್ರತಿಭಟನೆ ಎದುರಿಸಲಾಗದ ಭಯದಿಂದ ಅಧಿವೇಶನವನ್ನು ಬೆಳಗಾವಿಯಲ್ಲಿ ನಡೆಸುತ್ತಿಲ್ಲ. ನೀವು ತಪ್ಪು ಮಾಡಿದ್ದೀರಿ. ಹಾಗಾಗಿ ನಿಮಗೆ ಭಯವಾಗುತ್ತಿದೆ' ಎಂದು ಕಾಂಗ್ರೆಸ್ ಟೀಕಿಸಿದೆ.
ಬೇರೆ ಸಂದರ್ಭದಲ್ಲಿ ಅಧಿವೇಶನ
'ನೆರೆ ಹಾವಳಿಯಿಂದಾಗಿ ಬೆಳಗಾವಿಯಲ್ಲಿ ಅಧಿವೇಶನ ನಡೆಸುವುದು ಸಾಧ್ಯವಾಗುತ್ತದೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ಪರಿಶೀಲಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು. ಈಗ ಅಲ್ಲಿ ಅಧಿವೇಶನ ನಡೆಸಲು ಸಾಧ್ಯವಾಗದೆ ಇದ್ದರೆ ಮುಂದಿನ ಬೇರೆ ಸಂದರ್ಭದಲ್ಲಿ ನಡೆಸಬೇಕೇ ಎಂದು ಮುಖ್ಯಮಂತ್ರಿಗಳ ಜತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು' ಎಂದು ಆರ್. ಅಶೋಕ್ ಸೋಮವಾರ ತಿಳಿಸಿದ್ದರು.
ಕೇಂದ್ರ ಸಚಿವರು ಬಂದಿದ್ದರೂ ಉಪಯೋಗವಾಗಿಲ್ಲ
ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪ್ರವಾಹ ಪ್ರದೇಶಗಳ ವೀಕ್ಷಣೆ ಮಾಡಿ ಹೋಗಿದ್ದರೂ ಕನಿಷ್ಠ ಮಧ್ಯಂತರ ಪರಿಹಾರ ಕೂಡ ಬಿಡುಗಡೆ ಮಾಡಿಲ್ಲ. ಇದರಿಂದ ಜನರು ಸರ್ಕಾರದ ವಿರುದ್ಧ ಬೇಸರಗೊಂಡಿದ್ದಾರೆ. ಹೀಗಾಗಿ ಅಲ್ಲಿ ಅಧಿವೇಶನ ನಡೆಸಿದರೆ ಸರ್ಕಾರದ ವಿರುದ್ಧದ ಜನಾಕ್ರೋಶ ವ್ಯಕ್ತವಾಗಲು ವೇದಿಕೆ ಮಾಡಿಕೊಟ್ಟಂತೆ ಆಗುತ್ತದೆ. ಇದು ವಿರೋಧಪಕ್ಷಗಳಿಗೂ ಆಹಾರವಾಗುತ್ತದೆ. ಅದರಿಂದ ಪಾರಾಗಲು ಬೆಂಗಳೂರಿನಲ್ಲಿಯೇ ಅಧಿವೇಶನ ನಡೆಸುವುದು ಸೂಕ್ತ ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಯಿತು ಎನ್ನಲಾಗಿದೆ.