ವಿಶ್ವ ರಕ್ತದಾನಿಗಳ ದಿನ; ಜಿಮ್ಸ್ ನಲ್ಲಿ ರಕ್ತದಾನ ಮಾಡಿದ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್
ಕಲಬುರಗಿ, ಜೂನ್ 14: ವಿಶ್ವ ರಕ್ತದಾನಿಗಳ ದಿನವಾದ ಇಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಅವರು ಕಲಬುರಗಿ ನಗರದ ಜಿಮ್ಸ್ ಆಸ್ಪತ್ರೆಯಲ್ಲಿ ರಕ್ತದಾನ ಮಾಡಿದರು. ಇಂದು ಜಿಲ್ಲಾ ಪ್ರವಾಸದಲ್ಲಿರುವ ಸಚಿವ ಡಾ.ಕೆ.ಸುಧಾಕರ್ ಮತ್ತು ಸಂಸತ್ ಸದಸ್ಯ ಉಮೇಶ್ ಜಾಧವ್ ಅವರು ರಕ್ತದಾನ ಮಾಡುವ ಮೂಲಕ ರಕ್ತದಾನಿಗಳ ದಿನವನ್ನು ಸಾರ್ಥಕವಾಗಿ ಆಚರಿಸಿದರು.
ಇದೇ ಸಂದರ್ಭ ಮಾತನಾಡಿದ ಅವರು, "ಕೊವಿಡ್ ವಿರುದ್ಧ ಹೋರಾಟ ನಡೆಯುತ್ತಿರುವ ಈ ದಿನಗಳಲ್ಲಿ ರಕ್ತನಿಧಿಗಳು ದಾನಿಗಳ ಕೊರತೆ ಎದುರಿಸುತ್ತಿವೆ. ಇಂತಹ ಸಂದರ್ಭದಲ್ಲಿ ನಾನು ರಕ್ತದಾನ ಮಾಡಿದ್ದು ಸಾರ್ಥಕ ಭಾವ ಮೂಡಿಸಿದೆ. ಈ ಕುರಿತು ಜಾಗೃತಿಯನ್ನೂ ಮೂಡಿಸಬೇಕಿದೆ. ಇಂತಹ ಸಂಕಷ್ಟ ಸಂದರ್ಭದಲ್ಲಿ ರಕ್ತದಾನ ಮಾಡುವುದು ಅತ್ಯಂತ ಶ್ರೇಷ್ಟ ಕಾರ್ಯ. ಪ್ರತಿಯೊಬ್ಬರೂ ರಕ್ತದಾನ ಮಾಡುವ ಮೂಲಕ ಜನಪರ ಧೋರಣೆ ತಾಳಬೇಕು" ಎಂದು ಹೇಳಿದರು. ಕಲಬುರಗಿಯಲ್ಲಿ ಕೋವಿಡ್ 19 ಸಭೆಯನ್ನು ನಡೆಸಿದ ಅವರು, ಹಲವು ವಿಷಯಗಳ ಕುರಿತು ಪ್ರಸ್ತಾಪಿಸಿದರು.
"ಗಾಂಧಿ ಜಯಂತಿಯಂದು ಜಿಮ್ಸ್ ಟ್ರಾಮಾ ಸೆಂಟರ್ ಉದ್ಘಾಟನೆ"
ಗುಲ್ಬರ್ಗಾ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ನೂತನವಾಗಿ ನಿರ್ಮಿಸಿರುವ ಟ್ರಾಮಾ ಸೆಂಟರ್ ಅನ್ನು ಮುಂದಿನ ಅಕ್ಟೋಬರ್ ನಲ್ಲಿ ಉದ್ಘಾಟಿಸಲಾಗುವುದು ಎಂದು ಡಾ. ಕೆ. ಸುಧಾಕರ್ ಅವರು ತಿಳಿಸಿದರು. ಜಿಮ್ಸ್ ಗೆ ಭೇಟಿ ನೀಡಿ ಸಂಸ್ಥೆಯ ಕಾರ್ಯ ವೈಖರಿಯನ್ನು ಪರಿಶೀಲಿಸಿ ಮಾತನಾಡಿದ ಅವರು, "ಅಗತ್ಯವಾದ ಎಲ್ಲಾ ಕಾಮಗಾರಿ ಪೂರ್ಣಗೊಳಿಸಿ ಉಪಕರಣಗಳನ್ನು ತರಿಸುವ ಪ್ರಕ್ರಿಯೆ ಪೂರ್ಣ ಗೊಳಿಸಬೇಕು. ಅಗತ್ಯವಿರುವ ಸಿಬ್ಬಂದಿ ವಿವರಗಳನ್ನು ನಿರ್ದೇಶಕರಿಗೆ ಕಳುಹಿಸಿ ಒಪ್ಪಿಗೆ ಪಡೆದು ತ್ವರಿತವಾಗಿ ಟ್ರಾಮಾ ಸೆಂಟರ್ ಕಾರ್ಯಾರಂಭಿಸುವಂತೆ ನೋಡಿಕೊಳ್ಳಬೇಕು. ಬರುವ ಅಕ್ಟೋಬರ್ 2ರ ಗಾಂಧಿ ಜಯಂತಿಯಂದು ಅದನ್ನು ಉದ್ಘಾಟಿಸಲು ಸಿದ್ಧತೆ ಪೂರ್ಣಗೊಳಿಸಬೇಕು" ಎಂದು ಸೂಚಿಸಿದರು.
