ಕಲಬುರಗಿ ವಿಮಾನ ನಿಲ್ದಾಣ ಉದ್ಘಾಟನೆಗೆ ಮೋದಿಗೆ ಆಹ್ವಾನ
ಕಲಬುರಗಿ/ನವದೆಹಲಿ, ಆಗಸ್ಟ್ 16: ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಶುಕ್ರವಾರದಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ, ಕಲಬುರಗಿಯ ಹೊಸ ವಿಮಾನ ನಿಲ್ದಾಣ ಉದ್ಘಾಟನೆ ನೆರವೇರಿಸುವಂತೆ ಆಹ್ವಾನವಿತ್ತಿದ್ದಾರೆ.
ಕರ್ನಾಟಕದ ಉತ್ತರ ಕರ್ನಾಟಕ, ಮಲೆನಾಡು ಹಾಗೂ ಕರಾವಳಿ ಭಾಗದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿನ ಪ್ರವಾಹ ಪರಿಸ್ಥಿತಿ, ಸಚಿವ ಸಂಪುಟ ವಿಸ್ತರಣೆ ಹಾಗೂ ಇನ್ನಿತರ ವಿಷಯಗಳ ಕುರಿತು ಮೋದಿ ಅವರೊಂದಿಗೆ ಸುಮಾರು 40 ನಿಮಿಷಗಳ ಕಾಲ ಯಡಿಯೂರಪ್ಪ ಅವರು ಚರ್ಚೆ ನಡೆಸಿದರು.

ಸಭೆ ನಂತರ ಮಾತನಾಡಿದ ಯಡಿಯೂರಪ್ಪ, "ಕಲಬುರಗಿಯಲ್ಲಿ ನಿರ್ಮಿಸಲಾಗಿರುವ ನೂತನ ವಿಮಾನ ನಿಲ್ದಾಣವನ್ನು ಉದ್ಘಾಟಿಸಲು ಪ್ರಧಾನಿ ಮೋದಿ ಅವರಿಗೆ ಆಹ್ವಾನ ನೀಡಲಾಗಿದೆ, ಸೆಪ್ಟೆಂಬರ್ ತಿಂಗಳಿನಲ್ಲಿ ದಿನಾಂಕ ನಿಗದಿ ಮಾಡುವಂತೆ ಸೂಚಿಸಿದರು" ಎಂದು ಹೇಳಿದರು.
"ಹೈದರಾಬಾದ್ -ಕರ್ನಾಟಕ ಭಾಗದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು, ಸಂವಿಧಾನದ ಕಲಂ 371ಜೆ ಅನ್ವಯ ಸಿಗುವ ವಿಶೇಷ ಸ್ಥಾನಮಾನವನ್ನು ಸಂಪೂರ್ಣವಾಗಿ ಆ ಭಾಗಕ್ಕೆ ಒದಗುವಂತೆ ನೋಡಿಕೊಳ್ಳಲಾಗುವುದು, ಕಲಬುರಗಿಯ ವಿಮಾನ ನಿಲ್ದಾಣವನ್ನು ಕರ್ನಾಟಕ ಸರ್ಕಾರ ಹಾಗೂ ವಿಮಾನ ಅಭಿವೃದ್ಧಿ ಪ್ರಾಧಿಕಾರ(ಎಎಐ) ಜಂಟಿ ಸಹಯೋಗದೊಂದಿಗೆ ನಿರ್ಮಿಸಲಾಗಿದೆ" ಎಂದರು.

ಮೋದಿ ಅವರ ಜೊತೆ ಚರ್ಚೆ ನಡೆಸಿದ ಬಳಿಕ ಕೇಂದ್ರ ವಿಮಾನಯಾನ ಖಾತೆ ರಾಜ್ಯ ಸಚಿವ ಹರ್ದೀಪ್ ಸಿಂಗ್ ಪುರಿ ಅವರೊಂದಿಗೆ ಯಡಿಯೂರಪ್ಪ ಅವರು ಚರ್ಚೆ ನಡೆಸಿದರು. ಎಎಐ ಮೂಲಕ ಪ್ರಕ್ರಿಯೆ ಚುರುಕುಗೊಳಿಸಿ, ಸೆಪ್ಟೆಂಬರ್ ತಿಂಗಳಿನಲ್ಲೇ ಉದ್ಘಾಟನೆಗೆ ಅನುವು ಮಾಡಿಕೊಡಬೇಕು ಎಂದು ಯಡಿಯೂರಪ್ಪ ಕೇಳಿಕೊಂಡಿದ್ದಾರೆ.
"ಕಲಬುರಗಿ ವಿಮಾನ ನಿಲ್ದಾಣದ ನಿರ್ವಹಣೆ ಹೊಣೆಯನ್ನು ವಿಮಾನ ನಿಲ್ದಾಣ ಪ್ರಾಧಿಕಾರವೇ ವಹಿಸಿಕೊಳ್ಳಲಿದೆ. ಈ ಕುರಿತಂತೆ ಎಎಐ ಹಾಗೂ ಕರ್ನಾಟಕ ಸರ್ಕಾರದ ನಡುವೆ ಒಪ್ಪಂದಕ್ಕೆ ಸಹಿ ಹಾಕಲಾಗಿದೆ" ಎಂದು ಯಡಿಯೂರಪ್ಪ ಹೇಳಿದರು.
ಕಲಬುರಗಿ ವಿಮಾನ ನಿಲ್ದಾಣವನ್ನು ಎಎಐ, ಡಿಜಿಸಿಎ ಹಾಗೂ ನಾಗರಿಕ ವಿಮಾನಯಾನ ಭದ್ರತಾ ಪಡೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು, ವಿಮಾನಯಾನಕ್ಕೆ ಸಿದ್ಧತೆ ನಡೆಸುವಂತೆ ನಾಗರಿಕ ವಿಮಾನಯಾನ ಸಚಿವಾಲಯ ಗ್ರೀನ್ ಸಿಗ್ನಲ್ ಕೂಡಾ ಸಿಕ್ಕಿದೆ.(ಪಿಟಿಐ)












Click it and Unblock the Notifications