ಎತ್ತಿನಹೊಳೆ ಯೋಜನೆಗೆ 1,500 ಕೋಟಿ ಅನುದಾನ
ಬೆಂಗಳೂರು, ಮಾ. 31 : ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸುವ ಎತ್ತಿನಹೊಳೆ ಯೋಜನೆಗಾಗಿ ಈ ಆರ್ಥಿಕ ವರ್ಷದಲ್ಲಿ 1,500 ಕೋಟಿ ರೂ. ಖರ್ಚು ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಸೋಮವಾರದ ವಿಧಾನಸಭೆ ಕಲಾಪದಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡಿದ ಮುಖ್ಯಮಂತ್ರಿಗಳು, 'ಎತ್ತಿನಹೊಳೆ ಯೋಜನೆಯನ್ನು ತ್ವರಿತವಾಗಿ ಅನುಷ್ಠಾನಕ್ಕೆ ತರುವುದು ರಾಜ್ಯ ಸರ್ಕಾರದ ಮುಖ್ಯ ಆದ್ಯತೆಯಾಗಿದೆ ಎಂದು ಘೋಷಿಸಿದರು.[ಎತ್ತಿನಹೊಳೆ ಯೋಜನೆ ಕುಡಿಯುವ ನೀರಿಗಾಗಿ ಮಾತ್ರ]

'ಬಜೆಟ್ನಲ್ಲಿ ಎತ್ತಿನಹೊಳೆ ಯೋಜನೆ ಬಗ್ಗೆ ಪ್ರಸ್ತಾಪ ಮಾಡಿಲ್ಲ ಎಂದು ನಮ್ಮ ಪಕ್ಷದ ಶಾಸಕ ರಮೇಶ್ ಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹಿಂದಿನ ಸತತ ಮೂರು ಬಜೆಟ್ನಲ್ಲಿ ಈ ಬಗ್ಗೆ ಪ್ರಸ್ತಾಪ ಮಾಡಲಾಗಿತ್ತು. ಆದ್ದರಿಂದ ಈ ಸಾಲಿನ ಬಜೆಟ್ನಲ್ಲಿ ಈ ಬಗ್ಗೆ ಪ್ರಸ್ತಾಪ ಮಾಡಿಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು. [ನೇತ್ರಾವತಿ ನದಿಗಾಗಿ ದಕ್ಷಿಣ ಕನ್ನಡ ಸಂಪೂರ್ಣ ಬಂದ್]
ಸೆಪ್ಟೆಂಬರ್ನಲ್ಲಿ ಕಾಮಗಾರಿ : ಐದು ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸುವ ಮಹತ್ವದ ಎತ್ತಿನಹೊಳೆ ಯೋಜನೆಗಾಗಿ ಇದುವರೆಗೆ 1,100 ಕೋಟಿ ಖರ್ಚು ಮಾಡಲಾಗಿದೆ. ಬೆಂಗಳೂರಲ್ಲಿ ಬಳಕೆಯಾದ ನೀರನ್ನು ಸಂಸ್ಕರಿಸಿ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕೆರೆಗಳನ್ನು ತುಂಬುವ ಕಾಮಗಾರಿಯನ್ನು 2015ರ ಸೆಪ್ಟೆಂಬರ್ನಲ್ಲಿ ಆರಂಭಿಸಲಾಗುತ್ತದೆ ಎಂದರು. [ಎತ್ತಿನಹೊಳೆ ಯೋಜನೆಗೆ ಸರ್ಕಾರದ ಹಸಿರು ನಿಶಾನೆ]
ಆಗಸ್ಟ್ನಲ್ಲಿ ಟೆಂಡರ್ : ಎತ್ತಿನಹೊಳೆ ಯೋಜನೆಯ ಕುರಿತ ವಿವರವಾದ ಯೋಜನೆ ಸಿದ್ಧಪಡಿಸುವಂತೆ ನಿಕೇತನ ಎನ್ನುವ ಸಂಸ್ಥೆಗೆ ಸೂಚನೆ ನೀಡಲಾಗಿದೆ. ಜೂನ್ನಲ್ಲಿ ಈ ವರದಿ ಕೈ ಸೇರಲಿದ್ದು, ಆಗಸ್ಟ್ ಅಂತ್ಯದಲ್ಲಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಲಾಗುತ್ತದೆ ಎಂದು ಮುಖ್ಯಮಂತ್ರಿಗಳು ಹೇಳಿದರು.
ಏನಿದು ಯೋಜನೆ : ಬಯಲುಸೀಮೆ ಜಿಲ್ಲೆಗಳಿಗೆ ಪಶ್ಚಿಮಘಟ್ಟದ ನದಿಗಳಿಂದ ನೀರು ತರುವ ಯೋಜನೆ ಇದಾಗಿದೆ. ಈ ಯೋಜನೆ ಮೂಲಕ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು ಜಿಲ್ಲೆಗಳಿಗೆ 24 ಟಿಎಂಸಿ ನೀರನ್ನು ಹಂಚಲಾಗುತ್ತದೆ.
ಕರಾವಳಿ ಭಾಗದ ಜನರ ತೀವ್ರ ವಿರೋಧದ ನಡುವೆಯೇ ಬಯಲುಸೀಮೆಯ ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸುವ ಮಹತ್ವಾಕಾಂಕ್ಷಿ ಎತ್ತಿನಹೊಳೆ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಿಕ್ಕಬಳ್ಳಾಪುರದಲ್ಲಿ 2014ರ ಮಾ.3ರಂದು ಶಂಕುಸ್ಥಾಪನೆ ಮಾಡಿದ್ದರು.












Click it and Unblock the Notifications