ರಾಜ್ಯದಲ್ಲಿ ಕೊರೊನಾ ವೈರಸ್ ಬಗ್ಗೆ ಅನಗತ್ಯ ಆತಂಕ ಬೇಡ: ಕಾರಣ?
ಪ್ರೊಫೆಸರ್ ಹುದ್ದೆಗಳ ಭರ್ತಿಗೆ ಸೂಚನೆ
ಇದೇ ಸಂದರ್ಭ, ಖಾಲಿಯಿರುವ 16 ಪ್ರೊಫೆಸರ್ ಹುದ್ದೆಗಳ ಭರ್ತಿಗೆ ತಕ್ಷಣವೇ ಅಧಿಸೂಚನೆ ಹೊರಡಿಸಿ ನೇಮಕ ಪ್ರಕ್ರಿಯೆ ಮುಗಿಸುವಂತೆ ಸೂಚಿಸಿದರು. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ನೇಮಕ ಮಾಡುವುದು ತಡ ಆಗುವುದರಿಂದ ಇಲಾಖೆ ಮೂಲಕವೇ ನೇರ ನೇಮಕ ಮಾಡಿಕೊಳ್ಳಲು ಅನುವಾಗುವಂತೆ ನೇಮಕ ನಿಯಮ ರೂಪಿಸಿ. ಇಲ್ಲವಾದಲ್ಲಿ ಬಹುತೇಕ ಎಲ್ಲ ಕಾಲೇಜುಗಳಲ್ಲಿ ನನೆಗುದಿಗೆ ಬಿದ್ದಿರುವ ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಆಗುವುದಿಲ್ಲ ಎಂದು ಇಲಾಖೆ ನಿರ್ದೇಶಕರಿಗೆ ಸಭೆಯಲ್ಲಿ ಸೂಚನೆ ನೀಡಿದರು. ಹೊರಗುತ್ತಿಗೆ ಸಿಬ್ಬಂದಿಗೆ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯಗೊಳಿಸಬೇಕು. ಹಣಕಾಸು ಅಧಿಕಾರಿ ಹುದ್ದೆ ಖಾಲಿ ಬಿಡಬಾರದು ಅಥವಾ ಪ್ರಭಾರವು ಇರಬಾರದು ಪೂರ್ಣ ಪ್ರಮಾಣದ ಅಧಿಕಾರಿ ನೇಮಕ ಮಾಡಬೇಕು ಎಂದರು.
ನಿರ್ದೇಶಕರನ್ನು ತರಾಟೆಗೆ ತೆಗೆದುಕೊಂಡ ಸಚಿವರು
ಕೋವಿಡ್ ಸಂದರ್ಭದಲ್ಲಿ ಸರಿಯಾಗಿ ಕಾರ್ಯನಿರ್ವಹಿಸದ ಹೌಸ್ ಕೀಪಿಂಗ್ ಸಿಬ್ಬಂದಿಯನ್ನು ಏಕೆ ಇಟ್ಟುಕೊಂಡಿದ್ದೀರಿ? ಸ್ಥಳೀಯರಿಗೆ ಏಕೆ ಅವಕಾಶ ನೀಡಿಲ್ಲ? ಇದರಿಂದ ಕೆಲಸ ಕಾರ್ಯಗಳಿಗೆ ತೊಂದರೆ ಆಗುವುದಿಲ್ಲವೇ ಎಂದು ನಿರ್ದೇಶಕರನ್ನು ತರಾಟೆಗೆ ತೆಗೆದುಕೊಂಡರು. ಕಪ್ಪು ಪಟ್ಟಿಯಲ್ಲಿ ಇದ್ದವರಿಗೆ ರಕ್ಷಣಾ ವ್ಯವಸ್ಥೆಯ ಗುತ್ತಿಗೆ ನೀಡಿರುವ ಆರೋಪಗಳಿವೆ. ಇದನ್ನು ಪರಿಶೀಲಿಸಿ ಹೌಸ್ ಕೀಪಿಂಗ್ ಹೊರಗುತ್ತಿಗೆಗೆ ಸಂಬಂಧಿಸಿದಂತೆ ನಿರ್ದಿಷ್ಟ ನೀತಿ ಜಾರಿಗೆ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು. ಸಂಸದರು ಮತ್ತು ಶಾಸಕರು ಸಭೆಯಲ್ಲಿ ಪ್ರಸ್ತಾಪಿಸಿದ ಕೆಲ ವಿಷಯಗಳ ಆಧಾರದ ಮೇಲೆ ಹೊರಗುತ್ತಿಗೆ ಸಂಸ್ಥೆ ಸಿಬ್ಬಂದಿ ವಿರುದ್ಧದ ಆರೋಪಗಳ ಬಗ್ಗೆ ತನಿಖೆ ನಡೆಸಿ ಕ್ರಮ ಜರುಗಿಸಬೇಕು. ಅದಕ್ಕಾಗಿ ಒಂದು ಸಮಿತಿ ರಚಿಸಲಾಗುವುದು ಎಂದು ತಿಳಿಸಿದರು.
'ಮತ್ತೆ ಲಾಕ್ಡೌನ್ ಪ್ರಶ್ನೆಯೇ ಇಲ್ಲ, ಇದು ಕೇವಲ ಊಹಾಪೋಹ'
"ಗುಣಮಟ್ಟದ ಆರೋಗ್ಯ ಸೇವೆ ಸಿಗಬೇಕು"
ಸೃಜನೆ ಮಾಡಿರುವ 61 ಸ್ಟಾಫ್ ನರ್ಸ್ ಹುದ್ದೆಗಳನ್ನು ಆರೋಗ್ಯ ಇಲಾಖೆಯಿಂದ ಹಸ್ತಾಂತರಿಸುವ ಸಂಬಂಧ ಕ್ರಮ ಜರುಗಿಸಲಾಗುವುದು. ಗುಣಮಟ್ಟದ ಆರೋಗ್ಯ ಸೇವೆ ಜನರಿಗೆ ಸಿಗಬೇಕು ಎಂಬುದು ಚುನಾಯಿತ ಪ್ರತಿನಿಧಿಗಳ ಕಾಳಜಿಯಾಗಿದೆ. ಇದನ್ನು ಎಲ್ಲಾ ಸಿಬ್ಬಂದಿ ಅರ್ಥ ಮಾಡಿಕೊಳ್ಳಬೇಕು ಎಂದರು. ಆಯುಷ್ಮಾನ್ ಭಾರತ್ ಹಾಗೂ ಇತರೆ ಯೋಜನೆಗಳನ್ನು ಪರಿಣಾಮಕಾರಿಯಾಗಿ ಉಪಯೋಗಿಸಿಕೊಂಡರೆ ಸಂಸ್ಥೆಯ ಸ್ವಯಂ ನಿರ್ವಹಣೆ ಸಾಧ್ಯವಿದೆ. ಸಂಸ್ಥೆ ನಮ್ಮದು ಎಂಬ ಭಾವನೆಯಿಂದ ಕೆಲಸ ಮಾಡಿದರೆ ಇದು ಸಾಧ್ಯವಾಗುತ್ತದೆ ಎಂದು ಸಿಬ್ಬಂದಿಗೆ ಕಿವಿಮಾತು ಹೇಳಿದರು. ಸಂಸ್ಥೆ ಕಳಸಪ್ರಾಯವಾಗಿ ಬೆಳವಣಿಗೆ ಹೊಂದಲು ಎಲ್ಲರೂ ಶ್ರಮಿಸಬೇಕು. ಸಕಾರಾತ್ಮಕ ಕೆಲಸಗಳಿಗೆ ಸದಾ ತಮ್ಮ ಬೆಂಬಲ ಇರುತ್ತದೆ ಎಂದರು. ಸಂಸದರಾದ ಡಾ. ಉಮೇಶ್ ಜಾಧವ್, ಶಾಸಕರಾದ ರೇವೂರ, ಬಸವರಾಜ ಮಟ್ಟಿಮಡ್, ಅವಿನಾಶ್ ಜಾಧವ್, ನಿರ್ದೇಶಕ ಡಾ. ಗಿರೀಶ್ ಮತ್ತಿತರ ಅಧಿಕಾರಿಗಳು ಹಾಜರಿದ್ದರು.